ADVERTISEMENT

ಚನ್ನಪಟ್ಟಣ: 21ರಂದು ರೈತರ ಬೃಹತ್ ಸಮಾವೇಶ

ಕೃಷಿ ಕಾಯ್ದೆ ವಾ‍ಪಸ್‌: ರಾಜ್ಯ ಸರ್ಕಾರಕ್ಕೆ ರೈತ ಸಂಘದ ಒತ್ತಾಯ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2022, 4:50 IST
Last Updated 16 ಏಪ್ರಿಲ್ 2022, 4:50 IST
ಚನ್ನಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ರೈತ ಸಂಘ ಹಾಗೂ ಹಸಿರು ಸೇನೆಯ ರಾಮನಗರ ಜಿಲ್ಲಾ ಸಮಿತಿ ಅಧ್ಯಕ್ಷ ಚಂದ್ರಶೇಖರ್ ರೈತ ಸಮಾವೇಶದ ಭಿತ್ತಿಪತ್ರ ಪ್ರದರ್ಶಿಸಿದರು. ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಅನಸೂಯಮ್ಮ, ಜಿಲ್ಲಾ ಕಾರ್ಯಾಧ್ಯಕ್ಷ ರಮೇಶ ಅಮ್ಮಳ್ಳಿದೊಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಣ್ಣ ಹಾಜರಿದ್ದರು
ಚನ್ನಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ರೈತ ಸಂಘ ಹಾಗೂ ಹಸಿರು ಸೇನೆಯ ರಾಮನಗರ ಜಿಲ್ಲಾ ಸಮಿತಿ ಅಧ್ಯಕ್ಷ ಚಂದ್ರಶೇಖರ್ ರೈತ ಸಮಾವೇಶದ ಭಿತ್ತಿಪತ್ರ ಪ್ರದರ್ಶಿಸಿದರು. ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಅನಸೂಯಮ್ಮ, ಜಿಲ್ಲಾ ಕಾರ್ಯಾಧ್ಯಕ್ಷ ರಮೇಶ ಅಮ್ಮಳ್ಳಿದೊಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಣ್ಣ ಹಾಜರಿದ್ದರು   

ಚನ್ನಪಟ್ಟಣ: ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಜಾಗೊಳಿಸುವಂತೆ ಆಗ್ರಹಿಸಿ ಏ. 21ರಂದು ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ರೈತರಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘ ಹಾಗೂ ಹಸಿರು ಸೇನೆಯ ರಾಮನಗರ ಜಿಲ್ಲಾ ಸಮಿತಿ ಅಧ್ಯಕ್ಷ ಚಂದ್ರಶೇಖರ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ರೈತ ಸಂಘ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಂತಹ ಕೃಷಿ ಕಾಯ್ದೆಗಳನ್ನು ರೈತರ ನಿರಂತರ ಹೋರಾಟದ ಫಲವಾಗಿ ವಾಪಸ್ ಪಡೆದಿದೆ. ಆದರೆ, ಕಾಯ್ದೆಗಳನ್ನು ರಾಜ್ಯ ಸರ್ಕಾರ ವಾಪಸ್ ಪಡೆಯುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿವೇಶನ ಮುಗಿದ ನಂತರ ವಾಪಸ್ ಪಡೆಯುವುದಾಗಿ ಭರವಸೆ ನೀಡಿದ್ದರು. ಈ ತನಕ ಪಡೆದಿಲ್ಲ. ಹಾಗಾಗಿ, ರೈತ ಸಂಘ ಬೃಹತ್ ಸಮಾವೇಶ ನಡೆಸಲಾಗುತ್ತಿದೆ ಎಂದರು.

ADVERTISEMENT

ಬಿಜೆಪಿ ಸರ್ಕಾರ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ. ರಾಗಿ, ಭತ್ತ, ತೊಗರಿ, ಜೋಳ ಖರೀದಿ ಕೇಂದ್ರಗಳನ್ನು ಮುಚ್ಚಿ ರೈತರನ್ನು ಸಂದಿಗ್ಧ ಸ್ಥಿತಿಗೆ ಸಿಲುಕಿಸಿದೆ. ರೈತರಿಗೆ ರಾಷ್ಟ್ರೀಯ ವಿಪತ್ತಿನಡಿ ಕೊಡಬೇಕಾದ ನಷ್ಟದ ಹಣ ನೀಡಿಲ್ಲ. ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಸಿಗುತ್ತಿಲ್ಲ. ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಕೂಡ ಮೀನಮೇಷ ಎಣಿಸುತ್ತಿದೆ. ಈ ಎಲ್ಲಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಲಾಗುವುದು ಎಂದು ತಿಳಿಸಿದರು.

ರಾಜ್ಯದ ಕಲಬುರಗಿ, ರಾಯಚೂರು, ಧಾರವಾಡ, ಬಳ್ಳಾರಿ, ಮಂಡ್ಯ, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ರೈತರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ರಾಮನಗರ ಜಿಲ್ಲೆಯಿಂದ ಐದು ಸಾವಿರ ರೈತರು ಪಾಲ್ಗೊಳ್ಳಲಿದ್ದಾರೆ ಎಂದರು.

ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಅನಸೂಯಮ್ಮ, ಜಿಲ್ಲಾ ಕಾರ್ಯಾಧ್ಯಕ್ಷ ರಮೇಶ ಅಮ್ಮಳ್ಳಿದೊಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಣ್ಣ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಸುನೀತಾ, ಮುಖಂಡರಾದ ಕಾಂತರಾಜು, ಕೃಷ್ಣಪ್ಪ ಬ್ಯಾಡರಹಳ್ಳಿ, ರಾಮಣ್ಣ, ತಾಲ್ಲೂಕು ಅಧ್ಯಕ್ಷ ಶಿವರುದ್ರಯ್ಯ, ತಾಲ್ಲೂಕು ಕಾರ್ಯಾಧ್ಯಕ್ಷ ಕೆಂಚಪ್ಪ, ದೇವರಾಜ, ಶಂಕರ, ರತ್ನದಾಸ್, ಸಿಂಗರಾಜಿಪುರ ದೇವರಾಜ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.