ADVERTISEMENT

ಜನರನ್ನು ಆಕರ್ಷಿಸಿದ ‘ಭಾರತ ಭಾಗ್ಯ ವಿಧಾತ’

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2017, 9:22 IST
Last Updated 12 ಫೆಬ್ರುವರಿ 2017, 9:22 IST
ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಭಾರತ್ ಭಾಗ್ಯ ವಿಧಾತ’ ಕಾರ್ಯಕ್ರಮದಲ್ಲಿ ಕಲಾ ತಂಡಗಳಿಂದ ಭೂತ ಕೋಲದ ದೃಶ್ಯ
ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಭಾರತ್ ಭಾಗ್ಯ ವಿಧಾತ’ ಕಾರ್ಯಕ್ರಮದಲ್ಲಿ ಕಲಾ ತಂಡಗಳಿಂದ ಭೂತ ಕೋಲದ ದೃಶ್ಯ   

ಶಿವಮೊಗ್ಗ: ‘ಸರ್ಕಾರದ ಜನಪರ ಸಾಧನೆಗಳು ಹಾಗೂ ಅಂಬೇಡ್ಕರ್ ಅವರ ಜೀವನಗಾಥೆಯನ್ನು ಧ್ವನಿಬೆಳಕು ಕಾರ್ಯಕ್ರಮದ ಮೂಲಕ ಜನರಿಗೆ ತಿಳಿಸುತ್ತಿರುವುದು ಶ್ಲಾಘನೀಯ’ ಎಂದು ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನ ಕುಮಾರ್ ಹೇಳಿದರು.

ನಗರದ ನೆಹರೂ ಕ್ರೀಡಾಂಗಣದಲ್ಲಿ ಶನಿವಾರ ವಾರ್ತಾ ಇಲಾಖೆ ಡಾ. ಬಿ.ಆರ್. ಅಂಬೇಡ್ಕರ್ ಅವರ 125ನೇ ಜಯಂತಿ ವರ್ಷಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಅಂಬೇಡ್ಕರ್ ಅವರ ಜೀವನ ಸಾಧನೆ ಬಿಂಬಿಸುವ ವಿನೂತನ ಧ್ವನಿ-ಬೆಳಕು ಕಾರ್ಯಕ್ರಮ ‘ಭಾರತ ಭಾಗ್ಯ ವಿಧಾತ’ ಕಾರ್ಯಕ್ರಮವನ್ನು ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿ  ಮಾತನಾಡಿದರು.

‘ಅಂಬೇಡ್ಕರ್ ಅವರ ಸಾಧನೆಗಳನ್ನು ದೃಶ್ಯ ವೈಭವದ ಮೂಲಕ ಬಿತ್ತರ ಮಾಡುತ್ತಿರುವುದು ವಿಶಿಷ್ಟ ಪ್ರಯೋಗವಾಗಿದೆ. ಸರ್ಕಾರದ ಸಾಧನೆಗಳ ಬಗ್ಗೆ ಜನಸಾಮಾನ್ಯರು ಮಾಹಿತಿ ಅರಿಯಲು ಇದರಿಂದ  ಸಾಧ್ಯ’ ಎಂದು ಅಭಿಪ್ರಾಯಪಟ್ಟರು.

ಶಾಸಕ ಕೆ.ಬಿ. ಪ್ರಸನ್ನ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಚನ್ನಬಸಪ್ಪ, ಉಪವಿಭಾಗಾಧಿಕಾರಿ ಕೃಷ್ಣಮೂರ್ತಿ, ಭದ್ರಾ ‘ಕಾಡಾ’ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಸೂಡಾ ಅಧ್ಯಕ್ಷ ಉಸ್ಮಾನ್, ವಾರ್ತಾಧಿಕಾರಿ ಜಿ.ಹಿಮಂತರಾಜು ಇತರರು ಇದ್ದರು.

‘ಕಣ್ತುಂಬಿಸುವ ಬೆಳಕಿನ ಲೋಕ, ಕಿವಿದುಂಬಿಸುವ ಹಿನ್ನೆಲೆ ಸಂಗೀತದೊಂದಿಗೆ ವೈಚಾರಿಕ ಹಿನ್ನೋಟ’ ಅಡಿಬರಹದಲ್ಲಿ ರೂಪು ಗೊಂಡಿರುವ ಈ ಕಾರ್ಯಕ್ರಮ ವೀಕ್ಷಿಸಲು ಕ್ರೀಡಾಂಗಣದೆಲ್ಲೆಡೆ ನೂರಾರು ಸಂಖ್ಯೆಯಲ್ಲಿ ನಾಗರಿಕರು ಜಮಾಯಿಸಿದ್ದರು. 

ವಾರ್ತಾ ಇಲಾಖೆ ನಿರ್ದೇಶಕ ಎನ್.ಆರ್. ವಿಶುಕುಮಾರ್ ಪರಿಕಲ್ಪನೆಯ ಈ ಕಾರ್ಯಕ್ರಮಕ್ಕೆ  ಬಿ.ಎಂ. ಗಿರಿರಾಜ್ ಅವರ ನಿರ್ದೇಶನ, ಸಂಗೀತ ಪೂರ್ಣಚಂದ್ರ ತೇಜಸ್ವಿ, ರಂಗ ವಿನ್ಯಾಸ ಶಶಿಧರ ಅಡಪ, ವಸ್ತ್ರಾಲಂಕಾರ ಪ್ರಮೋದ್ ಶಿಗ್ಗಾವ್ ಹಾಗೂ ಕೆ.ವೈ. ನಾರಾಯಣಸ್ವಾಮಿ ಅವರು ಗೀತ ರಚನೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT