ಉಡುಪಿ: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ–ಗಿರಿಜನ ಉಪ ಯೋಜನೆಯಡಿಯಲ್ಲಿ ಕೈಗೊಂಡಿರುವ ಕಾರ್ಯಕ್ರಮಗಳಲ್ಲಿ ನಿಗದಿತ ಗುರಿ ಸಾಧಿಸಲು ವಿಫಲವಾಗಿರುವ ಇಲಾಖೆ ಗಳು ಲಿಖಿತ ರೂಪದಲ್ಲಿ ಸಮರ್ಪಕ ಕಾರಣಗಳನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸೂಚಿಸಿದರು.
ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ನಡೆದ 2016–17ನೇ ಸಾಲಿನ ಪರಿಶಿಷ್ಟ ಜಾತಿ ಉಪ ಯೋಜನೆ–ಗಿರಿಜನ ಉಪಯೋಜನೆಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಶ್ರೇಯೋಭಿವೃದ್ಧಿಗಾಗಿ ಪರಿಶಿಷ್ಟ ಜಾತಿ ಉಪಯೋಜನೆ–ಗಿರಿಜನ ಉಪಯೋಜನೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳನ್ನು ಫಲಾನುಭವಿಗಳಿಗೆ ಒದಗಿಸುವಲ್ಲಿ ಇಲಾಖೆಗಳು ವಿಫಲವಾ ಗಿದ್ದು, ನಿಗದಿಪಡಿಸಲಾಗಿದ್ದ ಆರ್ಥಿಕ ಮತ್ತು ಭೌತಿಕ ಗುರಿಯನ್ನು ಸಾಧಿಸಿಲ್ಲ. ಹಾಗಾಗಿ ವೈಫಲ್ಯಕ್ಕೆ ಸಮರ್ಪಕ ಕಾರಣಗಳನ್ನು ನೀಡಬೇಕು. ಈ ಕುರಿತ ವರದಿಯನ್ನು ಮುಂದಿನ ಕ್ರಮಕ್ಕಾಗಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದರು.
ಪ್ರತಿ ತಿಂಗಳ 15ರಂದು ಪರಿಶಿಷ್ಟ ಜಾತಿ ಉಪಯೋಜನೆ–ಗಿರಿಜನ ಉಪ ಯೋಜನೆಯ ಸಭೆ ನಡೆಯಲಿದ್ದು, ಸಭೆಗೆ ಎಲ್ಲ ಇಲಾಖಾಧಿಕಾರಿಗಳು ತಮ್ಮ ಇಲಾಖೆಯಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳು ಮತ್ತು ಲಭ್ಯವಿರುವ ಅನುದಾನದ ಅಗತ್ಯ ಮಾಹಿತಿಯೊಂದಿಗೆ ಕಡ್ಡಾಯವಾಗಿ ಹಾಜರಿರಬೇಕು ಅವರು ಸೂಚಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ರಮೇಶ್ ಹಾಗೂ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.