ಶಿಕಾರಿಪುರ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ ಮಾಡುವುದನ್ನು ಬಿಟ್ಟು ಪ್ರಧಾನಿ ಬಳಿ ಹೋಗಿ ರಾಜ್ಯದ ರೈತರ ಸಾಲ ಮನ್ನಾ ಮಾಡಿಸಲಿ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ತೀ.ನಾ. ಶ್ರೀನಿವಾಸ್ ಸಂಸದ ಬಿ.ಎಸ್. ಯಡಿಯೂರಪ್ಪ ಅವರಿಗೆ ಸವಾಲು ಹಾಕಿದರು.
ತಾಲ್ಲೂಕು ಕಾಂಗ್ರೆಸ್ ಮಂಗಳವಾರ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
‘ಸಿದ್ದರಾಮಯ್ಯ ಪ್ರಾಮಾಣಿಕವಾಗಿ ಆಡಳಿತ ನಡೆಸುತ್ತಿದ್ದು, ಉತ್ತಮ ಯೋಜನೆಗಳನ್ನು ರಾಜ್ಯದ ಜನತೆಗೆ ನೀಡಿದ್ದಾರೆ. ಅವರ ಬಳಿ ಅಕ್ರಮ ಹಣ ಇಲ್ಲ. ಯಡಿಯೂರಪ್ಪ ಹಾಗೂ ಕೆ.ಎಸ್. ಈಶ್ವರಪ್ಪ ಬಳಿ ಅಕ್ರಮ ಹಣ ಸಾಕಷ್ಟು ಇದೆ’ ಎಂದು ಟೀಕಿಸಿದರು. ಯಡಿಯೂರಪ್ಪ ಅವರಿಗೆ ರೈತರು ಹಾಗೂ ಬಡವರ ಪರ ಕಾಳಜಿ ಇಲ್ಲ. ಮುಖ್ಯಮಂತ್ರಿ ಆಗಲು ಹಂಬಲಿಸುತ್ತಿದ್ದಾರೆ ಎಂದು ಲೇವಡಿ ಮಾಡಿದರು.
‘ ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಬುರ್ಖಾ ಹಾಕಬಾರದು ಎಂಬ ಗೊಂದಲ ಸೃಷ್ಟಿಸಿ ಕಾಲೇಜಿನಲ್ಲಿ ಧಾರ್ಮಿಕ ಅಸಹಿಷ್ಣುತೆ ಹುಟ್ಟುಹಾಕುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ’ ಎಂದು ದೂರಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಣಿ ಮಾಲತೇಶ್ ಮಾತನಾಡಿ, ‘ಸಿದ್ದರಾಮಯ್ಯ ಅವರ ಜನಪ್ರಿಯತೆ ಸಹಿಸಲಾಗದೇ ಯಡಿಯೂರಪ್ಪ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ಭ್ರಷ್ಟಾಚಾರ ನಡೆಸಿ ಜೈಲಿಗೆ ಹೋಗಿ ಬಂದ ಸಿಎಂ ಎಂಬ ಕಳಂಕ ಯಡಿಯೂರಪ್ಪ ಅವರಿಗಿದೆ’ ಎಂದರು.
‘ಕಾಡಾ’ ಮಾಜಿ ಅಧ್ಯಕ್ಷ ನಗರದ ಮಹದೇವಪ್ಪ, ತಾಲ್ಲೂಕು ಪಂಚಾಯ್ತಿ ಸದಸ್ಯ ಈಸೂರು ಜಯಣ್ಣ, ಪುರಸಭೆ ಸದಸ್ಯರಾದ ಪಾರಿವಾಳ ಶಿವರಾಮ್, ಮಧು, ಮುಖಂಡರಾದ ಹಬೀಬಲ್ಲಾ, ಪಚ್ಚಿಗಿಡ್ಡಪ್ಪ, ಎಸ್.ಎಂ. ರಮೇಶ್, ಭಂಡಾರಿ ಮಾಲತೇಶ್, ಸ.ನ. ಮಂಜಪ್ಪ, ರಸೂಲ್, ನಾಗರಾಜ್, ಚಂದ್ರಪ್ಪ, ಉಮೇಶ್ ಮಾರವಳ್ಳಿ, ಉಳ್ಳಿ ದರ್ಶನ್, ಎಂ. ಸಂದೀಪ್, ಹೊಳಿಗೆ ಮಾಲತೇಶ್, ಜಿದ್ದು ಮಂಜು, ರಾಜು ಉಡುಗಣಿ ಮತ್ತಿತರರು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.