ಉಡುಪಿ: ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ಜಿಲ್ಲೆಯ ಎಲ್ಲ ಪ್ರಮುಖ ಪ್ರವಾಸಿ ತಾಣಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದರು.
ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಶುಕ್ರವಾರ ಮಾತನಾಡಿದರು. ‘ಸುಸ್ಥಿರ ಪ್ರವಾಸೋದ್ಯಮ ಅಭಿವೃದ್ಧಿಯ ಸಾಧನ’ ಘೋಷ ವಾಕ್ಯದೊಂದಿಗೆ ಸೆಪ್ಟೆಂಬರ್ 27ರಂದು ವಿಶ್ವಪ್ರವಾಸೋದ್ಯಮ ದಿನಾಚರಣೆ ಆಚರಿಸಲಾಗುವುದು. ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಉಡುಪಿ ನಿರ್ಮಿತಿ ಕೇಂದ್ರ, ಬೀಚ್ ನಿರ್ವಹಣಾ ಸಮಿತಿ, ಕರಾವಳಿ ಪ್ರವಾಸೋದ್ಯಮ ಸಮಿತಿಯ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಸೆಪ್ಟೆಂಬರ್ 20ರಿಂದ 23ರ ವರೆಗೆ ಕಾರ್ಕಳ ಗೊಮ್ಮಟೇಶ್ವರ ಬೆಟ್ಟದ ಆವರಣ, ಕಾರ್ಕಳ ಚತುರ್ಮುಖ ಬಸದಿ ಆವರಣ, ಬಾರ್ಕೂರು ಕತ್ತಲೆ ಬಸದಿ ಆವರಣ, ಕಾರ್ಕಳದ ಕೋಟಿ ಚೆನ್ನಯ ಥೀಮ್ ಪಾರ್ಕ್ ಆವರಣ, ಉಡುಪಿ ಅಜ್ಜರಕಾಡು ಭುಜಂಗ ಪಾರ್ಕ್ ಆವರಣ, ಮಣಿಪಾಲದ ಮಣ್ಣಪಳ್ಳ ಕರೆಯ ಸುತ್ತ, ಹೆಬ್ರಿಯು ಜೋಮ್ಲು ತೀರ್ಥ, ಶಿರೂರಿನ ಒತ್ತಿನೆಣೆ ಹಾಗೂ ಕುಂದಾಪುರದ ಕೋಡಿ ಕಡಲ ಕಿನಾರೆಯಲ್ಲಿ ಸ್ವಚ್ಛತಾ ಅಭಿಯಾನ ನಡೆಯಲಿದೆ. ಸಂಬಂಧಪಟ್ಟ ಇಲಾಖೆ ಮತ್ತು ಸಂಘ– ಸಂಸ್ಥೆ, ಯುವಕ ಮಂಡಲಗಳ ಸಹಕಾರ ಪಡೆಯಲಾಗುವುದು ಎಂದರು.
ಬಾರ್ಕೂರಿನ ಕತ್ತಲೆ ಬಸದಿಯಲ್ಲಿ ದೀಪ ಬೆಳಗುವ ಮೂಲಕ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಶಾಲಾ– ಕಾಲೇಜು ವಿದ್ಯಾರ್ಥಿಗಳಿಗೆ ಛಾಯಾಚಿತ್ರ ಸ್ಪರ್ಧೆ, ಪ್ರಬಂಧ ಸ್ಪರ್ದೆ ಹಾಗೂ ಚಿತ್ರಕಲೆ ಸ್ಪರ್ಧೆ ಎರ್ಪಡಿಸಲಾಗುವುದು ಎಂದು ತಿಳಿಸಿದರು. ಸೆಪ್ಟೆಂಬರ್ 27ರಂದು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದ್ದು, ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸುವರು.
ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳು ಹಾಗೂ ವಿಶಿಷ್ಟ ಆಹಾರ ಪದ್ಧತಿಯ ವಿಡಿಯೊ ತುಣುಕು ಬಿಡುಗಡೆ ಮಾಡಲಾಗುವುದು. ಪ್ರವಾಸೋದ್ಯಮ ಇಲಾಖೆಯ ನವೀಕರಿಸಿದ ವೆಬ್ಸೈಟ್ ಹಾಗೂ ಆ್ಯಪ್ ಬಿಡುಗಡೆ ಮಾಡಲಾಗುವುದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.