ADVERTISEMENT

ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸಲು ಸೂಚನೆ

ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮೊಹ್ಮದ್ ಮೊಹಸೀನ್ ಅಧ್ಯಕ್ಷತೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2017, 8:33 IST
Last Updated 6 ಡಿಸೆಂಬರ್ 2017, 8:33 IST
ವಿಜಯಪುರ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹ್ಮದ ಮೊಹಸೀನ್ ಮಾತನಾಡಿದರು
ವಿಜಯಪುರ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹ್ಮದ ಮೊಹಸೀನ್ ಮಾತನಾಡಿದರು   

ವಿಜಯಪುರ: ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಿವಿಧ ವಸತಿ ನಿಲಯಗಳು, ಸಮುದಾಯ ಭವನ, ಇತರೆ ಕಟ್ಟಡಗಳ ನಿರ್ಮಾಣ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹ್ಮದ ಮೊಹಸೀನ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಿಗದಿತ ಗುರಿಗೆ ತಕ್ಕಂತೆ ಸೂಕ್ತ ಪ್ರಗತಿಯನ್ನು ಸಾಧಿಸಬೇಕು. ವಿವಿಧ ವಸತಿ ನಿಲಯಗಳು ಮತ್ತು ಸಮುದಾಯ ಭವನಗಳ ನಿರ್ಮಾಣಕ್ಕೆ ಅವಶ್ಯವಿರುವ ನಿವೇಶನಗಳ ಸಮಸ್ಯೆ ಬಗೆ ಹರಿಸಿಕೊಳ್ಳಬೇಕು ಸಲಹೆ ನೀಡಿದರು.

ಜಿಲ್ಲೆಯ ಸಿಂದಗಿ ತಾಲ್ಲೂಕು ಆಸ್ಪತ್ರೆಯ ಅವ್ಯವಸ್ಥೆಯನ್ನು ತಕ್ಷಣ ಸರಿ ಪಡಿಸಿಕೊಳ್ಳಬೇಕು. ಆಸ್ಪತ್ರೆ ಸಂಪೂರ್ಣ ನವೀಕರಣಗೊಳ್ಳುವ ಅವಶ್ಯಕತೆ ಇದೆ. ಯಾವುದೇ ವೈದ್ಯರು, ಪ್ಯಾರಾ ಮೆಡಿಕಲ್ ಸಿಬ್ಬಂದಿ ಮತ್ತು ಗ್ರೂಪ್ ಡಿ ನೌಕರರು ಇಲ್ಲದೇ ಆಸ್ಪತ್ರೆ ನಿರ್ವಹಣೆ ಸರಿಯಾಗಿ ನಡೆಯುತ್ತಿಲ್ಲ. ಈ ಹಿನ್ನಲೆಯಲ್ಲಿ ತಕ್ಷಣ ಆಸ್ಪತ್ರೆಯನ್ನು ಶುಚಿಯಾಗಿಡುವ ಜೊತೆಗೆ, ಸೌಲಭ್ಯಗಳನ್ನು ಕಲ್ಪಿಸಬೇಕು. ಸ್ಟಾಕ್ ರಜಿಸ್ಟರ್ ಸೇರಿದಂತೆ ಇತರೆ ಔಷಧಿಗಳ ಮತ್ತು ಕಡತಗಳ ಸಮ ರ್ಪಕ ನಿರ್ವಹಣೆಯಾಗುವಂತೆ ನೋಡಿ ಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ADVERTISEMENT

ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ನೀಡುತ್ತಿರುವ ಸೌಲಭ್ಯ ಮತ್ತು ಪಿಂಚಣಿ ವ್ಯವಸ್ಥೆಗಳ ದಾಖಲಾತಿಯನ್ನು ಆನ್‌ಲೈನ್‌ ಅಪ ಡೇಟ್ ಕಾರ್ಯವನ್ನು 15 ದಿನಗಳಲ್ಲಿ ಪೂರ್ಣಗೊಳಿಸಬೇಕು. ವಿವಿಧ ವಸತಿ ಯೋಜನೆಗಳಡಿ ಫಲಾನುಭವಿಗಳಿಗೆ ವಸತಿ ಸೌಲಭ್ಯ ಒದಗಿಸುವ ಜೊತೆಗೆ, ವಸತಿ ನಿರ್ಮಾಣ ಕಾರ್ಯ ದಲ್ಲಿ ಪ್ರಗತಿ ಸಾಧಿಸಬೇಕು ಎಂದು ಸೂಚಿಸಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿನ ವಿವಿಧ ವಸತಿ ನಿಲಯಗಳಿಗೆ ಪ್ರತಿ ವಿಧಾನಸಭಾ ಕ್ಷೇತ್ರವಾರು ಅನುದಾನ ಮಂಜೂರು ಮಾಡಲಾಗಿದ್ದು, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಇನ್ನಿತ ವ್ಯವಸ್ಥೆಗಳಿಗೆ ಸಮರ್ಪಕವಾಗಿ ಅನುದಾನ ಬಳಕೆಯಾಗುವಂತೆ ನೋಡಿಕೊಳ್ಳಬೇಕು. ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಸೈಕ್ಲಿಂಗ್ ವೆಲೋಡ್ರೋಮ್ ಕಾಮಗಾರಿಗೆ ಸಂಬಂಧಪಟ್ಟಂತೆ ಅಂತರರಾಷ್ಟ್ರೀಯ ಸೈಕ್ಲಿಂಗ್ ಫೆಡರೇಷನ್ ನಿಯಮಾವಳಿಯಂತೆ ನಿರ್ಮಾಣವಾಗುವಂತೆ ನೋಡಿಕೊಳ್ಳ ಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸುಂದರೇಶಬಾಬು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

**

ಅಧಿಕಾರಿಗಳಿಗೆ ಎಚ್ಚರಿಕೆ

ಜಿಲ್ಲೆಯಲ್ಲಿರುವ ವಕ್ಫ್ ಆಸ್ತಿಗಳ ಸರ್ವೇ ಕಾರ್ಯ ಸಮರ್ಪಕವಾಗಿ ನಡೆಯಬೇಕು. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ದಿನನಿತ್ಯ ಜಿಲ್ಲಾಧಿಕಾರಿ ಗಮನಕ್ಕೆ ತರುವ ಮೂಲಕ ಸಾಧಿಸಿದ ಪ್ರಗತಿಯ ಬಗ್ಗೆ ಮಾಹಿತಿಯನ್ನು ಕಾಲಕಾಲಕ್ಕೆ ನೀಡಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಕೈಗೊಳ್ಳಲಾದ ಕಾರ್ಯಗಳ ಬಗ್ಗೆ ಸಮರ್ಪಕ ಮಾಹಿತಿ ಒದಗಿಸುವಂತೆ ಉಪನಿರ್ದೇಶಕರಿಗೆ ಸೂಚಿಸಿದ ಅವರು, ತಪ್ಪಿದ್ದಲ್ಲಿ ಸೂಕ್ತ ಕ್ರಮಕ್ಕೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಮೊಹ್ಮದ್‌ ಮೊಹಸೀನ್‌ ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.