ADVERTISEMENT

ತ್ಯಾಗರ್ತಿ ಪಂಚಾಯ್ತಿಯಲ್ಲಿ ಅವ್ಯವಹಾರ ನಡೆದಿಲ್ಲ: ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2017, 7:39 IST
Last Updated 16 ಏಪ್ರಿಲ್ 2017, 7:39 IST

ಸಾಗರ: ‘ತ್ಯಾಗರ್ತಿ ಗ್ರಾಮ ಪಂಚಾಯ್ತಿಯಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆದಿಲ್ಲ. ಈ ಸಂಬಂಧ ತನಿಖೆ ಎದುರಿಸಲು ಸಿದ್ಧ’ ಎಂದು ತ್ಯಾಗರ್ತಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಹಮೀದ್‌ ಖಾನ್  ಸ್ಪಷ್ಟಪಡಿಸಿದ್ದಾರೆ.‘ತಾಲ್ಲೂಕು ಪಂಚಾಯ್ತಿ ಮಾಜಿ ಸದಸ್ಯ ಟಿ.ಕೆ. ಹನುಮಂತಪ್ಪ ಹಾಗೂ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಶ್ರೀನಿವಾಸ್ ಅವರು ನನ್ನ ವಿರುದ್ಧ ಮಾಡಿರುವ ಭ್ರಷ್ಟಾಚಾರದ ಆರೋಪಗಳು ಸತ್ಯಕ್ಕೆ ದೂರವಾದ ಸಂಗತಿ. ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ನಾನು ಅಧ್ಯಕ್ಷನಾಗಿರುವುದನ್ನು ಸಹಿಸದೇ ಸುಳ್ಳು ಆರೋಪ ಮಾಡಲಾಗುತ್ತಿದೆ’  ಎಂದು ಅವರು ಶನಿವಾರ ಪತ್ರಿಕಾಗೋಷ್ಠೀಯಲ್ಲಿ ದೂರಿದರು.

‘ಹನುಮಂತಪ್ಪ ಅವರು ತ್ಯಾಗರ್ತಿ ಗ್ರಾಮದಲ್ಲಿ ಮದ್ಯ ಮಾರಾಟದ ವಹಿವಾಟು ನಡೆಸುತ್ತಿದ್ದಾರೆ. ಗ್ರಾಮಕ್ಕೆ ಸರ್ಕಾರಿ ಸ್ವಾಮ್ಯದ ಮದ್ಯ ಮಾರಾಟ ಮಳಿಗೆ ಮಂಜೂರು ಆಗಿದ್ದು ಈ ವಿಷಯದಲ್ಲಿ ವಿವಾದ ಉಂಟಾಗಿದೆ. ಆದ್ದರಿಂದ ಹನುಮಂತಪ್ಪ ಅವರು ನನ್ನ ವಿರುದ್ಧ ದ್ವೇಷ ಸಾಧಿಸುತ್ತಿದ್ದಾರೆ’ ಎಂದು ಆರೋಪಿಸಿದರು.

‘ಪಂಚಾಯ್ತಿಯ ಕಾರ್ಯ ನಿರ್ವಹಣೆ ಸಂಬಂಧ ಕೆಲವು ಆಡಿಟ್ ಆಕ್ಷೇಪಣೆಗಳು ಬಂದಿದ್ದನ್ನೇ ನೆಪವಾಗಿ ಇಟ್ಟುಕೊಂಡು ಭ್ರಷ್ಟಾಚಾರ ನಡೆ ದಿರುವುದಾಗಿ ಆರೋಪಿಸಲಾಗುತ್ತಿದೆ. ಆದರೆ, ಈ ಎಲ್ಲಾ ಆಕ್ಷೇಪಣೆಗಳಿಗೂ ಅಧಿಕಾರಿಗಳು ಸ್ಪಷ್ಟ ಉತ್ತರ ನೀಡಿದ್ದಾರೆ’ ಎಂದು ವಿವರಿಸಿದರು.

ADVERTISEMENT

‘ಈ ಹಿಂದೆ ಪಂಚಾಯ್ತಿ ಅಧ್ಯಕ್ಷರಾಗಿದ್ದ ಶ್ರೀನಿವಾಸ್ ಅವರ ಅವಧಿಯಲ್ಲಿ ಅನೇಕ ಅಕ್ರಮಗಳು ನಡೆದಿವೆ. ಲೆಕ್ಕಪರಿಶೋಧಕರ ವರದಿಯಲ್ಲಿ ಈ ಬಗ್ಗೆ ಉಲ್ಲೇಖವಿದೆ. ಅವರ ಅವಧಿಯಲ್ಲೆ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಹೆಚ್ಚು ಯಂತ್ರೋಪಕರಣಗಳನ್ನು ಬಳಸ ಲಾಗಿದೆ’ ಎಂದು ದೂರಿದರು.

‘ಹಾಲಿ ಪಂಚಾಯ್ತಿ ವ್ಯಾಪ್ತಿಯಲ್ಲಿ ಸರ್ಕಾರಿ ಆಸ್ಪತ್ರೆ ನವೀಕರಣ, ಪ್ರಮುಖ ರಸ್ತೆಗಳ ಡಾಂಬರೀಕರಣ ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳ ಲಾಗುತ್ತಿದೆ. ಅದನ್ನು ಸಹಿಸದ ಕೆಲವರು ಪಂವಾಯ್ತಿ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ’  ಎಂದರು. ಪಂಚಾಯ್ತಿ ಸದ್ಯಸರಾದ ಕೆ.ಬಿ.ಗಣಪತಿ, ಗಿರೀಶ, ರೇವಪ್ಪ, ರಾಮಕೃಷ್ಣ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.