ADVERTISEMENT

ನಾಳೆ ಗುರುವಂದನಾ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2015, 10:01 IST
Last Updated 4 ಆಗಸ್ಟ್ 2015, 10:01 IST

ರಾಮನಗರ: ನಾಡಪ್ರಭು ಕೆಂಪೇಗೌಡ ಅಭಿವೃದ್ದಿ ವೇದಿಕೆಯು ಕೆಂಪೇಗೌಡ ಅವರ  506 ನೇ ಜಯಂತಿ ಮತ್ತು ಆದಿ ಚುಂಚನಗಿರಿ ಮಠಾಧೀಶ ನಿರ್ಮಲಾ ನಂದ ಸ್ವಾಮೀಜಿ ಅವರ ಗುರುವಂದನಾ ಕಾರ್ಯಕ್ರಮವನ್ನು ಆಗಸ್ಟ 5 ರಂದು ನಗರದಲ್ಲಿ  ಹಮ್ಮಿಕೊಂಡಿದೆ.

ಈ ಕುರಿತು ಅರ್ಚಕರಹಳ್ಳಿಯಲ್ಲಿನ ಆದಿಚುಂಚನಗಿರಿ ಶಾಖಾ ಮಠದ ಮುಖ್ಯಸ್ಥ ಅನ್ನದಾನೇಶ್ವರ ಸ್ವಾಮೀಜಿ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಜೆ 6 ಗಂಟೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಆದಿ ಚುಂಚನಗಿರಿ ಮಹಾಸಂಸ್ಥಾನದ  ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯವಹಿಸುವರು. ಕಾರ್ಯಕ್ರಮವನ್ನು ಕೀರಣಗೆರೆ ಜಗದೀಶ್ ಉದ್ಘಾಟಿಸುವರು.

ಅಧ್ಯಕ್ಷತೆಯನ್ನು ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಡಾ.ಎಚ್.ಎಂ.ಕೃಷ್ಣಮೂರ್ತಿವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ. ಸುರೇಶ್, ಶಾಸಕರುಗಳಾದ ಎಚ್‌.ಡಿ. ಕುಮಾರಸ್ವಾಮಿ, ಎಚ್.ಸಿ.ಬಾಲಕೃಷ್ಣ, ಸಿ.ಪಿ.ಯೋಗೇಶ್ವರ್ ಸೇರಿದಂತೆ ವಿಧಾನ ಪರಿಷತ್ ಸದಸ್ಯರು, ಎಲ್ಲ ಜನಪ್ರತಿನಿಧಿಗಳು ಭಾಗವಹಿಸುವರು ಎಂದು ಮಾಹಿತಿ ನೀಡಿದರು.

ವೇದಿಕೆಯ ರಾಮನಗರ ತಾಲ್ಲೂಕು ಘಟಕದ ಅಧ್ಯಕ್ಷ ಪ್ರವೀಣ್ ಗೌಡ ಮಾತನಾಡಿ, ಇದೇ ಸಂದರ್ಭದಲ್ಲಿ ಸಂಗೀತ ನಿರ್ದೇಶಕ ಕೆ.ಎಂ.ಇಂದ್ರ, ಪಳನಿ.ಡಿ.ಸೇನಾಪತಿ, ರಮೇಶ್‌ಚಂದ್ರ, ಲತಾ ಹಂಸಲೇಖ, ಸಂತೋಷ್, ನಾಗಚಂದ್ರಿಕಾ, ಮುನಿರಾಜು, ಅರ್ಚನಾ ರವಿ ಅವರ ನೇತೃತ್ವದ ಸಕಲ ಸಂಗೀತ ಸಂಕುಲ ತಂಡದಿಂದ ರಸಮಂಜರಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು. ಬಿ.ಟಿ.ದಿನೇಶ್, ನವೀನ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

ಮನವಿ: ‘ಸಮಸ್ಯೆಗಳಿಗೆ ಸಾವು ಪರಿಹಾರವಲ್ಲ, ನಿಮ್ಮೊಡನೆ ನಾವಿ ದ್ದೇವೆ, ಆತ್ಮಹತ್ಯೆ ಮಾಡಿಕೊಳ್ಳುವುದು ಸರಿಯಲ್ಲ’ ಎಂದು ಅನ್ನದಾನೇಶ್ವರ ಸ್ವಾಮೀಜಿ ರೈತ ಸಮುದಾಯಕ್ಕೆ ಮನವಿ ಮಾಡಿದರು.

ರೈತರು ಸಮಸ್ಯೆಗಳಿಗೆ ಹೆದರಿ ಆತ್ಮಹತ್ಯೆಗೆ ಮುಂದಾಗಬಾರದು. ಸಮಸ್ಯೆಗಳಿಗೆ ಪರಿಹಾರವಿದೆ. ಆತ್ಮಹತ್ಯೆ ಮಾಡಿಕೊಳ್ಳುವುದರಿಂದ ಆತನ ಕುಟುಂಬಕ್ಕೆ ಮತ್ತೂ ತೊಂದರೆಯಾಗುತ್ತದೆಯೇ ಹೊರತು, ಸಮಸ್ಯೆ ನೀಗುವುದಿಲ್ಲ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.