ಪಡುಬಿದ್ರಿ: ‘ಹೆಜಮಾಡಿಯ ಬಸ್ತಿಪಡ್ಪು ರಾಜೀವಗಾಂಧಿ ಕ್ರೀಡಾಂಗಣವನ್ನು ಆಧುನೀಕರಣಗೊಳಿಸಲು ರಾಜ್ಯ ಕ್ರೀಡಾ ಇಲಾಖೆ ₹ 3 ಕೋಟಿ ಅನುದಾನ ನೀಡಿದ್ದು, ಟೆಂಡರ್ ಹಂತದಲ್ಲಿದೆ’ ಎಂದು ಕಾಪು ಶಾಸಕ ವಿನಯಕುಮಾರ್ ಸೊರಕೆ ಹೇಳಿದರು.
ಹೆಜಮಾಡಿ ಸರ್ಕಾರಿ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ಮಂಗಳವಾರ ಹೆಜಮಾಡಿ ಕ್ರೀಡಾಂಗಣದಲ್ಲಿ ನಡೆದ ಉಡುಪಿ ತಾಲ್ಲೂಕು ಮಟ್ಟದ (ದಕ್ಷಿಣ ವಲಯ) ಬಾಲಕರ ಮತ್ತು ಬಾಲಕಿಯರ ಫುಟ್ಬಾಲ್ ಪಂದ್ಯಾಟದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಹೆಜಮಾಡಿ ಕ್ರೀಡಾಂಗಣವನ್ನು ಕ್ರಿಕೆಟ್ ಮಂಡಳಿಯವರು ಅಂತ ರಾಷ್ಟ್ರೀಯ ಮಟ್ಟದ ಕ್ರೀಡಾಂಗಣವ ನ್ನಾಗಿಸುವ ಸಲುವಾಗಿ ಮಾತುಕತೆ ನಡೆಸಿದ್ದು, ಗ್ರಾಮಸ್ಥರ ಸಲಹೆ ಮೇರೆಗೆ ಮುಂದುವರಿಯಲಾಗುವುದು’ ಎಂದು ಹೇಳಿದರು.
ಜಿಲ್ಲಾ ಪಂಚಾಯ್ತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯೀ ಸಮಿತಿ ಅಧ್ಯಕ್ಷ ಶಶಿಕಾಂತ್ ಪಡುಬಿದ್ರಿ ಕ್ರೀಡಾಕೂಟ ಉದ್ಘಾಟಿಸಿದರು. ಹೆಜಮಾಡಿ ಗ್ರಾಪಂ ಅಧ್ಯಕ್ಷೆ ವಿಶಾಲಾಕ್ಷಿ ಪುತ್ರನ್,ತಾಪಂ ಸದಸ್ಯೆ ರೇಣುಕಾ ಪುತ್ರನ್,ಪದವಿ ಪೂರ್ವ ಶಿಕ್ಷಣ ಇಲಾಖಾ ಉಪ ನಿರ್ದೇಶಕಿ ವಿಜಯಲಕ್ಷ್ಮೀ ನಾಯಕ್, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯ ನಾರಾಯಣ ಎಸ್ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯ ಶಿವರಾಮ ಶೆಟ್ಟಿ, ಮಾಜಿ ಸದಸ್ಯ ಅಬ್ದುಲ್ ರಹಿಮಾನ್, ದಲಿತ ಮುಖಂಡ ಶೇಖರ್ ಹೆಜ್ಮಾಡಿ,ಸುಧಾಕರ ಕೆ., ಕ್ರೀಡಾ ಸಂಯೋಜಕ ಚಂದ್ರಶೇಖರ ಶೆಟ್ಟಿ, ಕಾಲೇಜು ಪ್ರಾಂಶುಪಾಲ ವಿನ್ಸೆಂಟ್ ವಿನೋದಾ ಡಿಸೋಜಾ, ಹೈಸ್ಕೂಲ್ ಮುಖ್ಯ ಶಿಕ್ಷಕಿ ಸವಿತಾ ಆರ್.ನಾಯಕ್ ಇದ್ದರು.ದೈಹಿಕ ಶಿಕ್ಷಣ ನಿರ್ದೇಶಕ ಅಲ್ವಿನ್ ಅಂದ್ರಾದೆ ಸ್ವಾಗತಿಸಿದರು. ಸುಜಾತಾ ಬೇಕಲ್ ಕಾರ್ಯಕ್ರಮ ನಿರ್ವಹಿಸಿದರು.ಸದಾನಂದ ನಾಯಕ್ ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.