ಉಡುಪಿ: ಬಿಜೆಪಿ ಸದಸ್ಯರು ನಗರಸಭೆ ಸಾಮಾನ್ಯ ಸಭೆ ನಡೆಸಲು ವಿನಾಕಾರಣ ಅಡ್ಡಿಪಡಿಸುತ್ತಿರುವುದನ್ನು ಖಂಡಿಸಿ ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಸದಸ್ಯರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಬಿಜೆಪಿ ಸದಸ್ಯರಿಗೆ ನಗರದ ಅಭಿವೃದ್ಧಿ ಬೇಕಾಗಿಲ್ಲ. ಒಬ್ಬ ಸಾಮಾನ್ಯ ಮಹಿಳೆ ಅಧ್ಯಕ್ಷೆಯಾಗಿರುವುದನ್ನು ಅವರಿಗೆ ಸಹಿಸಲಾಗದೆ ಕಲಾಪಕ್ಕೆ ತೊಂದರೆಯನ್ನು ಉಂಟು ಮಾಡುತ್ತಿದ್ದಾರೆ. ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಅಮೃತ ಶೆಣೈ ತಿಳಿಸಿದರು.
ನಗರ ಸಭೆಯ ಬಿಜೆಪಿ ಸದಸ್ಯರಿಗೆ ಸಭಾ ನಡವಳಿಕೆಯ ಕುರಿತು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ತರಬೇತಿಯನ್ನು ನೀಡಬೇಕು. ಈ ಬಗ್ಗೆ ತಿಳಿವಳಿಕೆ ನೀಡದೆ ಹೋದರೆ ಸದಸ್ಯರ ದುವರ್ತನೆ ನಗರ ಅಭಿವೃದ್ಧಿಗೆ ಮಾರಕವಾಗಲಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ವೆರೋನಿಕ ಕರ್ನೆಲಿಯೊ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಸದಸ್ಯರ ವಿರುದ್ಧ ಘೋಷಣೆ ಕೂಗಿದ ಅವರು ಆಕ್ರೋಶ ವ್ಯಕ್ತಪಡಿಸಿದರು.
ಸಭೆ ನಡೆಸಲು ಅಡ್ಡಿಪಡಿಸುತ್ತಿರುವ ಹಾಗೂ ಅಧ್ಯಕ್ಷೆ ಮತ್ತು ಉಪಾಧ್ಯಕ್ಷೆ ಅವರಿಗೆ ಅಗೌರವ ತೋರಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ನಗರ ಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವಾ, ಉಪಾಧ್ಯಕ್ಷೆ ಸಂಧ್ಯಾ ತಿಲಕ್ ರಾಜ್, ನಗರದ ಸಭೆ ಸದಸ್ಯ ರಮೇಶ ಕಾಂಚನ್,ಯುವರಾಜ್, ಗಣೇಶ್ ನೇಗಿ, ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ ಗಫೂರ್, ತಾಲ್ಲೂಕು ಪಂಚಾಯಿತಿ ಸದಸ್ಯೆ ಸುನೀತ, ಸೆಲಿನಾ ಕರ್ಕಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಚಂದ್ರಿಕಾ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.