ತುಮಕೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಮಂಗಳವಾರ ಬೆಳ್ಳಂಬೆಳಿಗ್ಗೆ ತುಮಕೂರು ಉಪವಿಭಾಗಾಧಿಕಾರಿ ತಿಪ್ಪೇಸ್ವಾಮಿ ಅವರ ಶಿರಾಗೇಟ್ ಸಮೀಪವಿರುವ ನಿವಾಸ, ಕಚೇರಿ ಹಾಗೂ ವಸತಿ ಗೃಹದ ಮೇಲೆ ಏಕಕಾಲಕ್ಕೆ ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳು ದಾಳಿ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ತಿಪ್ಪೇಸ್ವಾಮಿ ಅವರ ಕಚೇರಿ ಮೇಲೆ ದಾವಣಗೆರೆ ಎಸಿಬಿ ಇನ್ಸ್ಪೆಕ್ಟರ್ ಅಡವೀಶ್ ಗದ್ದಿಗೆಕೊಪ್ಪ ನೇತೃತ್ವದಲ್ಲಿ, ನಿವಾಸದ ಮೇಲೆ ಚಿತ್ರದುರ್ಗ ಎಸಿಬಿ ಡಿವೈಎಸ್ಪಿ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಯಿತು.
ಚಿತ್ರದುರ್ಗ ತಾಲ್ಲೂಕಿನ ಬೆಳಗಟ್ಟ ಹಾಗೂ ದೊಡ್ಡ ಸಿದ್ದವ್ವನಹಳ್ಳಿ ಗ್ರಾಮದಲ್ಲಿ ಇರುವ ಅವರ ಎರಡು ನಿವಾಸಗಳ ಮೇಲೂ ದಾಳಿ ನಡೆದಿದೆ. ದಾಖಲೆಗಳನ್ನು ಸಂಗ್ರಹಿಸಿದ್ದು ಅಧಿಕಾರಿಗಳು ಕಡತಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
1999-2000ರಲ್ಲಿ ತಿಪ್ಪೇಸ್ವಾಮಿ ಅವರು ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ನಂತರ ಹಿರಿಯೂರು ತಹಶೀಲ್ದಾರ್, ಚಿತ್ರದುರ್ಗ ಉಪವಿಭಾಗಾಧಿಕಾರಿ ಆಗಿದ್ದರು. ಅದೇ ಸಮಯದಲ್ಲಿ ಲಂಚ ಪ್ರಕರಣವೊಂದರಲ್ಲಿ ಸಿಕ್ಕಿ ಬಿದಿದ್ದರು. ಆಗ ನೆಲಮಂಗಲಕ್ಕೆ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿತ್ತು. ನಂತರ ತುಮಕೂರು ಉಪವಿಭಾಗಾಧಿಕಾರಿಯಾಗಿ ನಿಯೋಜಿತರಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.