ADVERTISEMENT

ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ

​ಪ್ರಜಾವಾಣಿ ವಾರ್ತೆ
Published 19 ಜುಲೈ 2017, 5:36 IST
Last Updated 19 ಜುಲೈ 2017, 5:36 IST

ಸಾಗರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾದ ಉಪಾಧ್ಯಕ್ಷೆ ಪವಿತ್ರಾ ರಾಮಯ್ಯ ದೂರಿದರು.

ಇಲ್ಲಿನ ಗಾಂಧಿನಗರ ಬಡಾವಣೆಯಲ್ಲಿ ಬಿಜೆಪಿ ನಗರ ಘಟಕ ಮಂಗಳವಾರ ಹಮ್ಮಿಕೊಂಡಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ ಬಂದಿಖಾನೆಯ ಅವ್ಯವಸ್ಥೆ, ಭ್ರಷ್ಟಾಚಾರವನ್ನು ಬಯಲಿಗೆಳೆದ ಡಿಐಜಿ ರೂಪಾ ಅವರಿಗೆ ಸರ್ಕಾರ ವರ್ಗಾವಣೆಯ ಶಿಕ್ಷೆ ನೀಡಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎನ್ನುವುದಕ್ಕೆ ಬೆಂಗಳೂರಿನ ಬಂದಿಖಾನೆಯ ಪ್ರಕರಣವೇ ಸಾಕ್ಷಿಯಾಗಿದೆ. ರಾಜ್ಯ ಸರ್ಕಾರ ಪ್ರಾಮಾಣಿಕ ಅಧಿಕಾರಿಗಳ ನೈತಿಕ ಸ್ಥೈರ್ಯವನ್ನು ಉಡುಗಿಸುವ ಕೆಲಸ ಮಾಡುತ್ತಿದೆ. ಈ ಸಂಬಂಧ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ರೂಪಿಸಲಿದೆ’ ಎಂದು ತಿಳಿಸಿದರು.

ADVERTISEMENT

‘ಬಿಜೆಪಿಯ 20,000 ಕಾರ್ಯಕರ್ತರು ರಾಜ್ಯದಲ್ಲಿ ವಿಸ್ತಾರಕರಾಗಿ ಕೆಲಸ ಮಾಡುತ್ತಿದ್ದಾರೆ. ವಿಸ್ತಾರಕರು ಜನರ ಬಳಿ ಹೋದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದ ಬಗ್ಗೆ  ಮೆಚ್ಚುಗೆ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿನ ಕಾಂಗ್ರೆಸ್‌ ಸರ್ಕಾರದ ಆಡಳಿತದ ಬಗ್ಗೆ ಜನರು ಬೇಸರಗೊಂಡಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ’ ಎಂದರು.

ವನಮಹೋತ್ಸವಕ್ಕೆ ಚಾಲನೆ ನೀಡಿದ ಬಿಜೆಪಿಯ ಶಿವಮೊಗ್ಗ ವಿಭಾಗದ ಸಂಘಟನಾ ಕಾರ್ಯದರ್ಶಿ ಗಣೇಶ್‌ರಾವ್‌ ಮಾತನಾಡಿ, ರಾಜಕೀಯ ಜಾಗೃತಿಯ ಜತೆಗೆ ಪರಿಸರ ಜಾಗೃತಿಯನ್ನೂ ಉಂಟುಮಾಡುವ ಉದ್ದೇಶದಿಂದ ವನಮಹೋತ್ಸವ ಕಾರ್ಯಕ್ರಮವನ್ನು ಬಿಜೆಪಿ ನಡೆಸುತ್ತಿದೆ ಎಂದರು.

ಬಿಜೆಪಿಯ ನಗರ ಘಟಕದ ಅಧ್ಯಕ್ಷ ಆರ್‌.ಶ್ರೀನಿವಾಸ್, ನಗರಸಭಾ ಸದಸ್ಯ ಅರವಿಂದ ರಾಯ್ಕರ್‌, ಪಕ್ಷದ ಪ್ರಮುಖರಾದ ಕೆ.ಆರ್.ಗಣೇಶ್‌ ಪ್ರಸಾದ್‌, ಸತೀಶ್‌ಬಾಬು, ಸುಮಾ ಸುಬ್ಬಣ್ಣ, ಸುರೇಖಾ, ರಂಜಿತ್‌, ಮರಳು ಸಿದ್ದಪ್ಪ ಅವರೂ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.