ಉಡುಪಿ: ‘ದೇಶದ ಸಂವಿಧಾನವನ್ನು ಅಂಬೇಡ್ಕರ್ ಅವರೊಬ್ಬರೇ ರಚಿಸಿಲ್ಲ. ಸಂವಿಧಾನ ರಚನೆಯ ಸಮಿತಿಯಲ್ಲಿ ಅವರೂ ಒಬ್ಬರಾಗಿದ್ದರು’ ಎಂದು ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು.
ಧರ್ಮ ಸಂಸತ್ ಸಭಾಂಗಣದ ಆವರಣದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂವಿಧಾನ ತಿದ್ದುಪಡಿಗೆ ಸಂಬಂಧಿಸಿದಂತೆ ತಾವು ಶುಕ್ರವಾರ ನೀಡಿದ್ದ ಹೇಳಿಕೆ ವಿರೋಧಿಸಿ ದಲಿತ ಸಂಘಟನೆಗಳು ರಾಜ್ಯದ ಕೆಲವೆಡೆ ಪ್ರತಿಭಟನೆ ನಡೆಸಿರುವುದಕ್ಕೆ ಅವರು ಪ್ರತಿಕ್ರಿಯಿಸಿದರು.
‘ಸಂವಿಧಾನವನ್ನು ಬದಲಾವಣೆ ಮಾಡಬೇಕು ಎಂದು ನಾನು ಹೇಳಿಲ್ಲ. ಅಲ್ಪಸಂಖ್ಯಾತರಿಗೆ ನೀಡುವ ಸೌಲಭ್ಯಗಳನ್ನು ಬಹುಸಂಖ್ಯಾತರಿಗೂ ನೀಡಲು ಸಂವಿಧಾನ ತಿದ್ದುಪಡಿ ಮಾಡಬೇಕು ಎಂದು ಆಗ್ರಹಿಸಿದ್ದೆ’ ಎಂದರು.
ಅಂಬೇಡ್ಕರ್ ರಚಿಸಿರುವ ಸಂವಿಧಾನ ಬದಲಾವಣೆಗೆ ಒತ್ತಾಯಿಸಿರುವುದಾಗಿ ಭಾವಿಸಿ ಪ್ರತಿಭಟಿಸುತ್ತಿದ್ದಾರೆ ಎಂದು ಪತ್ರಕರ್ತರೊಬ್ಬರು ಹೇಳಿದಾಗ ಪ್ರತಿಕ್ರಿಯಿಸಿದ ಸ್ವಾಮೀಜಿ, ‘ಅಂಬೇಡ್ಕರ್ ಅವರೊಬ್ಬರೇ ಸಂವಿಧಾನ ರಚಿಸಿಲ್ಲ. ಹಲವು ತಜ್ಞರು ಒಗ್ಗೂಡಿ ರಚಿಸಿದ್ದಾರೆ. ಅಂಬೇಡ್ಕರ್ ಅವರೂ ಒಬ್ಬರಾಗಿದ್ದು, ಸಮಿತಿಯ ಅಧ್ಯಕ್ಷ ಸ್ಥಾನದಲ್ಲಿದ್ದರು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.