ADVERTISEMENT

ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಆದ್ಯತೆ

ಸಾಗರ: ಸಮುದಾಯ ಭವನ ಉದ್ಘಾಟಿಸಿದ ಶಾಸಕ ಮಧು ಬಂಗಾರಪ್ಪ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2017, 7:44 IST
Last Updated 4 ಫೆಬ್ರುವರಿ 2017, 7:44 IST
ಸಾಗರ: ‘ಈ ವರ್ಷದ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೀವ್ರ ಸಮಸ್ಯೆ ಉಂಟಾಗಬಹುದು ಎಂದು ಅಂದಾಜಿಸಲಾಗಿದ್ದು, ತಾಳಗುಪ್ಪ ಹೋಬಳಿಯ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಲಾಗುವುದು’ ಎಂದು ಶಾಸಕ ಮಧು ಬಂಗಾರಪ್ಪ ಹೇಳಿದರು.
 
ತಾಲ್ಲೂಕಿನ ತಾಳಗುಪ್ಪ ಸಮೀಪದ ಗಿಳಿಗಾರು ಗ್ರಾಮದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಸಮುದಾಯ ಭವನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
 
‘ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಕಾಡಬಹುದಾದ ಗ್ರಾಮಗಳನ್ನು ಈಗಾಗಲೇ ಗುರುತಿಸ ಲಾಗಿದ್ದು, ಕೊಳವೆ ಬಾವಿಗಳಿಂದ ಸಂಗ್ರಹವಾಗುವ ನೀರನ್ನು ಪೈಪ್‌ಲೈನ್‌ ಮೂಲಕ ಪೂರೈಸಲಾಗುವುದು’ ಎಂದು ಭರವಸೆ ನೀಡಿದರು. 
 
‘ತಾಳಗುಪ್ಪ ಹೋಬಳಿಯಲ್ಲಿ ರಸ್ತೆ, ಸೇತುವೆ, ವಿವಿಧ ಸರ್ಕಾರಿ ಕಟ್ಟಡಗಳ ಕಾಮಗಾರಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸುವಲ್ಲಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ಸಹಕಾರ ನೀಡುತ್ತಿದ್ದಾರೆ. ಈ ಎಲ್ಲಾ ಕೆಲಸಗಳ ಕಾಮಗಾರಿಗಳ ಗುಣಮಟ್ಟವನ್ನು ಕಾಯ್ದುಕೊಳ್ಳಲು ಆದ್ಯತೆ ನೀಡಲಾಗುವುದು’ ಎಂದರು.
 
‘ಕಳೆದ ವರ್ಷ ಗುದ್ದಲಿಪೂಜೆ ನೆರವೇರಿಸಿ ತಾಂತ್ರಿಕ ಕಾರಣಗಳಿಂದ ನನೆಗುದಿಗೆ ಬಿದ್ದಿರುವ ತಲವಾಟ ಗ್ರಾಮದ ರಸ್ತೆ ನಿರ್ಮಾಣ ಕಾಮಗಾರಿಯನ್ನು ಶೀಘ್ರ ಕೈಗೆತ್ತಿ ಕೊಳ್ಳಲಾಗುವುದು’ ಎಂದು ಮಾಹಿತಿ ನೀಡಿದರು. 
 
ಇದೇ ಸಂದರ್ಭದಲ್ಲಿ ಗುಡ್ಡೆಮನೆ ಗ್ರಾಮದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಮಧು ಬಂಗಾರಪ್ಪ ಅವರು ಗುದ್ದಲಿಪೂಜೆ ನೆರವೇರಿಸಿದರು. 
 
ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷ  ಕೆ.ಎಚ್‌.ಪರಶುರಾಮ್, ಎಪಿಎಂಸಿ ಸದಸ್ಯ ಮಂಡಗಳಲೆ ಹುಚ್ಚಪ್ಪ, ಶ್ರೀಪಾದ ಹೆಗಡೆ ನಿಸರಾಣಿ, ಕೃಷ್ಣಮೂರ್ತಿ,ಗಣಪತಿ ಜಿ.ಆರ್‌, ಶ್ರೀಕಾಂತ್ ಗುಡ್ಡೆಮನೆ, ಕೇಶವಮೂರ್ತಿ ಪಟೇಲ್‌, ಅಶೋಕ್  ಇದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.