ಉಡುಪಿ: ಸರ್ಕಾರಿ ಪ್ರಾಯೋಜಕತ್ವದಲ್ಲಿ ನಡೆಸುವ ಕಾಂಗ್ರೆಸ್ ಸಮಾವೇಶವನ್ನು ಜಿಲ್ಲಾ ಬಿಜೆಪಿ ಘಟಕ ಬಹಿಷ್ಕರಿಸಲಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಥವಾ ಜೆಡಿಎಸ್ ಪಕ್ಷದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರೆ ಕಾರ್ಯಕರ್ತರು ಪ್ರಧಾನಿ ಮೋದಿಗೆ ಜೈಕಾರ ಹಾಕುವರು ಎಂದು ಎಚ್ಚರಿಕೆ ನೀಡಿದರು.
ಸಾಧನಾ ಯಾತ್ರೆಗೆ ಬಿಜೆಪಿ ವಿರೋಧವಿಲ್ಲ. 2011ರಲ್ಲಿ ಬಿಜೆಪಿ ಆಡಳಿತದಲ್ಲಿ ಬಸವ ವಸತಿ ಫಲಾನುಭವಿಗಳಿಗೆ ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಅಭಿನಂದನಾ ಪತ್ರ ಸ್ವೀಕರಿಸಲು ಭಾಗವಹಿಸುವಂತೆ ಆದೇಶ ಹೊರಡಿಸಿರುವುದು ಸರಿಯಲ್ಲ ಎಂದರು.
ಜಿಲ್ಲಾಧಿಕಾರಿ ತಾವೊಬ್ಬ ಅಧಿಕಾರಿ ಎಂಬುದನ್ನು ಮರೆತು ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಪ್ರತಿಯೊಂದು ಗ್ರಾಮ ಪಂಚಾಯಿತಿಗಳಿಂದ ಸರ್ಕಾರಿ ವೆಚ್ಚದಲ್ಲಿ ಬಸ್ ವ್ಯವಸ್ಥೆ ಮಾಡುವಂತೆ ಆದೇಶ ನೀಡಿದ್ದಾರೆ. ಸರ್ಕಾರದ ಕಾರ್ಯಕ್ರಮ ಸರ್ಕಾ ರದ ಕಾರ್ಯಕ್ರವಾಗಿರಲ್ಲಿ. ಸರ್ಕಾ ರಿ ಕಾರ್ಯಕ್ರಮದಲ್ಲಿ ಪಕ್ಷದ ಬ್ಯಾನರ್ ತೆಗೆಯಬೇಕು. ಬಿಜೆಪಿ ಬೆಂಬಲಿತ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಸದಸ್ಯರು ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಭಾಗವಹಿಸುವುದಿಲ್ಲ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರಾವಳಿ ಜಿಲ್ಲೆಗೆ ಬರುವ ಪೂರ್ವ ಮತ್ತು ನಂತರ ದಿನದಲ್ಲಿ ನಿರಂತರವಾಗಿ ಹಿಂದೂ ಕಾರ್ಯಕರ್ತರ ಕೊಲೆ ನಡೆಯುತ್ತಿದೆ. ಹಿಂದೂ ಕಾರ್ಯಕರ್ತರ ಹೆಣದ ಮೇಲೆ ನಿಂತು ಮುಖ್ಯಮಂತ್ರಿಗಳು ಪಕ್ಷದ ಸಾಧನಾ ಸಮಾವೇಶವನ್ನು ಮಾಡುತ್ತಿದ್ದಾರೆ. ಹಿಂದೂಗಳಿಗೆ ರಾಜ್ಯದಲ್ಲಿ ಅಭದ್ರತೆ ಕಾಡುತ್ತಿದೆ ಎಂದರು.
ಉಡುಪಿ ಜಿಲ್ಲೆಗೆ ಸಚಿವ ಪ್ರಮೋದ್ ಮಧ್ವರಾಜ್ ಮೂಲಭೂತ ಸೌಕರ್ಯ ನೀಡುವಲ್ಲಿ ವಿಫಲರಾಗಿದ್ದಾರೆ. ಹೆಜಮ್ಮಾಡಿ, ಹಂಗಾರಕಟ್ಟೆ ಬಂದರಿನಲ್ಲಿ ಹೂಳೆತ್ತದ ಕಾರಣ ಮೀನುಗಾರರಿಗೆ ತೊಂದರೆ ಆಗಿದೆ ಎಂದರು.
ಜಿಲ್ಲಾ ಪಂಚಾಯಿ ಅಧ್ಯಕ್ಷ ದಿನಕರ ಬಾಬು, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಕೆ.ರಘುಪತಿ ಭಟ್, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಶ್ರೀಶ ನಾಯಕ್ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.