ಉಡುಪಿ: ‘ಬೆಂಗಳೂರನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧ ಜಿ.ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಆದಿ ಉಡುಪಿ ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆದ ಕೆಂಪೇಗೌಡ ಜಯಂತಿ ಆಚರಣೆಯಲ್ಲಿ ಮಾತನಾಡಿದರು.
5 ಶತಮಾನಗಳ ಹಿಂದೆ ಸಾಮಾನ್ಯ ಗ್ರಾಮವನ್ನು ಎಂಬ ಊರನ್ನು ಕೆಂಪೇಗೌಡರು ಜಗತ್ಪ್ರಸಿದ್ದ ಬೆಂಗಳೂರನ್ನಾಗಿ ಪರಿವರ್ತಿಸಿದ್ದಾರೆ’ ಎಂದರು.
‘ರೈತರ ಶ್ರೇಯೋಭಿವೃದ್ಧಿಗಾಗಿ ಹಾಗೂ ಅಲ್ಲಿನ ಜನತೆಯ ನೀರಿನ ಸಮಸ್ಯೆಗಳನ್ನು ನೀಗಿಸಲು ಸಾವಿರಾರು ಕೆರೆಗಳನ್ನು ನಿರ್ಮಿಸಿದ್ದಾರೆ.
ಉತ್ತಮ ಹವಮಾನ, ನೈಸರ್ಗಿಕ ಅನುಕೂಲಗಳಿದ್ದ ಬೆಂಗಳೂರನ್ನು ಉತ್ತಮ ದೂರದೃಷ್ಟಿಯಿಟ್ಟು ಅಭಿವೃದ್ಧಿಪಡಿಸಿದ್ದಾರೆ. ಇಂದು ದೇಶದ ಅನೇಕ ಮೂಲೆಗಳಿಂದ ಉದ್ಯೋಗ ಹರಸಿಕೊಂಡು ಸಾವಿರಾರು ಜನ ಬೆಂಗಳೂರಿಗೆ ಆಗಮಿಸುತ್ತಾರೆ. ಕೆಂಪೇಗೌಡರ ಕೊಡುಗೆ ಇಲ್ಲದಿದ್ದರೆ ಸಿಲಿಕಾನ್ ಸಿಟಿ ಎಂಬ ಹೆಸರು ಬರುತ್ತಿರಲಿಲ್ಲ’ ಎಂದು ಹೇಳಿದರು.
ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೆಂಪೇಗೌಡರು ಬೆಂಗಳೂರಿನಂಥ ಮಹಾನಗರವನ್ನು ಅಭಿವೃದ್ಧಿಪಡಿಸಿ ಜಗತ್ತು ಗುರುತಿಸುವಂತೆ ಮಾಡಿದ್ದಾರೆ. ರೈತರ ಕೃಷಿ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಿದ್ದ ಅವರು ಸಾವಿರಾರು ಕೆರೆಗಳನ್ನು ನಿರ್ಮಿಸಿ ನೀರಿನ ಸಮಸ್ಯೆಯನ್ನು ಹೋಗಲಾಡಿಸಿದ್ದಾರೆ. ವಿದ್ಯಾರ್ಥಿಗಳು ಕೆಂಪೇಗೌಡರ ಬಗ್ಗೆ ಹೆಚ್ಚು ತಿಳಿದುಕೊಳ್ಳಬೇಕು ಎಂದರು ಹೇಳಿದರು.
ಸ.ಪ.ಪೂ. ಕಾಲೇಜು ಹಿರಿಯಡ್ಕದ ಇದರ ಕನ್ನಡ ಉಪನ್ಯಾಸಕಿ ನಳಿನಾದೇವಿ, ಆದಿ ಉಡುಪಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಕವಿತಾ, ಆಡಳಿತ ಮಂಡಳಿಯ ಕಾರ್ಯದರ್ಶಿ ಜಿ.ಕೆ. ಗಣೇಶ್ ಇದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ.ರವಿ ಕುಮಾರ್ ಸ್ವಾಗತಿಸಿ, ಶಂಕರದಾಸ್ ಕಾರ್ಯಕ್ರಮ ನಿರೂಪಿಸಿದರು.
**
ಬೆಂಗಳೂರಿನಲ್ಲಿದ್ದ ನೈಸರ್ಗಿಕ ಅನುಕೂಲಗಳನ್ನು ಸದುಪಯೋಗಪಡಿಸಿ ಬೆಂಗಳೂರನ್ನು ಸಮಗ್ರ ಅಭಿವೃದ್ಧಿಪಡಿಸಿದರು.
ಅನುರಾಧ ಜಿ,
ಹೆಚ್ಚುವರಿ ಜಿಲ್ಲಾಧಿಕಾರಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.