ADVERTISEMENT

ಉಡುಪಿ: ಕಾರ್ಯಕರ್ತರಿಂದ ವಿಜಯೋತ್ಸವ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2017, 6:06 IST
Last Updated 19 ಡಿಸೆಂಬರ್ 2017, 6:06 IST

ಉಡುಪಿ: ಅಭಿವೃದ್ಧಿಯ ಪರವಾಗಿ ಗುಜರಾತ್‌ನ ಮತದಾರರು ಮತ ಚಲಾಯಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು. ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿದ ನಂತರ ಬಿಜೆಪಿ ಕಚೇರಿ ಎದುರು ನಡೆದ ವಿಜಯೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು.

ಕಳೆದ 22 ವರ್ಷಗಳಿಂದ ಬಿಜೆಪಿ ಗುಜರಾತ್‌ನಲ್ಲಿ ಆಡಳಿತದಲ್ಲಿದ್ದು ರಾಜ್ಯದ ಅಭಿವೃದ್ಧಿಗೆ ಒತ್ತು ನೀಡಿದೆ. ಉತ್ತಮ ರಸ್ತೆಗಳು ರಾಜ್ಯದೆಲ್ಲೆಡೆ ಕಾಣಸಿಗುತ್ತವೆ. ಕುಡಿಯುವ ನೀರಿನ ಪೂರೈಕೆ ಹಾಗೂ ನೀರಾವರಿಗೂ ಆದ್ಯತೆ ನೀಡಿದೆ. ಎಲ್ಲ ಕ್ಷೇತ್ರಗಳಲ್ಲಿಯೂ ಪ್ರಗತಿ ಸಾಧಿಸಿದೆ. ಬಿಜೆಪಿಯ ಕೆಲಸವನ್ನು ಮೆಚ್ಚಿ ಅಲ್ಲಿನ ಮತದಾರರು ಪಕ್ಷವನ್ನು ಬೆಂಬಲಿಸಿದ್ದಾರೆ ಎಂದರು.

ಕೆಲವೇ ತಿಂಗಳಿನಲ್ಲಿ ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆಯ ಲಿದ್ದು, ಬಿಜೆಪಿ ಪಕ್ಷ ಉತ್ತಮ ಸಾಧನೆ ಮಾಡಿ ಅಧಿಕಾರ ಹಿಡಿಯಲಿದೆ. 150 ಸೀಟುಗಳನ್ನು ಗೆಲ್ಲುವ ಉದ್ದೇಶದೊಂದಿಗೆ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಈಗಾಗಲೇ ಪರಿವರ್ತನಾ ಯಾತ್ರೆ ಆರಂಭಿಸಿದ್ದಾರೆ. ನಿಶ್ಚಿತವಾಗಿ ರಾಜ್ಯದ ಲ್ಲಿಯೂ ಅಧಿಕಾರದ ಗದ್ದುಗೆ ಏರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ಪಟಾಕಿ ಸಿಡಿಸಿ ಸಂಭ್ರಮಿಸಿದ ಸದಸ್ಯರು ಪರಸ್ಪರ ಸಿಹಿ ತಿನಿಸಿದರು. ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿ ಘೋಷಣೆ ಕೂಗಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಸುಪ್ರಸಾದ ಶೆಟ್ಟಿ, ಕಟಪಾಡಿ ಶಂಕರ ಪೂಜಾರಿ, ಯಶ್‌ಪಾಲ್ ಸುವರ್ಣ, ಮಾಜಿ ಶಾಸಕ ಲಾಲಾಜಿ ಮೆಂಡನ್, ಗೀತಾಂಜಲಿ ಸುವರ್ಣ, ಕುಯಿಲಾಡಿ ಸುರೇಶ್ ನಾಯಕ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.