ADVERTISEMENT

ಕೃಷ್ಣಾ ಅಚ್ಚುಕಟ್ಟು; ಗರಿಗೆದರಿದ ಕೃಷಿ ಚಟುವಟಿಕೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2017, 6:59 IST
Last Updated 7 ಜುಲೈ 2017, 6:59 IST
ಹುಣಸಗಿ ಪಟ್ಟಣದ ಹೊರವಲಯದಲ್ಲಿ ಭತ್ತ ಸಸಿ ಬೆಳೆಸಿರುವುದು
ಹುಣಸಗಿ ಪಟ್ಟಣದ ಹೊರವಲಯದಲ್ಲಿ ಭತ್ತ ಸಸಿ ಬೆಳೆಸಿರುವುದು   

ಹುಣಸಗಿ: ಮಹಾರಾಷ್ಟ್ರದ ಕೃಷ್ಣಾ ಕೊಳ್ಳದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಆಲಮಟ್ಟಿ ಜಲಾಶಯಕ್ಕೆ ನೀರು ಹರಿದು ಬರುತ್ತಿದೆ. ಇದು ಈ ಭಾಗದಲ್ಲಿ ಕೃಷಿ ಚಟುವಟಿಕೆ ಗರಿಗೆದರುವಂತೆ ಮಾಡಿದೆ. ಈ ಪ್ರದೇಶದ ಬಹುತೇಕ ರೈತರು ಹೊಲ ಹದ ಮಾಡುವಲ್ಲಿ ನಿರತರಾಗಿದ್ದಾರೆ.

‘ವಾರದ ಹಿಂದೆ ಅಲ್ಪ ಪ್ರಮಾಣದಲ್ಲಿ  ಮಳೆ ಬಂದಿದ್ದು ಬಿಟ್ಟರೆ ಇಲ್ಲಿ ಮತ್ತೆ ಮಳೆಯಾಗಿಲ್ಲ. ನಿತ್ಯವೂ ಹೆಚ್ಚಿನ ಪ್ರಮಾಣದಲ್ಲಿ ಗಾಳಿ ಬೀಸುತ್ತಿದೆ. ಆದರೆ ಮಹಾರಾಷ್ಟ್ರದ ಕೃಷ್ಣಾ ನದಿ ಪಾತ್ರದಲ್ಲಿ ಮಳೆಯಾಗುತ್ತಿರುವುದು ನಮಗೆ ಖುಷಿಯ ಸಂಗತಿಯಾಗಿದೆ’ ಎಂದು ರಾಜ್ಯ ರೈತ ಸಂಘದ ಮುಖಂಡರಾದ ಮಲ್ಲಿಕಾರ್ಜುನ ಸತ್ಯಂಪೇಟೆ, ಮಹಾದೇವಿ ಬೇವಿನಾಳಮಠ ಹೇಳುತ್ತಾರೆ.

‘ಆಲಮಟ್ಟಿ ಜಲಾಶಯದಿಂದ ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ಎಂದಿನಿಂದ ನೀರು ಹರಿಸಲಾಗುವುದು ಎಂಬುದನ್ನು ಎದುರು ನೋಡುತ್ತಿದ್ದೇವೆ’ ಎನ್ನುತ್ತಾರೆ ರೈತರು.

ADVERTISEMENT

ಭತ್ತದ ಸಸಿ: ಜುಲೈ ಅಂತ್ಯದ ವೇಳೆಗೆ ನಾಲೆಗಳಿಗೆ ನೀರು ಹರಿಸಬಹುದು ಎಂಬ ನಿರೀಕ್ಷೆಯಲ್ಲಿ ಬಹುತೇಕ ರೈತರು ತಮ್ಮ ಜಮೀನಿಗೆ ಬೇಕಾಗುವಷ್ಟು ಸೋನಾ ಮಸೂರಿ ಮತ್ತಿತರ ತಳಿಯ ಭತ್ತದ ಸಸಿಗಳನ್ನು ಬೆಳೆಸಿದ್ದಾರೆ.

ಶೀಘ್ರದಲ್ಲೇ ಐಸಿಸಿ ಸಭೆ ನಡೆಸಿ: ‘ಬಸವಸಾಗರ ಜಲಾಶಯಕ್ಕೆ ಒಳ ಹರಿವು ಪ್ರಾರಂಭವಾದ ಕೂಡಲೇ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ನಾಲೆಗೆ ನೀರು ಹರಿಸಬೇಕು. ಅಧಿಕಾರಿಗಳು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು’ ಎಂದು ಭಾರತೀಯ ಕಿಸಾನ ಸಂಘದ ಉತ್ತರ ಪ್ರಾಂತ ಕಾರ್ಯದರ್ಶಿ ರಾಘವೇಂದ್ರ  ಕಾಮನಟಗಿ, ಪ್ರಗತಿ ಪರ ರೈತರಾದ ರುದ್ರಗೌಡ ಗುಳಬಾಳ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.