ತಿಪಟೂರು: ಸಂಭ್ರಮಾಚರಣೆ ಸಂದರ್ಭದಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ತಾಲ್ಲೂಕು ಘಟಕದ ಅಧ್ಯಕ್ಷ ಫೈರೋಜ್ ಅವರ ಕಪಾಳಕ್ಕೆ ಏಕಾಏಕಿ ನಗರಠಾಣೆ ಸಿಪಿಐ ದೀಪಕ್ ಹೆಗ್ಡೆ ಹೊಡೆದಿದ್ದನ್ನು ಖಂಡಿಸಿ ಕ್ಷಮೆ ಕೋರುವಂತೆ ಒತ್ತಾಯಿಸಿ ನಗರಠಾಣೆ ಮುಂಭಾಗ ಜೆಡಿಎಸ್ ಕಾರ್ಯಕರ್ತರು ಪ್ರತಿಭಟಿಸಿದರು.
ಸ್ಥಳಕ್ಕೆ ಭೇಟಿ ನೀಡಿದ ಡಿವೈಎಸ್ಪಿ ಸಿಪಿಐ ದೀಪಕ್ ಹೆಗ್ಡೆ ಅವರಿಗೆ ಕ್ಷಮೆ ಕೋರುವಂತೆ ಸೂಚಿಸಿದರು. ಕ್ಷಮೆ ಕೋರಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.
ಹಿನ್ನೆಲೆ: ಎಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಹಾಗೂ ಕಾಂಗ್ರೆಸ್ನ ರಾಜ್ಯ ಘಟಕದ ಅಧ್ಯಕ್ಷ ಜಿ.ಪರಮೇಶ್ವರ್ ಅವರು 16ನೇ ಉಪಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ನಗರದ ಸಿಂಗ್ರಿ ನಂಜಪ್ಪ ವೃತ್ತ ಹಾಗೂ ಪ್ರವಾಸಿ ಮಂದಿರದ ಎದುರಿನ ಅಂಬೇಡ್ಕರ್ ವೃತ್ತದಲ್ಲಿ ಎರಡೂ ಪಕ್ಷಗಳ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.
ತಾಲ್ಲೂಕು ಜೆಡಿಎಸ್ ಕಾರ್ಯಾಧ್ಯಕ್ಷ ಶಿವಸ್ವಾಮಿ, ನಗರಸಭೆ ಸದಸ್ಯರಾದ ಮಾರನಗೆರೆ ನಿಜಗುಣ, ಸೊಪ್ಪು ಗಣೇಶ್, ಎಪಿಎಂಸಿ ಸದಸ್ಯ ಬಸವರಾಜು, ಜೆಡಿಎಸ್ ನಗರ ಯುವ ಘಟಕದ ಅಧ್ಯಕ್ಷ ಹರೀಶ್, ಕುಮಾರಣ್ಣ ಹಾಗೂ ಕಾಂಗ್ರೆಸ್ ಮುಖಂಡರಾದ ನಗರಸಭೆ ಅಧ್ಯಕ್ಷ ಟಿ.ಎನ್.ಪ್ರಕಾಶ್, ಎಪಿಎಂಸಿ ಅಧ್ಯಕ್ಷ ರವಿಕುಮಾರ್, ಮುಖಂಡರಾದ ಜಯಣ್ಣ, ಸೋಮಶೇಖರ್, ವಕ್ತಾರ ಸದಾಶಿವಯ್ಯ ಕಾಂಗ್ರೆಸ್, ಜೆಡಿಎಸ್, ಕಾರ್ಯಕರ್ತರು, ಮುಖಂಡರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.