ADVERTISEMENT

ಹಾರೋಹಳ್ಳಿ ಗ್ರಾ.ಪಂನಲ್ಲಿ ಅವ್ಯವಹಾರ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2015, 10:46 IST
Last Updated 21 ಏಪ್ರಿಲ್ 2015, 10:46 IST

ಕನಕಪುರ: ಹಾರೋಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಲ್ಲಿ ಲಕ್ಷಾಂತರ ರೂಪಾಯಿ ಅಕ್ರಮವಾಗಿದ್ದು, ಲೋಕಾಯುಕ್ತ ತನಿಖೆಯಾಗಬೇಕೆಂದು ಜಯಕರ್ನಾಟಕ ಸಂಘಟನೆಯ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕುಮಾರಸ್ವಾಮಿ ಒತ್ತಾಯಿಸಿದರು.

ತಾಲ್ಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ಪಂಚಾಯಿತಿ ವೈಪಲ್ಯ ಕುರಿತು ಜಯಕರ್ನಾಟಕ ಸಂಘಟನೆಯ ಹೋಬಳಿ ಘಟಕವು ಸೋಮವಾರ ನಡೆಸಿದ ಪ್ರತಿಭಟನೆಯ ನೇತೃತ್ವಹಿಸಿ ಅವರು ಮಾತನಾಡಿದರು.

ಹಾರೋಹಳ್ಳಿ ಗ್ರಾಮ ಪಂಚಾಯಿತಿಯು ತಾಲ್ಲೂಕಿನಲ್ಲಿಯೇ ನಂಬರ್ 1 ಪಂಚಾಯಿತಿಯಾಗಿದೆ, ಪಂಚಾಯಿತಿಯಿಂದ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿದ್ದರೂ ಪಂಚಾಯಿತಿಯಲ್ಲಿ ಅಗತ್ಯ ಮೂಲ ಸೌಕರ್ಯಗಳ ಕೊರೆತೆ ಎದ್ದು ಕಾಣುತ್ತಿದೆ. ಇದಕ್ಕೆ ಅಧಿಕಾರಿಗಳ ವೈಫಲ್ಯವೇ ಕಾರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಪಂಚಾಯಿತಿಯಲ್ಲಿ ಈ ಹಿಂದೆ ಕರ್ತವ್ಯ ನಿರ್ವಹಿಸಿದ ಪಿ.ಡಿ.ಒ. ಲಕ್ಷಾಂತರ ರೂಪಾಯಿ ಅಕ್ರಮವೆಸಗಿ ಅಮಾನತ್ತುಗೊಂಡಿದ್ದಾರೆ. ಅಮಾನತ್ತು ನಂತರವು ಪಂಚಾಯಿತಿ ದಾಖಲೆ ಪತ್ರಗಳನ್ನು ಅಧಿಕಾರಿಗೆ ವರ್ಗಾಯಿಸಿರುವುದಿಲ್ಲ, ಅವರ ವಿರುದ್ದ ಶಿಸ್ತು ಕ್ರಮಕೈಗೊಂಡು ಸೇವೇಯಿಂದಲೇ ವಜಾಗೊಳಿಸಬೇಕು, ಅವರ ಸೇವಾ ಅವಧಿಯಲ್ಲಿ ನಡೆದಿರುವ ಅಕ್ರಮಗಳನ್ನು ಲೋಕಾಯುಕ್ತ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿದರು.

ಸಂಘಟನೆಯ ಪದಾಧಿಕಾರಿಗಳು ಬಸ್ ನಿಲ್ದಾಣದ ಸರ್ಕಲ್‌ನಲ್ಲಿ ಜಮಾಯಿಸಿ ಪಂಚಾಯಿತಿ  ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ದ ಘೋಷಣೆಗಳನ್ನು ಕೂಗಿ ಪಂಚಾಯಿತಿಯಲ್ಲಿ ನಡೆದಿರುವ ಅವ್ಯವಹಾರವನ್ನು ಲೋಕಾಯುಕ್ತ ತನಿಖೆಗೆ ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.