ಉಡುಪಿ: ಬಜೆ ಜಲಾಶಯದಿಂದ ನಿರಂತರವಾಗಿ ನೀರು ಪಂಪ್ ಮಾಡಲು ದಿನದ 24 ಗಂಟೆಯೂ ವಿದ್ಯುತ್ ಪೂರೈಕೆ ಮಾಡಬೇಕು. ಯಾವುದೇ ಕಾರಣಕ್ಕೂ ವಿದ್ಯುತ್ ವ್ಯತ್ಯಯ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಪ್ರಮೋದ್ ಮಧ್ವರಾಜ್ ಸೂಚನೆ ನೀಡಿದರು.
ಕುಡಿಯುವ ನೀರು ಪೂರೈಕೆ ಬಗ್ಗೆ ಚರ್ಚಿಸಲು ಬುಧವಾರ ಕರೆದಿದ್ದ ಮೆಸ್ಕಾಂ ಎಂಜಿನಿಯರ್ ಹಾಗೂ ನಗರಸಭೆ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಒಂದು ಗಂಟೆ ವಿದ್ಯುತ್ ನಿಲುಗಡೆ ಯಾದರೂ 3–4 ದಿನ ನೀರು ಪೂರೈಕೆ ಯಲ್ಲಿ ವ್ಯತ್ಯಯವಾಗಲಿದೆ. ಆದ್ದರಿಂದ ಹಿರಿಯಡಕ ಸಬ್ಸ್ಟೇಷನ್ ಹಾಗೂ ಬಜೆ ಪಂಪಿಂಗ್ ಸ್ಟೇಷನ್ನಲ್ಲಿ ಯಾವುದೇ ರೀತಿಯ ತೊಂದರೆ ಅಗದಂತೆ ನೋಡಿಕೊಳ್ಳಿ. ಒಂದು ವೇಳೆ ವಿದ್ಯುತ್ ಕೈಕೊಟ್ಟು ಜನರಿಗೆ ತೊಂದರೆ ಆದರೆ ಆ ಬಗ್ಗೆ ತನಿಖೆ ನಡೆಸಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ನಗರಸಭೆ ವ್ಯಾಪ್ತಿಯ ಜನರಿಗೆ ಹಾಗೂ ಗ್ರಾಮೀಣ ಪ್ರದೇಶಗಳಿಗೆ ನೀರಿನ ಕೊರತೆ ಆಗದಂತೆ ನೋಡಿಕೊಳ್ಳಿ. ಟ್ಯಾಂಕರ್ ಮೂಲಕ ನೀರು ಪೂರೈಸಲು ಸಹ ಈಗಲೇ ಸಿದ್ಧತೆ ಮಾಡಿಕೊಳ್ಳಿ. ದೂರು ಬಂದೊಡನೆ ನೀರು ತಲುಪಿಸಿ. ನೀರಿನ ಪೂರೈಕೆ ಮೊದಲ ಆದ್ಯತೆಯಾಗಲಿ ಎಂದು ತಾಕೀತು ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.