ರಿಪ್ಪನ್ಪೇಟೆ: ಪಿಯುನಲ್ಲಿ ಶೇ 89 ಅಂಕ ಪಡೆದ ಬಾಳೂರು ಗ್ರಾಮದ ಹಾವುಗೊಲ್ಲರ ಹಾಡಿಯ ವಿದ್ಯಾರ್ಥಿ ಶಿವಣ್ಣ ಅವರ ಮುಂದಿನ ವ್ಯಾಸಂಗದ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಭರವಸೆ ನೀಡಿದರು.
ಸೋಮವಾರ ಬಾಳೂರು ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಯನ್ನು ಸನ್ಮಾನಿಸಿ ಅವರು ಮಾತನಾಡಿದರು. ಬಡತನ ಎಂದಿಗೂ ಶಾಪವಲ್ಲ ಅದನ್ನು ಮೆಟ್ಟಿ ನಿಲ್ಲುವ ಛಲ ಪ್ರತಿಯೊಬ್ಬರಲ್ಲೂ ಬರಬೇಕು. ಆಗ ಮಾತ್ರ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು ತಿಳಿಸಿದರು.
‘ಅನಕ್ಷರಸ್ಥ ಕುಟುಂಬದಲ್ಲಿ ಜನಿಸಿ, ರಜಾ ದಿನಗಳಲ್ಲಿ ಕೂಲಿನಾಲಿ ಮಾಡಿಕೊಂಡು ಜೀವನ ಸಾಗಿಸುತ್ತ ಸರ್ಕಾರಿ ಕಾಲೇಜಿನ ಓದಿ ಸಾಧನೆ ಮಾಡಿರುವ ಶಿವಣ್ಣನ ಸಾಧನೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ’ ಎಂದರು.
ಸಾಧನೆಗೆ ಯಾವುದೂ ಅಡ್ಡಿಯಲ್ಲ. ಎಲ್ಲ ಅಡೆತಡೆಗಳನ್ನು ಸಮರ್ಪಕವಾಗಿ ಎದುರಿಸಬೇಕು. ಉನ್ನತ ವಿದ್ಯಾಭ್ಯಾಸ ಪಡೆಯುವುದರಿಂದ ಆರ್ಥಿಕ, ಸಾಮಾಜಿಕ ಅಭಿವೃದ್ಧಿಯನ್ನು ಪಡೆಯಬಹುದು ಎಂದು ತಿಳಿಸಿದರು.
ಗ್ರಾಮ ಪಂಚಾಯ್ತಿ ಅಧ್ಯಕ್ಷ ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯ್ತಿ ಸದಸ್ಯರಾದ ಶ್ವೇತಾ ಬಂಡಿ, ಕಲಗೋಡು ರತ್ನಾಕರ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ವಾಸಪ್ಪ ಗೌಡ, ಉಪಾಧ್ಯಕ್ಷ ಸುಶೀಲ ರಘುಪತಿ, ತಾಲ್ಲೂಕು ಪಂಚಾಯ್ತಿ ಸದಸ್ಯರಾದ ಎನ್.ಚಂದ್ರೇಶ್, ಎರಗಿ ಉಮೇಶ, ಶಕುಂತಲಾ ರಾಮಚಂದ್ರ, ಎಪಿಎಂಸಿ ಅಧ್ಯಕ್ಷ ಬಿ.ಪಿ. ರಾಮಚಂದ್ರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.