ಸಿಂದಗಿ: ದೇಶಾಭಿಮಾನಿ ಎಂ.ಕೆ.ಅಭಿಷೇಕ ಸಾವಿನ ತನಿಖೆಗೆ ಒತ್ತಾಯಿಸಿ ಹೋರಾಟ ನಡೆಸಿದ ಶೃಂಗೇರಿ, ಚಿಕ್ಕಮಗಳೂರಿನ 20ಕ್ಕೂ ಅಧಿಕ ವಿದ್ಯಾರ್ಥಿಗಳ ಮೇಲೆ ಪೋಲಿಸರು ನಡೆಸಿದ ದೌರ್ಜನ್ಯ ಖಂಡಿಸಿ ಸಿಂದಗಿಯಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಇಲ್ಲಿಯ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಟೈರ್ಗೆ ಬೆಂಕಿ ಹಚ್ಚುವ ಮೂಲಕ ಪೋಲಿಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ತಪ್ಪಿತಸ್ಥ ಅಧಿಕಾರಿಗಳಿಗೆ ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ ಎಂದರು.
ಈ ಸಂದರ್ಭದಲ್ಲಿ ಎಬಿವಿಪಿ ನಗರ ಘಟಕ ಕಾರ್ಯದರ್ಶಿ ಶಂಕ್ರಯ್ಯ ಹಿರೇಮಠ, ತಾಲ್ಲೂಕು ಸಂಚಾಲಕ ಭಾಗಣ್ಣ ಹೂಗಾರ ಮಾತನಾಡಿ, ಅಭಿಷೇಕ ಮೇಲೆ ಪೋಲಿಸರು ಸುಳ್ಳು ಪ್ರಕರಣ ದಾಖಲಿಸಿದ್ದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರು.
ಈ ಸಾವಿನ ತನಿಖೆ ನಡೆಸುವಂತೆ ಎಬಿವಿಪಿ ನೇತೃತ್ವದಲ್ಲಿ ಚಿಕ್ಕಮಗಳೂರ ಜಿಲ್ಲಾ ಕಾಲೇಜು ಬಂದ್ ಕರೆ ನೀಡಲಾಗಿತ್ತು. ಶಾಂತಿಯುತ ಪ್ರತಿಭಟನೆ ನಡೆದಿದ್ದರೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು ಹಿಗ್ಗಾಮುಗ್ಗ ಥಳಿಸಿ ಬಂಧಿಸಿದ್ದರು.
ಈ ಹಿನ್ನೆಲೆಯಲ್ಲಿ ಸಾವಿನ ತನಿಖೆ ನಡೆಸಲು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಪೋಲಿಸರು ದೌರ್ಜನ್ಯವೆಸಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಸಿಂದಗಿ ತಾಲ್ಲೂಕು ಎಬಿವಿಪಿ ಪ್ರಮುಖರಾದ ಅಪ್ಪುಗೌಡ ಪಾಟೀಲ, ರಫೀಕ ಅರಳಗುಂಡಗಿ, ಉಮಾಪತಿ ಹಿರೇಮಠ, ಮಂಜುನಾಥ ರಂಜಣಗಿ, ಶಿವೂ ತಳವಾರ, ಸುನೀಲಗೌಡ ಬಿರಾದಾರ, ಗುರುದೇವ ಆಲೂರ, ಮಲ್ಲೇಶಿ ತಳವಾರ, ಬಸವರಾಜ ಕುಂಬಾರ ಮುಂತಾದವರು ಪಾಲ್ಗೊಂಡಿದ್ದರು.
ಉಪತಹಶೀಲ್ದಾರ್ ಪ್ರತಿಭಟನಕಾರರಿಂದ ಮನವಿ ಪತ್ರ ಸ್ವೀಕರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.