ಉಡುಪಿ: ಕೇಂದ್ರ ಸರ್ಕಾರದ ಜನ ವಿರೋಧಿ ಧೋರಣೆಯನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ಕಾರ್ಯಕರ್ತರು ನಗರದ ಸರ್ವಿಸ್ ಬಸ್ ನಿಲ್ದಾಣದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಎಸ್ಡಿಪಿಐ ಉಡುಪಿ ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ರೆಹಮಾನ್ ಮಲ್ಪೆ ಮಾತನಾಡಿ, ಕಳೆದ 60 ವರ್ಷಗಳಿಂದ ದೇಶದಲ್ಲಿ ಜನವಿರೋಧಿ ನೀತಿ ಇದೆ. ಹಿಂದಿನ ಎಲ್ಲಾ ಸರ್ಕಾರಗಳು ಕೂಡ ಜನರನ್ನು ವಿನಾಶದತ್ತಾ ಕೊಂಡೊಯ್ಯಿದಿದೆ.
ಆದರೆ, ಜನರು ಬದಲಾವಣೆ ಬಯಸಿ ನರೇಂದ್ರ ಮೋದಿ ಅವರಿಗೆ ಅಧಿಕಾರವನ್ನು ನೀಡಿದರು. ಆದರೂ ದೇಶದಲ್ಲಿ ಬದಲಾವಣೆ ಆಗಿಲ್ಲ. ಮೋದಿ ಅವರು ಪ್ರಧಾನಿ ಹುದ್ದೆಯನ್ನು ಅಲಂಕರಿಸಿದ ಮೇಲೆ ದೇಶದ ಪರಿಸ್ಥಿತಿ ಮತ್ತಷ್ಟು ಅದೋಗತಿಗೆ ತಲುಪಿದೆ ಎಂದು ಟೀಕಿಸಿದರು.
ದೇಶದ ಸಂಸತ್ತಿನಲ್ಲಿ ಜನರ ಸಮಸ್ಯೆಯ ಬಗ್ಗೆ ಚರ್ಚೆಯಾಗುತ್ತಿಲ್ಲ. ಬದಲಾಗಿ ಜನರು ಸೇವಿಸುವ ಆಹಾರದ ಕುರಿತು ಚರ್ಚೆ ನಡೆಯುತ್ತಿದೆ. ಜನ ಆಹಾರ ಇಲ್ಲದೆ ಸಾಯುತ್ತಿದ್ದಾರೆ. ದೇಶದಲ್ಲಿ ಆಹಾರದ ಉತ್ಪಾದನೆಯಾಗು ತ್ತಿದ್ದರೂ, ಅದು ಜನರ ಉಪಯೋಗಕ್ಕೆ ಸಿಗುತ್ತಿಲ್ಲ.
ಇನ್ನಾದರೂ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ದೇಶವನ್ನು ಅಭಿವೃದ್ಧಿಯ ಕಡೆಗೆ ಕೊಂಡೊಯ್ಯ ಬೇಕು. ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.
ಉಡುಪಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ನಜೀರ್ ಅಂಬಾಗಿಲು, ಕಾರ್ಯ ದರ್ಶಿ ಸಲೀಂ ಕೊಡಂಕೂರು, ಪಕ್ಷದ ಮುಖಂಡರಾದ ಇಲಿಯಾಸ್ ಸಾಸ್ತಾನ, ರಹೀಂ ಆದಿ ಉಡುಪಿ ಸೇರಿದಂತೆ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.