ADVERTISEMENT

200 ವಸತಿಶಾಲೆ ಪ್ರಾರಂಭಿಸಲು ಚಿಂತನೆ

ಸಮಾಜಕಲ್ಯಾಣ ಸಚಿವ ಎಚ್.ಆಂಜನೇಯ ಮಾಹಿತಿ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2014, 9:36 IST
Last Updated 1 ನವೆಂಬರ್ 2014, 9:36 IST

ಸೊರಬ: ಸಮಾಜವಾದಿ ಹೋರಾಟಕ್ಕೆ ಸಾಕ್ಷಿಯಾಗಿರುವ ಶಿವಮೊಗ್ಗ ಅಪರೂಪದ ಜಿಲ್ಲೆಯಾಗಿದ್ದು, ರಾಜ್ಯಕ್ಕೆ ಜೆ.ಎಚ್.ಪಟೇಲ್ ಸೇರಿದಂತೆ ನಾಲ್ವರು ಮುಖ್ಯಮಂತ್ರಿಗಳನ್ನು ನೀಡಿದ ಹಾಗೂ ಕಾಗೋಡು ಹೋರಾಟಕ್ಕೆ ಜೀವ ತುಂಬಿದ ರಾಜಕೀಯ ಗರಡಿ ಮನೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅಭಿಪ್ರಾಯ ಪಟ್ಟರು.

ಶುಕ್ರವಾರ ತಾಲ್ಲೂಕಿನ ಹಿರೇಮಾಗಡಿಯಲ್ಲಿ ನಿರ್ಮಿಸಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ಖಾಸಗಿ ಶಾಲೆಯಲ್ಲಿನ ಶಿಕ್ಷಣಕ್ಕೆ ಸಮನಾಗಿ  ಸರ್ಕಾರ ಬಡ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ  ಹಲವು ಯೋಜನೆಗಳನ್ನು ರೂಪಿಸಿದೆ. ಗ್ರಾಮೀಣ ಪ್ರದೇಶದಲ್ಲಿ ಸುಧಾರಿತ ಶಿಕ್ಷಣವನ್ನು ನೀಡಲು ಸರ್ಕಾರ ಮುಂದಾಗಿದೆ ಎಂದು ಅವರು ತಿಳಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಸುಧಾರಿತ ಶಿಕ್ಷಣ ನೀಡಲು ಸರ್ಕಾರ ಮುಂದಾಗಿದ್ದು, ರಾಜ್ಯದಲ್ಲಿ ಹೋಬಳಿಗೊಂದರಂತೆ 200 ವಸತಿ ಶಾಲೆಗಳನ್ನು ಪ್ರಾರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

ತಾಲ್ಲೂಕಿನ ಹುಣಸವಳ್ಳಿ ಗ್ರಾಮದಲ್ಲಿ ₨ 10 ಕೋಟಿ ವೆಚ್ಚದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ  ಶಾಲೆ ಪ್ರಾರಂಭಿಸಲು ಜಾಗದ ಸರ್ವೇ ನಡೆಸುವಂತೆ ತಹಶೀಲ್ದಾರರಿಗೆ ಸೂಚಿಸಿದರು.

ಪ್ರತಿ ಕ್ಷೇತ್ರದಲ್ಲಿ ಅರಣ್ಯ ಸಮಿತಿ ಮಾಡಿದ್ದು, ಅರಣ್ಯ ಕಾಯ್ದೆಯಡಿ ಮೂರು ತಲೆಮಾರಿನಿಂದ ಸಾಗುವಳಿ ಮಾಡಿದ ಬಗ್ಗೆ ಸಮಿತಿ ಪುರಾವೆ ಒದಗಿಸಿದರೆ ತಕ್ಷಣ ಸರ್ಕಾರದಿಂದ ಆ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ಮಧು ಬಂಗಾರಪ್ಪ ಮಾತನಾಡಿ, ಈಗಾಗಲೇ ಅನೇಕ ಕಡೆಗಳಲ್ಲಿ ಸೊಪ್ಪಿನ ಬೆಟ್ಟ, ಅರಣ್ಯ ಭೂಮಿ ಸಾಗುವಳಿ ಮಾಡುತ್ತಿರುವವರನ್ನು ಸರ್ಕಾರ ಅಧಿಕಾರಿಗಳ ಮೂಲಕ ತೆರವುಗೊಳಿಸಿದೆ. ಸರ್ಕಾರ ಈ ಕ್ರಮವನ್ನು ಸಾಗುವಳಿದಾರರ ಹಿತದೃಷ್ಟಿಯಿಂದ ನಿಲ್ಲಿಸಬೇಕು ಎಂದ ಅವರು, ರಾಜ್ಯದೆಲ್ಲೆಡೆ  ಬಗರ್‌–ಹುಕುಂ ಜಮೀನು ನಂಬಿಕೊಂಡು ಜೀವನ ನಡೆಸುವ ಕುಟುಂಬಗಳು ಹೆಚ್ಚಾಗಿರುವುದರಿಂದ ಬಡ ಕುಟುಂಬಗಳ ರಕ್ಷಣೆಗೆ ಸರ್ಕಾರ ಹಕ್ಕುಪತ್ರ ವಿತರಿಸಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.

ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಬರಗಿ ನಿಂಗಪ್ಪ, ಉಪಾಧ್ಯಕ್ಷೆ ನೀಲಮ್ಮ ಸುರೇಶ್, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಜಯಶೀಲಪ್ಪ, ಹಂಚಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ನಾಗಪ್ಪ, ಇಒ ಇಸ್ಮಾಯಿಲ್ ಖಾನ್, ತಹಶೀಲ್ದಾರ್ ಕವಿತಾ ಯೋಗಪ್ಪನವರ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಬಾಲರಾಜ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ರವಿಕುಮಾರ್, ಪ್ರಾಂಶುಪಾಲ ಠಾಕ್ರಾ್ಯನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.