ತುಮಕೂರು: ಜಿಲ್ಲೆಯಲ್ಲಿ ಕಾಂಗ್ರೆಸ್ ಪರಿಸ್ಥಿತಿ ಬಗ್ಗೆ ತಿಳಿಯಲು ಗುರುವಾರ ನಗರದಲ್ಲಿ ಪಕ್ಷದ ಶಾಸಕರು, ಪದಾಧಿಕಾರಿಗಳ ಸಭೆ ನಡೆಸಿದ ಎಐಸಿಸಿ ಕಾರ್ಯದರ್ಶಿ ಮಧು ಗೌಡ ಯಷ್ಕಿ ಅವರು ಎಲ್ಲರಿಂದಲೂ ಪ್ರತ್ಯೇಕವಾಗಿ ಮಾಹಿತಿ ಸಂಗ್ರಹಿಸಿದರು.
ಜಿಲ್ಲೆಯಲ್ಲಿನ ರಾಜಕೀಯ ಬೆಳವಣಿಗೆಗಳು, ಪಕ್ಷದ ಪರಿಸ್ಥಿತಿ, ಕಾರ್ಯಕರ್ತರ ಮನಸ್ಥಿತಿ ಕುರಿತು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ರಾಮಕೃಷ್ಣ ಅವರಿಂದ ಮಾಹಿತಿ ಪಡೆದುಕೊಂಡರು.
ಮುಂಬರುವ ವಿಧಾನಸಭೆ ಚುನಾವಣೆಗೆ ಪಕ್ಷದ ಸಿದ್ಧತೆ, ಯಾವ, ಯಾವ ಕ್ಷೇತ್ರದಲ್ಲಿ ಗಟ್ಟಿಯಾಗಿದೆ, ಯಾವ ಕ್ಷೇತ್ರದಲ್ಲಿ ಹಿಂದುಳಿದಿದ್ದೇವೆ. ಅಲ್ಲಿನ ಮುಖಂಡರ ಪರಿಸ್ಥಿತಿ ಹೇಗಿದೆ ಎಂಬ ವಿವರವನ್ನು ಸಚಿವ ಟಿ.ಬಿ.ಜಯಚಂದ್ರ, ಸಂಸದ ಎಸ್.ಪಿ.ಮುದ್ದಹನುಮೇಗೌಡ, ಶಾಸಕ ಕೆ.ಎನ್.ರಾಜಣ್ಣ ಅವರಿಂದ ಪಡೆದರು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಕಳೆದ ಚುನಾವಣೆಯಲ್ಲಿ ಪರಾಜಿತಗೊಂಡಿದ್ದ ಅಭ್ಯರ್ಥಿಗಳು, ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ಜಿಲ್ಲಾ, ತಾಲ್ಲೂಕು ಪಂಚಾಯಿತಿಯ ಕೆಲವು ಸದಸ್ಯರಿಂದಲೂ ಮಾಹಿತಿ ಸಂಗ್ರಹಿಸಿದರು.
‘ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕಾಲದ ಕಾಂಗ್ರೆಸ್ಸನ್ನು ಪುನರ್ ಸ್ಥಾಪಿಸಬೇಕು. ಇದು ಕರ್ನಾಟಕದಿಂದಲೇ ಆರಂಭವಾಗಬೇಕು. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಉತ್ತಮ ಕೆಲಸಗಳನ್ನು ಮಾಡಿದೆ’ ಎಂದು ಹೇಳಿದರು.
‘ ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಆಡಳಿತಾವಧಿಯಲ್ಲಿ ಆ ಪಕ್ಷದ ಅನೇಕ ಸಚಿವರು ಜೈಲಿಗೆ ಹೋಗಿ ಬಂದರು. ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆ ಪ್ರಚಾರದ ವೇಳೆ ನೀಡಿದ್ದ ಯಾವ ಭರವಸೆಗಳನ್ನು ಈಡೇರಿಸಿಲ್ಲ’ ಎಂದು ಆರೋಪಿಸಿದರು.
ಕೆಪಿಸಿಸಿ ಕಾರ್ಯದರ್ಶಿಗಳಾದ ಆನಂದ್, ನೂರಜಾನ್, ನಾಗಲಕ್ಷ್ಮಿ, ಶಾಸಕ ಎಸ್. ಷಡಕ್ಷರಿ, ಮುಖಂಡರಾದ ಎಂ.ಡಿ. ಲಕ್ಷ್ಮಿನಾರಾಯಣ, ಷಫಿ ಆಹಮ್ಮದ್, ರಾಮಸ್ವಾಮಿಗೌಡ, ಅಪ್ತಬ್, ಹೊನ್ನಗಿರಿಗೌಡ, ಸಾಸಲು ಸತೀಶ್, ಯಲಚವಾಡಿ ನಾಗರಾಜ್, ಕೆಂಚಮಾರಯ್ಯ, ರೆಡ್ಡಿ ಚಿನ್ನಯಲ್ಲಪ್ಪ, ಟಿ.ಬಿ.ಮಲ್ಲೇಶ್, ಎಚ್. ಹೇಮಂತ್ ಕುಮಾರ್, ಸುಜಾತಾ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.