ಬ್ರಹ್ಮಾವರ: ಆಶ್ರಯ ಸಾಲಮನ್ನಾ ಯೋಜನೆಯಡಿ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಅರ್ಜಿದಾರರಿಗೆ ಸಾಲಮನ್ನಾ ಮಾಡಲಾಗಿದೆ. ಇದು ರಾಜ್ಯದಲ್ಲೇ ಶೇ 100ರಷ್ಟು ಸಂಪೂರ್ಣ ಗೊಂಡ ಕ್ಷೇತ್ರವಾಗಿದೆ ಎಂದು ಶಾಸಕ ಪ್ರಮೋದ್ ಮಧ್ವರಾಜ್ ಹೇಳಿದರು.
ಚೇರ್ಕಾಡಿ ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ಮಂಗಳವಾರ ಅವರು ಪಂಚಾಯಿತಿ ವ್ಯಾಪ್ತಿಯ ಫಲಾನುಭವಿ ಗಳಿಗೆ ಸರ್ಕಾರದ ವಿವಿಧ ಸವಲತ್ತುಗ ಳನ್ನು ವಿತರಿಸಿ ಅವರು ಮಾತನಾಡಿದರು. ಬಿಪಿಎಲ್ ಕಾರ್ಡ್ದಾರರಿಗೆ ಉಚಿತ ವಿದ್ಯುತ್ ಸಂಪರ್ಕ, ಸರ್ಕಾರಿ ಭೂಮಿಯಲ್ಲಿ ಮನೆಕಟ್ಟಿಕೊಂಡವರಿಗೆ 94ಸಿ ಅಡಿಯಲ್ಲಿ ಹಕ್ಕುಪತ್ರ ಇನ್ನಿತರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಪಂಚಾಯಿತಿ ಅಧ್ಯಕ್ಷ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪರಿಶಿಷ್ಟ ಪಂಗಡದ ವಿದ್ಯಾರ್ಥಿ ವೇತನ, ಅಂಗವಿಕಲರಿಗೆ ಸಲಕರಣೆ, ಬಸವ ವಸತಿ, ಇಂದಿರಾ ಆವಾಸ್ ಫಲಾನುಭವಿಗಳಿಗೆ ಮಂಜೂರು ಪತ್ರ, ಮನೆ ರಿಪೇರಿಗೆ ಸಹಾಯಧನ, ತೋಟಗಾರಿಕಾ ಇಲಾಖೆಯಿಂದ ತೆಂಗಿನ ಸಸಿಗಳನ್ನು ವಿತರಿಸಲಾಯಿತು.
ಜಿಲ್ಲಾ ಪಂಚಾಯಿತಿ ಸದಸ್ಯೆ ಗೋಪಿ ಕೆ. ನಾಯ್ಕ್, ತಾಲ್ಲೂಕು ಪಂಚಾಯಿತಿ ಸದಸ್ಯೆ ಜ್ಯೋತಿ ಎಸ್.ಪೂಜಾರಿ, ಪಂಚಾಯಿತಿ ಉಪಾಧ್ಯಕ್ಷೆ ಸುಗುಣಾ ಪೂಜಾರಿ, ತೋಟಗಾರಿಕಾ ಅಧಿಕಾರಿ ಯಲ್ಲಮ್ಮ, ಪಂಚಾಯಿತಿಯ ಸದಸ್ಯರು ಉಪಸ್ಥಿತರಿದ್ದರು. ಅಭಿವೃದ್ಧಿ ಅಧಿಕಾರಿ ಯೋಗೀತಾ ಸ್ವಾಗತಿಸಿದರು. ಕಾರ್ಯದರ್ಶಿ ಅಂಬುಜಾ ಫಲಾನುಭವಿಗಳ ಪಟ್ಟಿ ವಾಚಿಸಿದರು. ಸದಸ್ಯ ಕೆ.ಕಮಲಾಕ್ಷ ಹೆಬ್ಬಾರ್ ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.