ADVERTISEMENT

ಮಕ್ಕಳ ಸರಣಿ ಸಾವು: ಉತ್ತರ ಪ್ರದೇಶ ಸರ್ಕಾರ ವಜಾಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2017, 8:45 IST
Last Updated 15 ಆಗಸ್ಟ್ 2017, 8:45 IST

ಶಿವಮೊಗ್ಗ: ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಮಕ್ಕಳ ಸರಣಿ ಸಾವು ಸಂಭವಿಸಿರುವ ಹಿನ್ನೆಲೆಯಲ್ಲಿ ಅಲ್ಲಿನ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ಎನ್ಎಸ್‌ಯುಐ ಸಂಘಟನೆ ಹಾಗೂ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಘಟಕದ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತವರುಕ್ಷೇತ್ರ ಗೋರಖ್ ಪುರದ ಆಸ್ಪತ್ರೆಯಲ್ಲಿ ಕಳೆದ ಎರಡು ದಿನಗಳಲ್ಲಿ 60ಕ್ಕೂ ಹೆಚ್ಚು ನವಜಾತ ಶಿಶುಗಳು ಮರಣ ಹೊಂದಿವೆ. ಈ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿರುವ ಯೋಗಿ ಆದಿತ್ಯನಾಥ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು. ಜತೆಗೆ ಅಲ್ಲಿನ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಶಿಶುಗಳ ಸಾವು ಅಮಾನವೀಯವಾಗಿದ್ದು, ದೇಶ ತಲೆ ತಗ್ಗಿಸುವಂತಾಗಿದೆ. ಕೂಡಲೇ ಈ ಪ್ರಕರಣದ ಕುರಿತು ಉನ್ನತಮಟ್ಟದ ತನಿಖೆ ನಡೆಯಬೇಕು ಹಾಗೂ ಘಟನೆಗೆ ಕಾರಣರಾದ ಎಲ್ಲರನ್ನೂ ಬಂಧಿಸಿ, ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಎನ್ಎಸ್‌ಯುಐ ಸಂಘಟ ನೆಯ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್. ಬಾಲಾಜಿ, ಎಚ್.ಎಸ್. ವಿಜಯ್ ಕುಮಾರ್, ಪ್ರಮೋದ್, ಕೆ. ಚೇತನ್, ರಮೇಶ್ ಹೆಗ್ಡೆ, ವಿಕಾಸ್ ನಾಡಿಗ್, ಧನಂಜಯ್, ಶ್ರವಣ್, ಮೊಹಮ್ಮದ್ ಆರೀಫ್ ಉಲ್ಲಾ, ಮುಖೇಶ್, ಚೇತನ್, ವಿನಯ್ ತಾಂಡ್ಲೆ, ಪುರಲೆ ಮಂಜು, ಚಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಕಾಂಗ್ರೆಸ್ ಅಲ್ಪಸಂಖ್ಯಾತರ ಜಿಲ್ಲಾ ಘಟಕ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮುಸ್ಲಿಂರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಅಲ್ಪಸಂಖ್ಯಾತರ ಜಿಲ್ಲಾ ಘಟಕದ ಸದಸ್ಯರು ಪ್ರತಿಭಟನೆ ನಡೆಸಿದರು.

ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾದ ದಿನದಿಂದಲೂ ಮುಸ್ಲಿಂರ ಬಗ್ಗೆ ಅನುಚಿತವಾಗಿ ನಡೆದುಕೊಳ್ಳುತ್ತಿದ್ಧಾರೆ. ಸ್ವಾತಂತ್ರ್ಯ ದಿನಾಚರಣೆಯಂದು ಎಲ್ಲ ಮದರಸಗಳಲ್ಲಿ ವೀಡಿಯೋ ಚಿತ್ರೀಕರಣ ನಡೆಸಬೇಕೆಂಬ ಹೇಳಿಕೆ ನೀಡಿದ್ದಾರೆ. ಇದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗೋರಖ್ ಪುರದ ಸರ್ಕಾರಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಕೆ ಇಲ್ಲದೆ ಮಕ್ಕಳು ಸಾವನ್ನಪ್ಪಿವೆ. ಮುಖ್ಯಮಂತ್ರಿಯಾಗಿ ಮಾಡಬೇಕಾದ ಕೆಲಸಗಳನ್ನು ಬಿಟ್ಟು ಮತೀಯ ಭಾವನೆ ಕೆರಳಿಸುವ ಮೂಲಕ ಯೋಗಿ ಆದಿತ್ಯನಾಥ್ ಹೀನ ರಾಜಕಾರಣ ಮಾಡುತ್ತಿದ್ದಾರೆ. ಕೂಡಲೇ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಮೊಹಮ್ಮದ್ ಆರೀಫ್ ಉಲ್ಲಾ, ಆಸೀಫ್ ಮಸೂದ್, ಶೇಖ್ ಅಹಮ್ಮದ್, ಮುಜೀಬ್, ಮೊಹಮ್ಮದ್ ನಿಹಾಲ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.