ADVERTISEMENT

ಪಾದರಹಳ್ಳಿಯಲ್ಲಿ ಎನ್‌ಎಸ್‌ಎಸ್‌ ಶಿಬಿರ

ಸಮರ್ಪಕವಾಗಿ ಅನುಷ್ಠಾನವಾಗದ ಸ್ವಚ್ಛತಾ ಅಭಿಯಾನ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2015, 10:54 IST
Last Updated 9 ಅಕ್ಟೋಬರ್ 2015, 10:54 IST

ರಾಮನಗರ: ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿ ಮತ್ತು ಸ್ವಚ್ಛತೆಗಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದರೂ ಅವುಗಳು ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಎಚ್‌.ಎಲ್‌.ಚಂದ್ರು ಬೇಸರ ವ್ಯಕ್ತಪಡಿಸಿದರು.

ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ತಾಲ್ಲೂಕಿನ ಪಾದರಹಳ್ಳಿಯಲ್ಲಿ ಹಮ್ಮಿಕೊಂಡಿರುವ  ಎನ್ಎಸ್ಎಸ್ ವಿಶೇಷ ಶಿಬಿರವನ್ನು ಇತ್ತೀಚೆಗೆ ಉದ್ಘಾಟಿಸಿ ಅವರು ಮಾತನಾಡಿದರು. ಇಂತಹ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಒಂದು ಭಾಗವಾಗಿ ಗ್ರಾಮಗಳಲ್ಲಿ ಸ್ವಚ್ಛತಾ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಸಂತೋಷದ ವಿಚಾರವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಸ್ವಚ್ಛ ಗ್ರಾಮ, ಗ್ರಾಮ ಸ್ವರಾಜ್ಯ, ರಾಮ ರಾಜ್ಯ ಇವುಗಳು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಕನಸು. ಅದನ್ನು ನನಸಾಗಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಅವರು ಹೇಳಿದರು. ಮನೆಯ ಸುತ್ತಮುತ್ತ ಮಾತ್ರವಲ್ಲದೆ ಗ್ರಾಮದ ಅಭಿವೃದ್ಧಿಯತ್ತಲೂ ಯುವ ಜನರು ಹೆಚ್ಚು ಗಮನಹರಿಸಬೇಕು. ಜತೆಗೆ ಇಡೀ ಗ್ರಾಮವನ್ನು ಮಾದರಿಯನ್ನಾಗಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಭಾರತಿ ಮಾತನಾಡಿ, ಗಾಂಧೀಜಿ ಅವರ ಗ್ರಾಮ ಸ್ವರಾಜ್ಯವನ್ನು ಒಬ್ಬ ವ್ಯಕ್ತಿಯಿಂದ ಮಾಡಲು ಸಾಧ್ಯವಿಲ್ಲ. ಇದಕ್ಕೆ ವ್ಯವಸ್ಥೆ ಮತ್ತು ಸಮುದಾಯ ಕೈಜೋಡಿಸಬೇಕು ಎಂದು ಅವರು  ಅಭಿಪ್ರಾಯಪಟ್ಟರು. ಹರೀಸಂದ್ರ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಚಂದ್ರಶೇಖರ್, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಎಸ್.ಎಲ್.ವನರಾಜು, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎಚ್.ಪ್ರಕಾಶ್, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ರಾಮಕೃಷ್ಣಯ್ಯ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಹರೀಸಂದ್ರ ಗ್ರಾ.ಪಂ ಅಧ್ಯಕ್ಷೆ ಲಕ್ಷ್ಮಮ್ಮ, ಉಪಾಧ್ಯಕ್ಷೆ ಜಯಮ್ಮ, ಸದಸ್ಯರಾದ ಪುಟ್ಟೇಗೌಡ, ಪ್ರಮೀಳಾ, ವೆಂಕಟಮ್ಮ, ಗ್ರಾಮದ ಮುಖ್ಯಸ್ಥರಾದ ಜೆ.ರವಿ. ಶಿವರಾಜು, ವೀರೇಗೌಡ, ಮೋಹನರಾಂ ಮನ್ನಾರ್, ಪಾದ್ರಳ್ಳಿ ರಾಜು, ಎನ್ಎಸ್ಎಸ್ ಶಿಬಿರಾಧಿಕಾರಿಗಳಾದ ಎಂ.ಪಿ.ವಿಜಯ, ಸತ್ಯಾನಂದ ಮತ್ತಿತರರು ಉಪಸ್ಥಿತರಿದ್ದರು. ಎನ್ಎಸ್ಎಸ್ ವಿದ್ಯಾರ್ಥಿಗಳಿಗೆ ಶಿಲ್ಹಾಂದರ ರೆಸಾರ್ಟ್‌ನ ವ್ಯವಸ್ಥಾಪಕ ನಿರ್ದೇಶಕ ಸಾ.ನ.ರಮೇಶ್ ಅವರು ನೀಡಿದ ಸಮವಸ್ತ್ರಗಳನ್ನು ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.