ಶಿವಮೊಗ್ಗ : ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಇಲಾಖಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಲೋಕೇಶ್ ಅಧಿಕಾರಿಗಳಿಗೆ ಸೂಚಿಸಿದರು.
ಕಚೇರಿಯಲ್ಲಿ ಗುರುವಾರ ಏರ್ಪಡಿಸಿದ್ದ ಚುನಾವಣಾ ವೆಚ್ಚ ವೀಕ್ಷಕರು ಹಾಗೂ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಈವರೆಗೆ ಕೈಗೊಂಡಿರುವ ಚುನಾವಣಾ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಅವರು ಚುನಾವಣಾ ವೀಕ್ಷಕರಿಗೆ ಮಾಹಿತಿ ನೀಡಿದರು. ಚುನಾವಣೆ ಅಧಿಸೂಚನೆ ಪ್ರಕಟವಾದ 24ಗಂಟೆಗಳ ಒಳಗಾಗಿ ಜಿಲ್ಲೆಯಾದ್ಯಂತ ಒಟ್ಟು 3ಸಾವಿರ ಫ್ಲೆಕ್ಸ್, ಬ್ಯಾನರ್, ಪೋಸ್ಟರ್ ಹಾಗೂ ಗೋಡೆ ಬರಹಗಳನ್ನು ಅಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಚುನಾವಣಾ ವೆಚ್ಚ ವೀಕ್ಷಕರು ಮಾತನಾಡಿ, ಅಧಿಕಾರಿಗಳು ಚುನಾವಣಾ ಅಕ್ರಮಗಳನ್ನು ತಡೆಯಲು ನಿರಂತರ ನಿಗಾ ವಹಿಸಬೇಕು. ಸ್ಥಾಪಿಸಲಾಗಿರುವ ತಾತ್ಕಾಲಿಕ ಚೆಕ್ಪೋಸ್ಟ್ಗಳ ಸ್ಥಳವನ್ನು ಆಗಾಗ್ಗೆ ಬದಲಾಯಿಸಬೇಕು. ಮದ್ಯ ಸಾಗಾಟದ ಮೇಲೆ ಕಟ್ಟೆಚ್ಚರ ವಹಿಸಬೇಕು. ಮದ್ಯ ಸಾಗಾಟ ಮತ್ತು ಹಂಚಿಕೆ ಹೆಚ್ಚು ನಡೆಯಬಹುದಾದ ಸ್ಥಳಗಳನ್ನು ಗುರುತಿಸಿ ವಿಶೇಷ ಕಾರ್ಯಾಚರಣೆ ನಡೆಸಬೇಕು. ಬ್ಯಾಂಕುಗಳಲ್ಲಿ ನಡೆಯುವ ವಹಿವಾಟು, ಪೆಟ್ರೋಲ್ ಬಂಕ್ಗಳಲ್ಲಿ ನಡೆಯುವ ಅನಿಯಮಿತ ಇಂಧನ ಪೂರೈಕೆ ಮೇಲೆ ನಿಗಾ ಇರಿಸಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಚುನಾವಣಾ ವೆಚ್ಚ ವೀಕ್ಷಕರಾಗಿ ಆಗಮಿಸಿರುವ ದರಸಿ ಸುಮನ್ ರತನ್, ಜಾಕೀರ್ ಹುಸೇನ್, ಪ್ರಭಾಕರ್ ಕುಮಾರ್, ವಿಜಯ್ ಸಿಂಗ್, ಮೀನಾ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಅಭಿನವ ಖರೆ, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಅವರೂ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.