ಶಿಕಾರಿಪುರ: ಬರ ನಿರ್ವಹಿಸಲು ಪ್ರತಿಯೊಬ್ಬರೂ ಪರಿಸರ ಕಾಳಜಿ ಬೆಳೆಸಿಕೊಳ್ಳಬೇಕು ಎಂದು ವಿರಕ್ತಮಠದ ಚನ್ನಬಸವ ಸ್ವಾಮೀಜಿ ಸಲಹೆ ನೀಡಿದರು.ಲಕ್ಷ್ಮೀವೆಂಕಟೇಶ್ವರ ದೇವಸ್ಥಾನ ಸಮಿತಿ ಹಾಗೂ ಸವಿತಾ ಸಮಾಜ ಮಳೆಗಾಗಿ ಪ್ರಾರ್ಥಿಸಿ ಮಂಗಳವಾರ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ ಆಯೋಜಿಸಿದ್ದ ಪರ್ಜನ್ಯ ಜಪ ಹೋಮ ಹಾಗೂ ದೇವಸ್ಥಾನ 6ನೇ ವರ್ಷದ ವರ್ಧಂತೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾಡನ್ನು ನಾಶ ಮಾಡಿದ ಪರಿಣಾಮ ರಾಜ್ಯದಲ್ಲಿ ಬರ ಆವರಿಸಿದೆ. ಹಾಗಾಗಿ ಕುಡಿಯುವ ನೀರು ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕುಡಿಯುವ ನೀರು ಅಪವ್ಯಯವಾಗದಂತೆ ತಡೆಗಟ್ಟುವ ಜವಾಬ್ದಾರಿ ಎಲ್ಲರ ಮೇಲಿದೆ. ಕಾಡು ಹಾಗೂ ನೀರನ್ನು ಸಂರಕ್ಷಣೆ ಮಾಡುವ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಬೇಕು ಎಂದು ತಿಳಿಸಿದರು.
ಜಪಹೋಮ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ಬಿ.ವೈ. ರಾಘವೇಂದ್ರ, ‘ಎರಡು ವರ್ಷಗಳಿಂದ ತಾಲ್ಲೂಕಿನಲ್ಲಿ ಭೀಕರ ಬರ ಆವರಿಸಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ದೇವರನ್ನು ನಂಬಿ ನಡೆಸುವ ಇಂತಹ ಧಾರ್ಮಿಕ ಕಾರ್ಯಗಳ ಪ್ರಭಾವದಿಂದ ಮಳೆ ಚೆನ್ನಾಗಿ ಆಗಲಿ’ ಎಂದರು.
ದೇವಸ್ಥಾನ ಸಮಿತಿ ಕಾರ್ಯದರ್ಶಿ ರಾಮಣ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲ್ಲೂಕು ಹಿಂದೂ ಜನಜಾಗೃತಿ ಸಮಿತಿ ಸಂಚಾಲಕಿ ಕಾವೇರಿ ರಾಯ್ಕರ್, ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ನಿರ್ದೇಶಕಿ ತೇಜಸ್ವಿನಿ ರಾಘವೇಂದ್ರ, ದೇವಸ್ಥಾನ ಸಮಿತಿ ಅಧ್ಯಕ್ಷ ಬಿ. ಸುಂದರ್ರಾಜ್, ಪದಾಧಿಕಕಾರಿಗಳು, ಸವಿತಾ ಸಮಾಜದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.