ಶಿಕಾರಿಪುರ: ‘ವೀರಶೈವ ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಅಲ್ಪಸಂಖ್ಯಾತ ಧರ್ಮದ ಸ್ಥಾನಮಾನ ನೀಡಬೇಕು ಎಂದು ಪಟ್ಟಣದ ತಾಲ್ಲೂಕು ಕಚೇರಿ ಎದುರು ವಿವಿಧ ಮಠಗಳ ಸ್ವಾಮೀಜಿ ಶನಿವಾರ ಪ್ರತಿಭಟನೆ ನಡೆಸಿದರು.
ತಹಶೀಲ್ದಾರ್ ಬಿ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ ಸ್ವಾಮೀಜಿಗಳು, ‘ವೀರಶೈವ ಲಿಂಗಾಯತ ಧರ್ಮ ಐತಿಹಾಸಿಕ ಹಿನ್ನೆಲೆ ಹೊಂದಿದೆ. ಹರಪ್ಪ, ಮಹೇಂಜೋದಾರ್ ನಾಗರಿಕತೆ ಕಾಲದಿಂದಲೂ ವೀರಶೈವ ಲಿಂಗಾಯತ ಧರ್ಮ ಅಸ್ತಿತ್ವದಲ್ಲಿದೆ. ವೀರಶೈವ ಹಾಗೂ ಲಿಂಗಾಯತ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಇದು ವಿಶ್ವ ಧರ್ಮವಾಗುವ ಎಲ್ಲಾ ಅರ್ಹತೆ ಹೊಂದಿದೆ’ ಎಂದು ಹೇಳಿದರು.
‘ಪ್ರತ್ಯೇಕ ಧರ್ಮ ವಿಚಾರದಲ್ಲಿ ಯಾರಲ್ಲೂ ಗೊಂದಲವಿಲ್ಲ. ಪ್ರತ್ಯೇಕ ಧರ್ಮ ವಿಚಾರದಲ್ಲಿ ನಮ್ಮ ಮಾತೃ ಸಂಸ್ಥೆಯಾದ ಅಖಿಲ ಭಾರತ ವೀರಶೈವ ಮಹಾಸಭಾ ಕೇಂದ್ರ ಸಮಿತಿ ತೆಗೆದುಕೊಳ್ಳುವ ನಿರ್ಣಯಕ್ಕೆ ನಾವು ಬದ್ಧರಾಗಿದ್ದೇವೆ’ ಎಂದು ಅವರು ತಿಳಿಸಿದರು.
ಕಾಳೇನಹಳ್ಳಿ ಶಿವಯೋಗಾಶ್ರಮದ ರೇವಣಸಿದ್ಧ ಸ್ವಾಮೀಜಿ, ತೊಗರ್ಸಿ ಮಳೆ ಹಿರೇಮಠದ ಮಹಾಂತ ದೇಶಿಕೇಂದ್ರ ಸ್ವಾಮೀಜಿ, ಸಾಲೂರು ಹಿರೇಮಠದ ಗುರುಲಿಂಗ ಜಂಗಮ ಶಿವಾಚಾರ್ಯ ಸ್ವಾಮೀಜಿ, ಪಂಡಿತ್ ರೇಣುಕಾಚಾರ್ಯ, ದಿಂಡದಹಳ್ಳಿ ಹಿರೇಮಠದ ಶಿವಾನಂದ ಪಶುಪತಿ ಶಿವಾಚಾರ್ಯ ಸ್ವಾಮೀಜಿ, ಕಡೇನಂದಿಹಳ್ಳಿ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಬಸವಾಶ್ರಮ ಮಾತೆ ಶರಣಾಂಬಿಕೆ, ವೀರಶೈವ ಮಹಾಸಭಾ ತಾಲ್ಲೂಕು ಘಟಕ ಅಧ್ಯಕ್ಷ ರುದ್ರಮುನಿ, ಮುಖಂಡರಾದ ಬಿ.ಡಿ. ಭೂಕಾಂತ್, ಜಯದೇವಯ್ಯ, ಸಾಲೂರು ಕುಮಾರ್, ಸಿ.ಎಂ. ಪರಮೇಶ್ವರಯ್ಯ, ಸುಭಾಷ್ಚಂದ್ರ ಸ್ಥಾನಿಕ್, ಕಾಂಚನಾ ಕುಮಾರ್, ಬೋಜರಾಜ ಪಾಟೀಲ್, ಶಿವಪ್ಪಯ್ಯ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.