ಶಿಕಾರಿಪುರ: ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹಾಗೂ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಮಂಗಳವಾರ ತಾಲ್ಲೂಕು ಕಚೇರಿ ಮುಂಭಾಗ ಬಿಜೆಪಿ ತಾಲ್ಲೂಕು ಘಟಕ ನೇತೃತ್ವದಲ್ಲಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಬಿಜೆಪಿ ಜಿಲ್ಲಾ ಘಟಕ ಪ್ರಧಾನ ಕಾರ್ಯದರ್ಶಿ ಕೆ.ಎಸ್. ಗುರುಮೂರ್ತಿ ಮಾತನಾಡಿ, ‘ಭೀಕರ ಬರದಿಂದ ಸಂಕಷ್ಟ ಅನುಭವಿಸುತ್ತಿರುವ ರಾಜ್ಯದ ರೈತರಿಗೆ ಸ್ಪಂದಿಸುವ ಕಾರ್ಯವನ್ನು ರಾಜ್ಯ ಸರ್ಕಾರ ಮಾಡಬೇಕು’ ಎಂದು ಒತ್ತಾಯಿಸಿದರು.
‘ಪ್ರಧಾನಿ ನರೇಂದ್ರ ಮೋದಿ ₹500, ₹ 1,000 ಮುಖಬೆಲೆಯ ನೋಟು ಅಮಾನ್ಯ ಮಾಡಿರುವುದರಿಂದ ಶ್ರೀ ಸಾಮಾನ್ಯರಿಗೆ ತೊಂದರೆಯಾಗಿಲ್ಲ. ಆದರೆ, ತಾಲ್ಲೂಕಿನಲ್ಲಿ ಶೇ 10 ಬಡ್ಡಿ ವ್ಯವಹಾರ ನಡೆಸುತ್ತಿರುವ ಕೆಲವು ಮುಖಂಡರಿಗೆ ತೊಂದರೆಯಾಗಿದೆ’ ಎಂದು ವ್ಯಂಗ್ಯವಾಡಿದರು.
‘ತಾಲ್ಲೂಕಿನ ಅಭಿವೃದ್ಧಿಗಾಗಿ ಶ್ರಮಿಸಿದ ಯಡಿಯೂರಪ್ಪ ಹಾಗೂ ಶಾಸಕ ರಾಘವೇಂದ್ರ ವಿರುದ್ಧ ಕಾಂಗ್ರೆಸ್ ಮುಖಂಡರು ಹಗುರವಾಗಿ ಮಾತನಾಡಿರುವುದು ಸರಿಯಲ್ಲ. ಖಂಡನೀಯ’ ಎಂದು ಹೇಳಿದರು.
ಬಿಜೆಪಿ ತಾಲ್ಲೂಕು ಘಟಕ ಅಧ್ಯಕ್ಷ ಕೊಳಗಿ ರೇವಣಪ್ಪ ಮಾತನಾಡಿ, ‘ರಾಜ್ಯದಲ್ಲಿ ಮೂರೂವರೆ ವರ್ಷಗಳಿಂದ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕಾರ್ಯ ಮಾಡಲಿಲ್ಲ. ರೈತರ ಅಭಿವೃದ್ಧಿ ಬಗ್ಗೆ ಗಮನಹರಿಸಿಲ್ಲ’ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಮುಖಂಡರಾದ ಕೆ. ಹಾಲಪ್ಪ, ಬಿ.ಎಚ್. ನಾಗರಾಜ್, ಜೆ. ಸುಕೇಂದ್ರಪ್ಪ, ಟಿ.ಎಸ್. ಮೋಹನ್, ಅಂಬಾರಗೊಪ್ಪ ಶೇಖರಪ್ಪ, ಕುಮಾರಗೌಡ್ರು, ತೊಗರ್ಸಿ ಸಣ್ಣಹನುಮಂತಪ್ಪ, ಚಾರಗಲ್ಲಿ ಪರಶುರಾಮ್, ಕೆ.ಜಿ. ವಸಂತಗೌಡ, ಎಸ್.ಪಿ. ನಾಗರಾಜಗೌಡ, ಸಾಧಿಕ್, ದೂದಿಹಳ್ಳಿ ಬಸವರಾಜ್, ಸೈಯದ್ ಫೀರ್, ನಿವೇದಿತಾ ರಾಜು, ಇಂದಿರಾ ಶ್ರೀನಿವಾಸನಾಯ್ಡು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.