ADVERTISEMENT

‘ಸಮಸ್ಯೆ ಉಲ್ಬಣ: ಸ್ಪಂದಿಸದ ಶಾಸಕರು’

​ಪ್ರಜಾವಾಣಿ ವಾರ್ತೆ
Published 30 ಮೇ 2016, 6:17 IST
Last Updated 30 ಮೇ 2016, 6:17 IST

ವಿಜಯಪುರ: ನಿರುದ್ಯೋಗಿ ಪದವೀಧರರು ಸೇರಿದಂತೆ ಯುವಕರ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದರೂ, ಯಾರೊಬ್ಬರೂ ಸ್ಪಂದಿಸುವ ನಿಟ್ಟಿನಲ್ಲಿ ಗಂಭೀರ ಪ್ರಯತ್ನ ನಡೆಸುತ್ತಿಲ್ಲ. ಪದವೀಧರ ಮತಕ್ಷೇತ್ರವನ್ನು ಪ್ರತಿನಿಧಿಸುವವರು ಸಹ ಸಮಸ್ಯೆಗಳ ಬಗ್ಗೆ ಸದನದಲ್ಲಿ ಧ್ವನಿ ಎತ್ತಿಲ್ಲ ಎಂದು ವಾಯುವ್ಯ ಪದವೀಧರ ಮತಕ್ಷೇತ್ರದ ಪಕ್ಷೇತರ ಅಭ್ಯರ್ಥಿ ರುಸ್ತುಂ ಇಟಗಿ ಹೇಳಿದರು.

ಪದವೀಧರರ ಸಮಸ್ಯೆಗಳನ್ನು ಸದನದಲ್ಲಿ ಚರ್ಚಿಸಿ, ಅವುಗಳ ಪರಿಹಾರಕ್ಕಾಗಿ ಶ್ರಮಿಸಬೇಕಾದ ಪದವೀಧರ ಮತಕ್ಷೇತ್ರದ ಚುನಾಯಿತ ಪ್ರತಿನಿಧಿಗಳು ತಮ್ಮ ಜವಾಬ್ದಾರಿ ಮರೆತಿದ್ದಾರೆ. ಇದರ ಪರಿಣಾಮವಾಗಿಯೇ ಪದವೀಧರರ ಸಮಸ್ಯೆಗಳು ಕಗ್ಗಂಟಾಗಿಯೇ ಉಳಿದಿವೆ ಎಂದು ಇಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಇಂದಿಗೂ ಸಾಕಷ್ಟು ಪ್ರತಿಭಾನ್ವಿತರಿಗೆ ಉದ್ಯೋಗ ದೊರಕಿಲ್ಲ. ರಾಜ್ಯದಲ್ಲಿ ಅಪಾರ ಸಂಖ್ಯೆಯಲ್ಲಿ ಹುದ್ದೆಗಳು ಖಾಲಿಯಿವೆ. ಈ ಹುದ್ದೆಗಳನ್ನು ಭರ್ತಿ ಮಾಡಿ ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸಬೇಕಾದ ರಾಜ್ಯ ಸರ್ಕಾರ ತನ್ನ ಜವಾಬ್ದಾರಿಯಿಂದ ವಿಮುಖವಾಗಿದೆ.

ಹುದ್ದೆಗಳ ಭರ್ತಿಗೆ ಹೋರಾಟ ಮಾಡಬೇಕಾದ ಪದವೀಧರ ಮತಕ್ಷೇತ್ರದ ಶಾಸಕರು ಮೌನವಾಗಿದ್ದಾರೆ. ಇದರಿಂದಾಗಿ ಸದನದಲ್ಲಿ ಪದವೀಧರರ ಬಗ್ಗೆ ಮಾತನಾಡುವವರ ಸಂಖ್ಯೆ ಅತ್ಯಂತ ಕಡಿಮೆಯಾಗಿದೆ ಎಂದರು.

‘ಬಿಇ ಸಿವಿಲ್, ಎಂಬಿಎ ಪದವೀಧರನಾದ ನಾನು ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗಬೇಕೆಂಬ ಉದ್ದೇಶದಿಂದ  ಸ್ಪರ್ಧೆ ಮಾಡಿದ್ದೇನೆ. ಮತದಾರರು ಈ ಬಾರಿ ನನಗೆ ಅವಕಾಶ ನೀಡಬೇಕು’ ಎಂದು ಕೋರಿದರು.

ನಿರುದ್ಯೋಗಿ ಪದವೀಧರರಿಗೆ ವಿಶೇಷ ಭತ್ಯೆ, ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಹೋರಾಟ ಸೇರಿದಂತೆ ಪದವೀಧರರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಸಂಕಲ್ಪದೊಂದಿಗೆ ಚುನಾವಣೆಗೆ ಸ್ಪರ್ಧಿಸಿದ್ದೇನೆ ಎಂದರು.

*
ನನಗೆ ಪದವೀಧರರ ಸಮಸ್ಯೆಗಳ ಬಗ್ಗೆ ಸಂಪೂರ್ಣ ಅರಿವಿದೆ. ಆರಂಭದಿಂದಲೂ ರೈತ ಚಳವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ
ರುಸ್ತುಂ ಇಟಗಿ
ಪಕ್ಷೇತರ ಅಭ್ಯರ್ಥಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT