ADVERTISEMENT

ಗೈರಾದ ಅಧಿಕಾರಿಗಳಿಗೆ ನೋಟಿಸ್: ತೀರ್ಮಾನ

​ಪ್ರಜಾವಾಣಿ ವಾರ್ತೆ
Published 14 ಮೇ 2017, 5:21 IST
Last Updated 14 ಮೇ 2017, 5:21 IST

ಮಧುಗಿರಿ: ತಾಲ್ಲೂಕು ಪಂಚಾಯಿತಿ ಮಾಸಿಕ ಪ್ರಗತಿ ಪರಿಶೀಲನಾ ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್ ನೀಡಿ ಅದರ ಪ್ರತಿಯನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಕಳುಹಿಸಲು ತಾಲ್ಲೂಕು ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ತೀರ್ಮಾನಿಸಲಾಯಿತು.

‘ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಇಂದಿರಾ ಮಾತನಾಡಿ ‘ತಾಲ್ಲೂಕಿನ ತಿಪ್ಪಾಪುರ ಗ್ರಾಮದಲ್ಲಿ ಅಕ್ರಮ ಮದ್ಯ ಸೇವನೆಯಿಂದ ಯುವಕನೊಬ್ಬ ಸಾವನ್ನಪ್ಪಿದ್ದು, ಅಕ್ರಮ ಮದ್ಯ ಮಾರಾಟಗಾರರ ವಿರುದ್ಧ ಮೊಕದ್ದಮೆ ದಾಖಲು ಮಾಡಬೇಕು, ಸಮರ್ಪಕವಾಗಿ ಕೆಲಸ  ಮಾಡದ ಅಬಕಾರಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ’ ನೀಡಿದರು.

‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಪ್ರಸ್ತುತ ₹ 17 ಲಕ್ಷ ಬಿಡುಗಡೆಯಾಗಿದೆ. ಆ ಹಣದಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಲು ತೀರ್ಮಾನಿಸಲಾಯಿತು ಗರ್ಭಿಣಿ ಮತ್ತು ಬಾಣಂತಿಯರಿಗೆ ಅಂಗನವಾಡಿ ಮೂಲಕ ಪೌಷ್ಟಿಕಾಂಶವುಳ್ಳ ಆಹಾರ ನೀಡಲಾಗುತ್ತಿದೆ’ ಎಂದು ಸಿಡಿಪಿಓ ಕೆಂಪಹನುಮಯ್ಯ ತಿಳಿಸಿದರು.

ADVERTISEMENT

‘ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯಿಂದ 147 ಕೊಳವೆ ಬಾವಿಗಳನ್ನು ಕೊರೆಸಲಾಗಿದೆ. ಬಹುತೇಕ ಯಶಸ್ವಿಯಾಗಿವೆ. ಕೊಡಿಗೇನಹಳ್ಳಿ ಹೋಬಳಿ ಕಸಿನಾಯಕನಹಳ್ಳಿ ಗ್ರಾಮದಲ್ಲಿ ಮಾತ್ರ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಯಾವುದೇ ರೀತಿ ತೊಂದರೆ ಆಗದಂತೆ ಆಗದಂತೆ ಅಗತ್ಯ ಗಮನ ಹರಿಸಲಾಗಿದೆ’ ಎಂದು ಅಧಿಕಾರಿ ಬ್ರಹ್ಮದೇವ್ ಸಭೆಗೆ ಮಾಹಿತಿ ನೀಡಿದರು.

ತಾಲ್ಲೂಕು ಪಂಚಾಯಿತಿ ಇಒ ಎಚ್.ಡಿ. ಮಹಾಲಿಂಗಯ್ಯ, ಉಪಾಧ್ಯಕ್ಷ ಲಕ್ಷ್ಮೀನರಸಪ್ಪ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸೊಸೈಟಿ ರಾಮಣ್ಣ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಅಂಕಿ–ಅಂಶ

21 ಪೂರ್ಣಗೊಂಡ ಅಂಗನವಾಡಿ ಕಟ್ಟಡಗಳು

81 ತಾಲ್ಲೂಕಿನ ಅಪೌಷ್ಟಿಕತೆಯುಳ್ಳ ಮಕ್ಕಳು

₹2ಸಾವಿರ ಮಕ್ಕಳ ಚಿಕಿತ್ಸೆಗೆ ಖರ್ಚಾಗುತ್ತಿರುವ ಹಣ

3800 ಗರ್ಭಿಣಿ ಮತ್ತು ಬಾಣಂತಿಯರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.