ADVERTISEMENT

ಮಹಿಳೆಯರಿಗೆ ದೊರೆಯದ ಸ್ಥಾನಮಾನ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2015, 10:36 IST
Last Updated 1 ಏಪ್ರಿಲ್ 2015, 10:36 IST

ರಾಮನಗರ: ಮಹಿಳೆಯನ್ನು ಎರಡನೆಯ ದರ್ಜೆಯ ನಾಗರಿಕಳನ್ನಾಗಿಯೇ ನೋಡುವ ಮನಸ್ಥಿತಿ ಇನ್ನೂ ಬದಲಾಗಿಲ್ಲ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ಅಸಮಾಧಾನ ವ್ಯಕ್ತಪಡಿಸಿದರು.

ಜಾನಪದ ಲೋಕದ ಸಮೀಪವಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿ ಹಾಗೂ ಕ್ರೀಡಾ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದ ವಿವಿಧೆಡೆ ದೌರ್ಜನ್ಯ, ದಬ್ಬಾಳಿಕೆ, ಅತ್ಯಾಚಾರದಂತಹ ಪ್ರಕರಣಗಳು ನಡೆಯುತ್ತಿವೆ. ಮಹಿಳೆಯರನ್ನು ರಕ್ಷಿಸಲು ಹಲವು ಕಾನೂನುಗಳಿದ್ದರೂ ನಿರಂತರವಾಗಿ ಇಂತಹ ಪ್ರಕರಣಗಳು ನಡೆಯುತ್ತಿವೆ  ಎಂದು ಆತಂಕ ವ್ಯಕ್ತಪಡಿಸಿದರು.

ಇಂದು ಮಕ್ಕಳಿಗೆ ನೀಡುತ್ತಿರುವ ಶಿಕ್ಷಣ ಉದ್ಯೋಗಕ್ಕಷ್ಟೆ ಸೀಮಿತವಾಗಿದೆ. ಇದರಿಂದ ಸಾಮಾಜಿಕ, ಶೈಕ್ಷಣಿಕ ಮೌಲ್ಯಗಳು ಕುಸಿತವಾಗುತ್ತಿವೆ. ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಹಲವರು ಉನ್ನತ ಸ್ಥಾನಮಾನಗಳನ್ನು ಅಲಂಕರಿಸಿದ್ದಾರೆ ಎಂದು ಅವರು ಹೇಳಿದರು.

ಬದುಕುವ ಆತ್ಮಸ್ಥೈರ್ಯವನ್ನು, ಶಿಸ್ತು, ಸಂಯಮವನ್ನು ಸರ್ಕಾರಿ ಶಾಲೆಗಳು ಕಲಿಸುತ್ತವೆ. ಆದರೆ ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳು ಒತ್ತಡಕ್ಕೆ, ಖಿನ್ನತೆಗೆ ಒಳಗಾಗಿ ತಮ್ಮ ಅಮೂಲ್ಯವಾದ ಬದುಕನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಐಟಿಬಿಟಿ ಕ್ಷೇತ್ರದಲ್ಲಿ ಲಕ್ಷಾಂತರ ರೂಪಾಯಿ ವೇತನ ಪಡೆಯುತ್ತಿದ್ದರೂ ಒತ್ತಡಕ್ಕೆ ಒಳಗಾಗಿ ಸಹನೆಯನ್ನು ಕಳೆದುಕೊಂಡು ವಿವಾಹ ವಿಚ್ಛೇದನವನ್ನು ಪಡೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದು ತೇರ್ಗಡೆಯಾಗುವ ಇವರು ಜೀವನದ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ ಎಂದು ಅವರು ತಿಳಿಸಿದರು.

ವಿದ್ಯೆಯ ಜತೆಗೆ ಮೌಲ್ಯಗಳನ್ನು ಕಲಿಯಬೇಕಿದೆ. ಚಲನಶೀಲತೆ ಇದ್ದರೆ ಮಾತ್ರ ಜೀವನದಲ್ಲಿ ಯಶಸ್ಸನ್ನು ಗಳಿಸಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಜಿ.ಪುಂಡರೀಕ, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಎಲ್. ಚಂದ್ರಶೇಖರ್ ಮಾತನಾಡಿದರು. ವಿದ್ಯಾರ್ಥಿನಿ ರಶ್ಮಿತಾ ಪ್ರಾರ್ಥಿಸಿದರು. ಉಪನ್ಯಾಸಕಿ ನಂದನಾ ಸ್ವಾಗತಿಸಿದರು.
ಉಪನ್ಯಾಸಕಿ ವೈ.ಎಚ್. ಪೂರ್ಣಿಮಾ  ಕಾಲೇಜಿನ ಚಟುವಟಿಕೆಗಳ ವರದಿ ಓದಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.