ADVERTISEMENT

ಕನ್ನಡ ಧ್ವಜಕ್ಕೆ ಒತ್ತಾಯಿಸಿ ಪ್ರತಿಭಟನೆ

ಬಿ.ಎಸ್. ಯಡಿಯೂರಪ್ಪ ಅವರ ಪ್ರತಿಕೃತಿ ದಹಿಸಿ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 20 ಜುಲೈ 2017, 8:32 IST
Last Updated 20 ಜುಲೈ 2017, 8:32 IST
ರಾಮನಗರದ ಐಜೂರು ವೃತ್ತದಲ್ಲಿ ಬುಧವಾರ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಪದಾಧಿಕಾರಿಗಳು ಯಡಿಯೂರಪ್ಪ ಅವರ ಪ್ರತಿಕೃತಿ ದಹಿಸಿ ಪ್ರತಿಭಟಿಸಿದರು
ರಾಮನಗರದ ಐಜೂರು ವೃತ್ತದಲ್ಲಿ ಬುಧವಾರ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಪದಾಧಿಕಾರಿಗಳು ಯಡಿಯೂರಪ್ಪ ಅವರ ಪ್ರತಿಕೃತಿ ದಹಿಸಿ ಪ್ರತಿಭಟಿಸಿದರು   

ರಾಮನಗರ: ರಾಜ್ಯಕ್ಕೆ ಪ್ರತ್ಯೇಕ ಧ್ವಜ ಇರಬೇಕು ಎಂದು ಒತ್ತಾಯಿಸಿ ನಗರದ ಐಜೂರು ವೃತ್ತದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಪದಾಧಿಕಾರಿಗಳು ಬುಧವಾರ ಪ್ರತಿಭಟಿಸಿದರು.

ಪ್ರತ್ಯೇಕ ಕನ್ನಡ ಧ್ವಜಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಪ್ರತಿಕೃತಿ ದಹಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

‘ಸಾವಿರಾರು ವರ್ಷಗಳ ಇತಿಹಾಸವಿರುವ, ವಿಸ್ತಾರವಾದ ಭೂಪ್ರದೇಶವನ್ನು ಹೊಂದಿರುವ ಕರ್ನಾಟಕಕ್ಕೆ ಪ್ರತ್ಯೇಕ ಧ್ವಜವನ್ನು ನೀಡಬೇಕು. ಕೂಡಲೆ ಸಂವಿಧಾನದ ಮಾನದಂಡಗಳ ಆಧಾರದ ಮೇಲೆ ರಾಜ್ಯಕ್ಕೆ ಅಧಿಕೃತ ಧ್ವಜ ನೀಡಬೇಕು’ ಎಂದು ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಬೇವೂರು ಯೋಗೀಶ್‌ಗೌಡ ಒತ್ತಾಯಿಸಿದರು.

ADVERTISEMENT

‘ಕೇಂದ್ರ ಸರ್ಕಾರ ಈಗಾಗಲೇ ಬಲವಂತವಾಗಿ ಹಿಂದಿ ಹೇರಿಕೆ ಮಾಡಲು ಮುಂದಾಗಿದೆ. ಇಂತಹ ಪರಿಸ್ಥಿತಿಯಲ್ಲಿ  ಕನ್ನಡದ ಉಳಿವಿಗೆ ಅಧಿಕೃತ ರಾಜ್ಯ ಧ್ವಜ ಹೊಂದಿದರೆ ತಪ್ಪಾಗುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಉತ್ತಮ ನಿರ್ಧಾರ ತೆಗೆದುಕೊಂಡಿದ್ದಾರೆ’ ಎಂದು ಶ್ಲಾಘಿಸಿದರು.

‘ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ಈಗಿರುವ ಧ್ವಜವನ್ನು ಅಂಗೀಕರಿಸಬೇಕು. ಕನ್ನಡ ನಾಡಿನ ಮೇಲೆ ಮಲತಾಯಿ ಧೋರಣೆ ಅನುಸರಿಸುತ್ತಿರುವ ಕೇಂದ್ರ ಸರ್ಕಾರ ತನ್ನ ನಿಲುವನ್ನು ಬದಲಾಯಿಸಿಕೊಳ್ಳಬೇಕು. ಇದಕ್ಕೆ ಸಂಬಂಧಿಸಿದಂತೆ ಎಲ್ಲಾ ಕನ್ನಡ ಪರ ಸಂಘಟನೆಗಳು ಒಂದಾಗಿ ಹೋರಾಟ ಮಾಡಬೇಕಾಗಿದೆ’ ಎಂದು ತಿಳಿಸಿದರು.

ವೇದಿಕೆಯ ರಾಜ್ಯ ಕಾರ್ಯದರ್ಶಿಗಳಾದ ಕೃಷ್ಣೇಗೌಡ, ಜಯರಾಂರೆಡ್ಡಿ, ಪದಾಧಿಕಾರಿಗಳಾದ ರಂಜಿತ್‌ಗೌಡ, ಶಿವಣ್ಣ, ಕಿರಣ್‌ಸಿಂಗ್, ರಾಂಪುರ ಸತೀಶ್, ರಾಮೇಗೌಡ, ನಾಗರಾಜ್, ಶಿವಣ್ಣ, ಮಾದೇವಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.