ADVERTISEMENT

ರಾಜ್ಯಕ್ಕೆ ದೊಡ್ಡ ಕೊಡುಗೆ ದೊರೆತಿದೆ: ಸಚಿವ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2017, 9:02 IST
Last Updated 30 ಆಗಸ್ಟ್ 2017, 9:02 IST

ಉಡುಪಿ: ಮಹಿಳಾ ಸ್ವಾವಲಂಬನೆಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಹು ದೊಡ್ಡ ಕೊಡುಗೆ ನೀಡಿದೆ ಎಂದು ಕ್ರೀಡೆ ಮತ್ತು ಯುವಜನ ಸಬಲೀಕರಣ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ತಾಲ್ಲೂಕು, ಪ್ರಗತಿ ಬಂಧು ಸ್ವಸಹಾಯ ಸಂಘ ಒಕ್ಕೂಟಗಳ ಕೇಂದ್ರ ಸಮಿತಿ ಹಾಗೂ 4050 ಸ್ವಸಹಾಯ ಸಂಘಗಳನ್ನು ಒಳಗೊಂಡ 139 ಒಕ್ಕೂಟ ಮಂಗಳವಾರ ನಾರಾಯಣಗುರು ಸಭಾ ಭವನದಲ್ಲಿ ಆಯೋಜಿಸಿದ್ದ ಕೇಂದ್ರ ಸಮಿತಿ ಪದಗ್ರಹಣ ಹಾಗೂ ಸಂಘಗಳಿಗೆ ಲಾಭಾಂಶ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸ್ವಚ್ಛತೆಯಲ್ಲಿ ಉತ್ತಮ ಸಾಧನೆ ಮಾಡಿರುವ ಜಿಲ್ಲೆಗಳಲ್ಲಿ ಉಡುಪಿ ಪ್ರಥಮ ಸ್ಥಾನ ಪಡೆದಿದೆ. ಜಿಲ್ಲೆಯನ್ನು ಅಕ್ಟೋಬರ್ – 2018ರ ಒಳಗೆ ಕಸ ಮುಕ್ತ ಮಾಡುವ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದ್ದು, ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಅವರು ಹೇಳಿದರು.

ADVERTISEMENT

ಸಮುದಾಯ ಅಭಿವೃದ್ಧಿ, ಸ್ವಚ್ಛತೆ ಅರಿವು, ಮಳೆ ನೀರಿನ ಕೊಯ್ಲು, ಹಡಿಲು ಭೂಮಿ ಅಭಿವೃದ್ಧಿ, ಮಹಿಳಾ ಸಬಲೀಕರಣ ಕ್ಷೇತ್ರದಲ್ಲಿ ಕೆಲಸ ಮಾಡುವ ಮೂಲಕ ಹೊಸ ಕ್ರಾಂತಿ ಮಾಡಿದ ಕೀರ್ತಿ ಧರ್ಮಸ್ಥಳ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರಿಗೆ ಸಲ್ಲುತ್ತದೆ. ಸರ್ಕಾರ ಮಾಡಬೇಕಾದ ಕೆಲಸವನ್ನು ಅವರು ಮಾಡಿದ್ದಾರೆ. ರಾಜ್ಯದ ಪ್ರಗತಿಗೆ ಅವರದ್ದೇ ಆಗ ಕೊಡುಗೆ ನೀಡಿದ್ದಾರೆ ಎಂದರು.

ವಿರೇಂದ್ರ ಹೆಗ್ಗಡೆ ಅವರು ಮಾತನಾಡಿ, ವ್ಯವಹಾರಿಕ ಜ್ಞಾನ ವೃದ್ಧಿಸಿದರೆ ಮಾತ್ರ ಬದುಕಿನಲ್ಲಿ ಯಶಸ್ಸು ಕಾಣಲು ಸಾಧ್ಯವಾಗುತ್ತದೆ. ಉಡುಪಿ ತಾಲ್ಲೂಕಿನ ಸ್ವ ಸಹಾಯ ಸಂಘಗಳಲ್ಲಿ ₹39 ಕೋಟಿ ಉಳಿತಾಯವಾಗಿದೆ ಎಂದರು.

ಕಾಪು ಶಾಸಕ ವಿನಯ ಕುಮಾರ್ ಸೊರಕೆ, ನಗರ ಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಳಿನಿ ಪ್ರದೀಪ್‌, ಜನಜಾಗೃತಿ ಸಮಿತಿ ಅಧ್ಯಕ್ಷ ಅಪ್ಪಣ್ಣ ಹೆಗ್ಡೆ, ಬಿಲ್ಲವ ಸಂಘದ ಅಧ್ಯಕ್ಷ ಬಿ.ವಿ ಪೂಜಾರಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ತಾಲ್ಲೂಕು ಘಟಕದ ನಿಕಟ ಪೂರ್ವ ಅಧ್ಯಕ್ಷ ಬಿ. ಗಣೇಶ್ ಆಚಾರ್ಯ, ನೂತನ ಅಧ್ಯಕ್ಷ ಎಸ್.ಗಜಾನಂದ ಕುಂದರ್ ಉಪಸ್ಥಿತರಿದ್ದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ತಾಲ್ಲೂಕು ನಿರ್ದೇಶಕ ಪುರುಷೋತ್ತಮ್ ಸ್ವಾಗತಿಸಿದರು, ಯೋಜನಾಧಿಕಾರಿ ಮಾಲತಿ ದಿನೇಶ್ ವರದಿ ಮಂಡಿಸಿದರು, ಅಚ್ಯುತ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.