ADVERTISEMENT

ಕೊಲ್ಲೂರಿನಲ್ಲಿ ಇಂದಿನಿಂದ ನವರಾತ್ರಿ ಉತ್ಸವದ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2017, 7:17 IST
Last Updated 21 ಸೆಪ್ಟೆಂಬರ್ 2017, 7:17 IST
ಕುಂದಾಪುರ ತಾಲ್ಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ
ಕುಂದಾಪುರ ತಾಲ್ಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ   

ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆಯುವ ನವರಾತ್ರಿ ಉತ್ಸವಕ್ಕಾಗಿ ದೇಗುಲದ ಆಡಳಿತ ವ್ಯವಸ್ಥೆ ಸಕಲ ಸಿದ್ದತೆಗಳನ್ನೂ ಮಾಡಿಕೊಂಡಿದ್ದು, ದೇಶ-ವಿದೇಶಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬರಲಿದ್ದಾರೆ.

ನವರಾತ್ರಿಯ ಉತ್ಸವದ ಆಚರಣೆಗಳು ಇದೇ 21 ರಿಂದ 30ರವರೆಗೆ ನಡೆಯಲಿದೆ. ದಿನಂಪ್ರತಿ ಪೂಜೆಗಳ ಜತೆಯಲ್ಲಿ ನವರಾತ್ರಿಯ ವಿಶೇಷ ಪೂಜೆ ಹಾಗೂ ಉತ್ಸವಗಳು ನಡೆಯಲಿವೆ. 29 ರಂದು ಶುಕ್ರವಾರ ಮಹಾನವಮಿಯ ಪ್ರಯುಕ್ತ ಬೆಳಿಗ್ಗೆ 11.30 ಕ್ಕೆ ಚಂಡಿಕಾಯಾಗ ಹಾಗೂ ರಾತ್ರಿ 8.45ಕ್ಕೆ ರಥೋತ್ಸವ ಜರುಗಲಿದೆ. 

30ರಂದು ವಿಜಯದಶಮಿಯ ಪ್ರಯುಕ್ತ ಬೆಳಿಗ್ಗೆ ವಿದ್ಯಾರಂಭ, ನವಾನ್ನ ಪ್ರಾಶನ ಹಾಗೂ ಸಂಜೆ 5.30ಕ್ಕೆ ಶ್ರೀ ಮೂಕಾಂಬಿಕಾ ದೇವಿಯ ವಿಜಯೋತ್ಸವ ನಡೆಯಲಿದೆ. ಉತ್ಸವ ಆಚರಣೆಯ ಅಂಗವಾಗಿ ಪ್ರತಿ ದಿನ ಅಪರಾಹ್ನ 3 ಗಂಟೆಯಿಂದ ರಾತ್ರಿ 11ರ ವರೆಗೆ ದೇಶದ ವಿವಿಧ ಭಾಗದ ಕಲಾ ತಂಡಗಳಿಂದ ಸೇವಾರೂಪವಾಗಿ ಶ್ರೀ ದೇವಳದ ಸ್ವರ್ಣಮುಖಿ ರಂಗಮಂದಿರದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ADVERTISEMENT

ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಹಲವು ಮುಂಜಾಗ್ರತಾ  ಕ್ರಮಗಳನ್ನು ಕೈಗೊಳ್ಳಲಾಗಿದೆ. ವಸತಿ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ.  ಉಚಿತ ತುರ್ತು ಆರೋಗ್ಯ ಚಿಕಿತ್ಸಾ ಕೇಂದ್ರದ ಸೌಲಭ್ಯ ಕಲ್ಪಿಸಲಾಗಿದೆ.

ರೈಲಿನಲ್ಲಿ ಬರುವ ಭಕ್ತರ ಅನುಕೂಲಕ್ಕಾಗಿ ಉಡುಪಿ, ಕುಂದಾಪುರ, ಬೈಂದೂರು ರೈಲ್ವೆ ನಿಲ್ದಾಣಗಳಿಂದ ಕೊಲ್ಲೂರಿಗೆ ನಿರಂತರವಾಗಿ ನೇರ ಸರ್ಕಾರಿ ಬಸ್ ಸೇವೆಯನ್ನು ಕಲ್ಪಿಸಲು ಮಾಹಿತಿ ನೀಡಲಾಗಿದೆ ಎಂದು ತಿಳಿಸಿರುವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್‌ ಎಂ ಶೆಟ್ಟಿ, ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಜನಾರ್ದನ ಜಿ.ಸಿ ಹಾಗೂ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿಯವರು ಪ್ರತಿ ದಿವಸ ಶ್ರೀ ದೇವಳದ ದಾಸೋಹ ಭವನದಲ್ಲಿ ಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ದೀಪಾಲಂಕಾರ: ನವರಾತ್ರಿ ಸಂಭ್ರವದ ಅಂಗವಾಗಿ ದೇವಸ್ಥಾನಕ್ಕೆ ವಿದ್ಯುತ್ ದೀಪ ಹಾಗೂ ಹೂವಿನ ಅಲಂಕಾರ ಮಾಡಲಾಗಿದ್ದು, ಸಂಜೆಯ ಬಳಿಕ ದೇವಸ್ಥಾನದ ವಿದ್ಯುತ್ ಅಲಂಕಾರ ನೋಡುಗರ ಕಣ್ಮನ ಸೆಳೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.