ADVERTISEMENT

ಅಡುಗೆ ಅನಿಲ ಬಳಸಿ ಕಾಡು, ಆರೋಗ್ಯ ರಕ್ಷಿಸಿ

ಸ್ಟೌ ವಿತರಣೆ ಕಾರ್ಯಕ್ರಮದಲ್ಲಿ ಶಾಸಕ ಸುರೇಶ್‌ಬಾಬು

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2017, 8:31 IST
Last Updated 28 ಮಾರ್ಚ್ 2017, 8:31 IST
ಚಿಕ್ಕನಾಯಕನಹಳ್ಳಿ: ‘ಕಾಡು ಮತ್ತು ಗ್ರಾಮೀಣ ಪ್ರದೇಶದ ಜನರ ಆರೋಗ್ಯ ರಕ್ಷಣೆಗೆ ಅರಣ್ಯ ಇಲಾಖೆಯು ಅಡುಗೆ ಅನಿಲ ಸಿಲಿಂಡರ್ ಕಲ್ಪಿಸುತ್ತಿದೆ. ಇದರ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಶಾಸಕ ಸಿ.ಬಿ.ಸುರೇಶ್ ಹೇಳಿದರು.
 
ಪಟ್ಟಣದ ಅರಣ್ಯ ಇಲಾಖೆ ಕಚೇರಿ ಆವರಣದಲ್ಲಿ ಸೋಮವಾರ ನಡೆದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಅಭಿವೃದ್ಧಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಅಡುಗೆ ಅನಿಲ ಸಿಲಿಂಡರ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
 
‘ಗಿಡ–ಮರಗಳನ್ನು ಕಡಿಯುತ್ತಿರುವುದು ಸಾರ್ವಜನಿಕರೇ.  ಇನ್ನು ಮುಂದೆ ಇಂತಹ ಕೆಲಸ ಮಾಡದೇ ಕಾಡು ಉಳಿಸಿ ಬೆಳೆಸುವಲ್ಲಿ ಎಲ್ಲರೂ ಮುಂದಾಗಬೇಕು’  ಎಂದು ತಿಳಿಸಿದರು.
 
ತಾಲ್ಲೂಕು ಪಂಚಾಯಿತಿ ಸದಸ್ಯ ಸಿಂಗದಹಳ್ಳಿ ರಾಜಕುಮಾರ್ ಮಾತನಾಡಿ, ಅಡುಗೆ ಅನಿಲ ಸಿಲಿಂಡರ್ ಬಳಕೆ ಅನುಕೂಲತೆಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಸುರಕ್ಷತಾ ಕ್ರಮಗಳ ಬಗ್ಗೆ ತಿಳಿಸಿಕೊಡಬೇಕು ಎಂದರು.
 
ಯಾವುದೇ ಮೂಢ ನಂಬಿಕೆಯಿಂದ ಗುಡ್ಡಕ್ಕೆ ಬೆಂಕಿ ಹಚ್ಚಿದರೆ ಅರಣ್ಯ ಸಂಪತ್ತು ನಾಶವಾಗುತ್ತದೆ.  ಈ ರೀತಿ ಬೆಂಕಿ ಹಚ್ಚುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯ ಮಾಡಿದರು.
 
ಜಿಲ್ಲಾ ಪಂಚಾಯಿತಿ ಸದಸ್ಯ ಕಲ್ಲೇಶ್ ಮಾತನಾಡಿ, ‘ಸರ್ಕಾರದ ಇಂತಹ ಯೋಜನೆಯಿಂದ ಬಡವರಿಗೆ ಅನುಕೂಲವಾಗುತ್ತದೆ. ಅರ್ಹ ಫಲಾನುಭವಿಗಳಿಗೆ ಇವು ತಲುಪಬೇಕು. ಕಾಡಿದ್ದರೆ ಮಳೆ, ನೀರು,ನೆರಳು ಎಂಬ ತಿಳಿವಳಿಕೆಯನ್ನು ಇನ್ನೂ ಹೆಚ್ಚು  ಮೂಡಿಸಬೇಕು’ ಎಂದು ತಿಳಿಸಿದರು.
 
ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಹೊನ್ನಮ್ಮ, ಜಿಲ್ಲಾ ಪಂಚಾಯಿತಿ ಸದಸ್ಯ ಕಲ್ಲೇಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗಭೂಷಣ್, ಅರಣ್ಯಾಧಿಕಾರಿ ಲಕ್ಷ್ಮಿನಾರಾಯಣ್ ಇದ್ದರು.

5 ಗ್ರಾಮದ ಫಲಾನುಭವಿಗಳಿಗೆ ವಿತರಣೆ: ಕಾಡಂಚಿನ ಗ್ರಾಮಗಳಾದ ಯರೇಕಟ್ಟೆ, ದೊಡ್ಡರಾಂಪುರ, ಚಿಕ್ಕರಾಂಪುರ, ತೀರ್ಥಪುರ, ಸೊಂಡೆನಹಳ್ಳಿ ಭಾಗದ ಫಲಾನುಭವಿಗಳಿಗೆ ಅಡುಗೆ ಅನಿಲ ಸಿಲಿಂಡರ್ ಮತ್ತು ಸ್ಟೌ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.