ADVERTISEMENT

ಹೆದ್ದಾರಿಯಲ್ಲಿ ಸಂಗ್ರಹವಾದ ಕೊಳಚೆ ನೀರು: ಸಾರ್ವಜನಿಕರ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2018, 13:16 IST
Last Updated 11 ಫೆಬ್ರುವರಿ 2018, 13:16 IST
ಪಡುಬಿದ್ರಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶೇಖರಣೆಯಾಗಿರುವ ಕೊಳಚೆನೀರು.
ಪಡುಬಿದ್ರಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶೇಖರಣೆಯಾಗಿರುವ ಕೊಳಚೆನೀರು.   

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿಯ ಪಡುಬಿದ್ರಿ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳುವ ದ್ವಾರದ ಸಮೀಪ ಹೋಟೆಲ್‌ಗಳ ಕೊಳಚೆ ನೀರು ಸಂಗ್ರಹವಾಗುತ್ತಿದ್ದು, ಸಾರ್ವಜನಿಕರು ಗ್ರಾಮ ಪಂಚಾಯಿತಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಲ್ಲಿನ ಕೆಲವೊಂದು ಹೋಟೆಲ್‌ಗಳ ಕೊಳಚೆ ನೀರು ಚರಂಡಿಗಳಿಗೆ ಹರಿಯಬಿಡಲಾಗುತ್ತಿದೆ. ಚರಂಡಿಯಲ್ಲಿ ಹರಿಯುವ ನೀರು ದೇವಸ್ಥಾನಕ್ಕೆ ತೆರಳುವ ಮುಖ್ಯದ್ವಾರದ ಬಳಿ ಇರುವ ಗುಂಡಿಯಲ್ಲಿ ಸಂಗ್ರಹವಾಗುತ್ತಿದೆ. ಮಳೆಗಾಲದಲ್ಲಿಯೂ ಇಲ್ಲಿ ನೀರು ಹರಿಯುತ್ತಿದ್ದು, ಜನ ಅದರಲ್ಲಿಯೇ ಸಂಚರಿಸಬೇಕಾದ ಪ್ರಸಂಗ ಎದುರಾಗಿತ್ತು. ಈ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಕೊಳಚೆನೀರು ತುಂಬಿರುವುದರಿಂದ ಕಾಮಗಾರಿ ಮಾಡಲು ತೊಂದರೆಯಾಗುತ್ತಿದೆ ಎಂದು ಗುತ್ತಿಗೆದಾರ ಕಂಪೆನಿಯ ಎಂಜನಿಯರ್‌ಗಳು ದೂರಿದ್ದಾರೆ.

ಈ ಕೊಳಚೆನೀರು ತುಂಬಿ ಎಲ್ಲೆಡೆಗೂ ದುರ್ನಾತ ಬೀರುತ್ತಿದೆ. ಹಿಂದೆಯೂ ಇದೇ ರೀತಿ ನೀರು ಹರಿಯುತ್ತಿದ್ದ ಬಗ್ಗೆ ಗ್ರಾಮ ಪಂಚಾಯಿತಿಗೆ ದೂರು ಬಂದಿತ್ತು. ಆ ಬಳಿಕ ಸೂಕ್ತ ಕ್ರಮ ಕೈಗೊಂಡು ಸಮಸ್ಯೆ ಬಗೆ ಹರಿಸಲಾಗಿದೆ ಎಂದು ಪಿಡಿಒ ಪಂಚಾಕ್ಷರಿ ಸ್ವಾಮಿ ಕೆರಿಮಠ ತಿಳಿಸಿದ್ದಾರೆ.

ADVERTISEMENT

ಈಗಲೂ ಕೊಳಚೆ ನೀರು ತುಂಬಿರುವ ಬಗ್ಗೆ ಜನರಿಂದ ದೂರುಗಳು ಬಂದಿವೆ. ಎರಡು ದಿನಗಳಲ್ಲಿ ಸಮಸ್ಯೆ ಬಗೆಹರಿಸುವಂತೆ ಹೋಟೆಲ್ ಮಾಲೀಕರಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.