ADVERTISEMENT

ಮಠದ ಅಭಿವೃದ್ಧಿಗೆ ನೆರವು: ಸಚಿವ ಲಮಾಣಿ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2017, 9:55 IST
Last Updated 11 ಸೆಪ್ಟೆಂಬರ್ 2017, 9:55 IST
ಶಿಕಾರಿಪುರ ತಾಲ್ಲೂಕಿನ ಕಾಗಿನಲ್ಲಿ ಗ್ರಾಮದಲ್ಲಿ ಐರಣಿ ಹೊಳೆಮಠದ ಆರನೇ ಶಾಖಾ ಮಠ ಉದ್ಘಾಟನೆ ಅಂಗವಾಗಿ ಶನಿವಾರ ನಡೆದ ಧರ್ಮಸಭೆಯಲ್ಲಿ ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ಮಾತನಾಡಿದರು.
ಶಿಕಾರಿಪುರ ತಾಲ್ಲೂಕಿನ ಕಾಗಿನಲ್ಲಿ ಗ್ರಾಮದಲ್ಲಿ ಐರಣಿ ಹೊಳೆಮಠದ ಆರನೇ ಶಾಖಾ ಮಠ ಉದ್ಘಾಟನೆ ಅಂಗವಾಗಿ ಶನಿವಾರ ನಡೆದ ಧರ್ಮಸಭೆಯಲ್ಲಿ ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ಮಾತನಾಡಿದರು.   

ಶಿಕಾರಿಪುರ: ‘ಮಠಗಳ ಅಭಿವೃದ್ಧಿ ಕಾರ್ಯಗಳಿಗೆ ಪೂರಕವಾಗಿ ಕಾರ್ಯ ನಿರ್ವಹಿಸುತ್ತೇನೆ’ ಎಂದು ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ಭರವಸೆ ನೀಡಿದರು.
ತಾಲ್ಲೂಕಿನ ಕಾಗಿನಲ್ಲಿ ಗ್ರಾಮದಲ್ಲಿ ಐರಣಿ ಹೊಳೆಮಠದ 6ನೇ ಶಾಖಾ ಮಠ ಉದ್ಘಾಟನೆ ಮತ್ತು ನಾಗಲಿಂಗ ಸ್ವಾಮೀಜಿ ಕ‍ರ್ತೃ ಗದ್ದುಗೆ ಮೇಲೆ ಸದ್ಗುರು ಸಿದ್ಧಾರೂಢರ ಅಮೃತ ಶಿಲಾ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಶನಿವಾರ ನಡೆದ ಧರ್ಮಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಐರಣಿ ಹೊಳೆಮಠದ ಪೀಠಾಧ್ಯಕ್ಷರಾದ ಗುರು ಬಸವರಾಜ ದೇಶಿಕೇಂದ್ರ ಸ್ವಾಮೀಜಿ ಎಲ್ಲಾ ಜಾತಿಯ ಜನರನ್ನು ಒಗ್ಗೂಡಿಸುವ ಮೂಲಕ ಧಾರ್ಮಿಕ ಕಾರ್ಯಗಳನ್ನು ನಡೆಸುತ್ತಿದ್ದಾರೆ. ಮಠದ ಅಭಿವೃದ್ಧಿಗೆ ಸರ್ಕಾರದ ಅನುದಾನದಲ್ಲಿ ಹಣ ನೀಡುತ್ತೇನೆ. ಶಾಖಾ ಮಠವನ್ನು ಪ್ರವಾಸಿ ತಾಣವಾಗಿಸುವ ನಿಟ್ಟಿನಲ್ಲಿ ಪ್ರಯತ್ನಿಸುತ್ತೇನೆ’ ಎಂದು ಹೇಳಿದರು.

ವಿಧಾನ ಪರಿಷತ್‌ ಸದಸ್ಯ ಆರ್‌.ಪ್ರಸನ್ನಕುಮಾರ್‌ ಅವರು ಮಠದ ಅಭಿವೃದ್ಧಿ ಕಾರ್ಯಗಳಿಗೆ ವಿಧಾನ ಪರಿಷತ್ ಸದಸ್ಯರ ಅನುದಾನದಲ್ಲಿ ನೆರವು ನೀಡುವುದಾಗಿ ಭರವಸೆ ನೀಡಿದರು.

ADVERTISEMENT

ಗುರು ಬಸವರಾಜ ದೇಶಿಕೇಂದ್ರ ಸ್ವಾಮೀಜಿ, ನಂದಿಗುಡಿ ಮಠದ ಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಕಾಳೇನಹಳ್ಳಿ ಶಿವಯೋಗಶ್ರಮದ ರೇವಣಸಿದ್ಧ ಸ್ವಾಮೀಜಿ, ಹೊನ್ನಾಳಿ ಹಿರೇಕಲ್ಮಠದ ಒಡೆಯರ್‌ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಹೋತನಹಳ್ಳಿ ಸಿದ್ಧಾರೂಢ ಮಠದ ಶಂಕರಾನಂದ ಸ್ವಾಮೀಜಿ ನೇತೃತ್ವ ವಹಿಸಿದ್ದರು.

‘ಕಾಡಾ’ ಮಾಜಿ ಅಧ್ಯಕ್ಷ ನಗರದ ಮಹದೇವಪ್ಪ, ಜೆಡಿಎಸ್‌ ಮುಖಂಡ ಎಚ್‌.ಟಿ.ಬಳಿಗಾರ್, ರಾಜ್ಯ ತಾಂಡಾ ಅಭಿವೃದ್ಧಿ ನಿಗಮ ನಿರ್ದೇಶಕ ಶಿವುನಾಯ್ಕ, ತಾಲ್ಲೂಕು ಪಂಚಾಯ್ತಿ ಸದಸ್ಯ ಗೀತಾ ರಾಜಣ್ಣ, ಎಪಿಎಂಸಿ ನಿರ್ದೇಶಕ ಎ.ಬಿ. ಸುಧೀರ್, ಕೆಡಿಪಿ ಸದಸ್ಯ ಮಾರವಳ್ಳಿ ಉಮೇಶ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.