ADVERTISEMENT

‘ಶಿಕ್ಷಣ ಮಹತ್ವ ಸಾರಿದ ವಿಭುದೇಶತೀರ್ಥ’

ಪೂರ್ಣಪ್ರಜ್ಞ ವಿದ್ಯಾಸಂಸ್ಥೆಯ ಸಂಸ್ಥಾಪಕರ ದಿನಾಚರಣೆಯಲ್ಲಿ ಅದಮಾರು ಶ್ರೀ

​ಪ್ರಜಾವಾಣಿ ವಾರ್ತೆ
Published 2 ಜುಲೈ 2015, 5:08 IST
Last Updated 2 ಜುಲೈ 2015, 5:08 IST

ಉಡುಪಿ: ಹಲವು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಶಿಕ್ಷಣದ ಮಹತ್ವ ವನ್ನು ಸಾರಿದ ಮಹಾನ್‌ಚೇತನ ವಿಭು ದೇಶ ತೀರ್ಥರು ಎಂದು ಅದಮಾರು ಮಠದ ವಿಶ್ವಪ್ರಿಯ ಸ್ವಾಮೀಜಿ ಹೇಳಿದರು.

ಪೂರ್ಣಪ್ರಜ್ಞ ಕಾಲೇಜು, ಸಂಧ್ಯಾ ಕಾಲೇಜು, ಪೂರ್ಣಪ್ರಜ್ಞ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ ಹಾಗೂ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಸಂಯುಕ್ತವಾಗಿ ಕಾಲೇಜಿನ ಸಭಾಂಗಣ ದಲ್ಲಿ ಬುಧವಾರ ಏರ್ಪಡಿಸಿದ್ದ ಪೂರ್ಣ ಪ್ರಜ್ಞ ವಿದ್ಯಾಸಂಸ್ಥೆಯ ಸಂಸ್ಥಾಪಕರ ದಿನಾ ಚರಣೆ– ವಿಬುಧೇಶ ತೀರ್ಥ ಸ್ವಾಮೀಜಿ ಅವರ ಸಂಸ್ಮರಣೆ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಕ್ರೀಡೆ ಹಾಗೂ ಸಂಶೋ ಧನೆಯಲ್ಲಿ ಸಾಧನೆ ಮಾಡಬೇಕೆಂಬ ಆಸೆಯನ್ನು ಹೊಂದಿದ್ದರು. ಅದನ್ನು ಸಾಕಾರಗೊಳಿಸಲು ವಿದ್ಯಾರ್ಥಿಗಳು ಪ್ರಯತ್ನಿಸಬೇಕು ಎಂದರು.

ಸಂಸ್ಮರಣಾ ಭಾಷಣ ಮಾಡಿದ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ. ಬಿ.ಎಂ. ಸೋಮ ಯಾಜಿ, ವಿಭುದೇಶರು ನೇರ ನಡೆ ನುಡಿಯ ನಿಷ್ಠುರವಾದಿ, ಕನಸುಗಳನ್ನು ಸಾಕ್ಷಾತ್ಕಾರ ಮಾಡುವ ಕನಸುಗಾರ ರಾಗಿದ್ದರು. ವಿಜ್ಞಾನದ ಬಗ್ಗೆ ಆಸಕ್ತಿ ವಹಿಸಿದ್ದ ಅವರು ಭೌತಶಾಸ್ತ್ರ ವಿಷಯದಲ್ಲಿ ವಿಶೇಷ ಕಾಳಜಿ ಹೊಂದಿದ್ದರು ಎಂದರು.

ಕರ್ನಾಟಕ, ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ 27 ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ ಅವರು, ವಿಜ್ಞಾನದಲ್ಲಿ ಸಂಶೋಧನೆ ಮಾಡಲು ಅನುಕೂಲವಾ ಗುವಂತೆ ಸೆಂಟರ್‌ ಫಾರ್‌ ಎಕ್ಸಲೆನ್ಸ್‌ ಸಂಸ್ಥೆಯನ್ನು ಆರಂಭಿಸಿದ್ದರು. ಎರಡು ಪರ್ಯಾಯವನ್ನು ಪೂರೈಸಿದ್ದ ಅವರು ಉಡುಪಿಗೆ ವಿಶೇಷ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

ಕುದಿಯ ಶ್ರೀವಿಷ್ಣುಮೂರ್ತಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ಕುದಿ ವಸಂತ ಶೆಟ್ಟಿ, ಪೂರ್ಣಪ್ರಜ್ಞ ಕಾಲೇಜು ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಡಾ. ಜಿ.ಎಸ್‌. ಚಂದ್ರಶೇಖರ್‌, ಸಂಧ್ಯಾ ಕಾಲೇಜಿನ ಆಡಳಿತ ಸಮಿತಿಯ ಗೌರವ ಕಾರ್ಯದರ್ಶಿ ಪ್ರದೀಪ್‌ ಕುಮಾರ್‌, ಪ್ರಾಂಶುಪಾಲ ಟ.ಎಸ್‌. ರಮೇಶ್‌, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಂದೀಪ್‌ಕುಮಾರ್‌ ಉಪಸ್ಥಿತರಿದ್ದರು.

ಪೂರ್ಣಪ್ರಜ್ಞ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ನ ನಿರ್ದೇಶಕ ಡಾ.ಎಂ. ಆರ್‌.ಹೆಗ್ಡೆ ಸ್ವಾಗತಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ.ಶ್ರೀಕಾಂತ ಸಿದ್ದಾಪುರ ಕಾರ್ಯಕ್ರಮ ನಿರೂಪಿಸಿದರು. ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಬಿ. ಜಗದೀಶ್‌ ಶೆಟ್ಟಿ ವಂದಿಸಿದರು.

ಗುಣಗ್ರಾಹಿತನ ಹೊಂದಿದ್ದ

ವಿಭುದೇಶ ತೀರ್ಥರು ಜಾತಿ ಮತ ಭೇದವಿಲ್ಲದೆ ಶಿಕ್ಷಕರನ್ನು ಆಯ್ಕೆ ಮಾಡುತ್ತಿದ್ದರು.
ಡಾ. ಬಿ.ಎಂ. ಸೋಮಯಾಜಿ, 
ನಿವೃತ್ತ ಪ್ರಾಧ್ಯಾಪಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT