ಉಡುಪಿ: ‘ಜಿಲ್ಲೆಯಲ್ಲಿ ಏಪ್ರಿಲ್ 21 ಮತ್ತು 22ರಂದು ಸಾಗರ ರಕ್ಷಾ ಅಣಕು ಕಾರ್ಯಾಚರಣೆ ನಡೆಯಲಿದೆ’ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದರು.
ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.‘ಜಿಲ್ಲೆಯಲ್ಲಿ ಭವಿಷ್ಯದಲ್ಲಿ ಭಯೋ ತ್ಪಾದಕರ ದಾಳಿ ತಡೆಯುವ ಉದ್ದೇಶ ದಿಂದ ಈ ಅಣಕು ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಕರಾವಳಿ ಕಾವಲು ಪೊಲೀಸ್ ಪಡೆ, ಪೊಲೀಸ್ ಇಲಾಖೆ, ಮೀನುಗಾರಿಕೆ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳು ಕಾರ್ಯಾಚರಣೆ ಸಂದರ್ಭ ದಲ್ಲಿ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ’ ಅವರು ಸೂಚನೆ ನೀಡಿದರು.
‘ಕಾರ್ಯಾಚರಣೆ ದಿನಗಳಲ್ಲಿ ಸಾರ್ವ ಜನಿಕರು ಯಾವುದೇ ಸಂಶಯಾಸ್ಪದ ವಸ್ತುಗಳು, ವ್ಯಕ್ತಿಗಳು ಕಂಡು ಬಂದಲ್ಲಿ ಕೂಡಲೇ ಪೊಲೀಸ್ ಇಲಾಖೆ ಸಹಾಯ ವಾಣಿ 100 ಸಂಖ್ಯೆಗೆ, ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿ ಸಂಖ್ಯೆ 1077 ಹಾಗೂ ಕರಾವಳಿ ಪೊಲೀಸ್ ಪಡೆಯ ನಿಯಂತ್ರಣ ಕೊಠಡಿ ಸಂಖ್ಯೆ 1093 ಗೆ ಉಚಿತ ಕರೆ ಮಾಡಿ ಮಾಹಿತಿ ನೀಡಬಹುದು’ ಎಂದರು. ‘ಸಮುದ್ರದಲ್ಲಿ ಮೀನುಗಾರರು ಅಪರಿಚಿತ ವ್ಯಕ್ತಿಗಳು ಹಾಗೂ ದೋಣಿಗಳು ಕಂಡು ಬಂದಲ್ಲಿ ಕರಾವಳಿ ಕಾವಲು ಪಡೆಗೆ ಮಾಹಿತಿ ನೀಡುವಂತೆ ಹಾಗೂ ಅಪರಿಚಿತರನ್ನು ಬೋಟ್ಗಳ ಒಳಗೆ ಹತ್ತಿಸಿಕೊಳ್ಳದಂತೆ ಸಲಹೆ ನೀಡಿದರು.
ಜಿಲ್ಲೆಯ ಎಲ್ಲ ಚೆಕ್ ಪೋಸ್ಟ್ಗಳಲ್ಲಿ ವಾಹನಗಳ ವ್ಯಾಪಕ ತಪಾಸಣೆ ನಡೆಸುವಂತೆ ಹಾಗೂ ಭಯೋತ್ಪಾದಕರು ಡ್ರೋನ್ ಮೂಲಕ ದಾಳಿ ಮಾಡುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳು, ದೇವಾಲ ಯಗಳು, ವಿದ್ಯಾ ಸಂಸ್ಥೆಗಳು, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಜಿಲ್ಲಾಧಿಕಾರಿ ಕಚೇರಿ ಹಾಗೂ ಮಾಲ್ ಬಳಿ ಹೆಚ್ಚಿನ ಸಿಬ್ಬಂದಿ ನಿಯೋಜಿಸುವಂತೆ ಪೊಲೀಸ್ ಅಧಿಕಾರಿಗಳಿಗೆ’ ಸೂಚಿಸಿದರು.ಹೆಚ್ಚುವರಿ ಜಿಲ್ಲಾಧಿಕಾರಿ ಜಿ. ಅನು ರಾಧ, ಪೊಲೀಸ್, ಕರಾವಳಿ ಕಾವಲು ಪಡೆ ಅಧಿಕಾರಿಗಳು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.