ಯಾದಗಿರಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕೇಳಲಾಗುವ ಪ್ರಶ್ನೆಗಳು, ಗಮನ ಸೆಳೆಯುವ ಸೂಚನೆಗಳು, ಶೂನ್ಯ ವೇಳೆಯ ಪ್ರಶ್ನೆಗಳು ಇತ್ಯಾದಿ ವಿಷಯಗಳಿಗೆ ಸಕಾಲದಲ್ಲಿ ಸರ್ಕಾರಕ್ಕೆ ಉತ್ತರ ಸಲ್ಲಿಸಬೇಕಾಗಿರುವುದರಿಂದ ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಅಧೀನ ಸಿಬ್ಬಂದಿ ಅಧಿವೇಶನ ಮುಗಿಯುವವರೆಗೂ ಕಚೇರಿಯಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಸೂಚಿಸಿದ್ದಾರೆ.
‘ವಿಷಯದ ಗಂಭೀರತೆ ಅರಿತು ಸರ್ಕಾರದಿಂದ ಜಿಲ್ಲಾಧಿಕಾರಿ ಕಾರ್ಯಾಲಯ, ಜಿಲ್ಲಾ ಪಂಚಾಯಿತಿ ಕಾರ್ಯಾಲಯದಿಂದ ಕಾಲಕಾಲಕ್ಕೆ ಕಳುಹಿಸುವ ಪ್ರಶ್ನೆಗಳು, ಸೂಚನೆಗಳಿಗೆ ಸಕಾಲದಲ್ಲಿ ಉತ್ತರಗಳನ್ನು ಕನ್ನಡ ಭಾಷೆಯಲ್ಲಿ ಸಿದ್ಧಪಡಿಸಿ, ಕೂಡಲೇ ಜಿಲ್ಲಾಧಿಕಾರಿ ಕಾರ್ಯಾಲಯ, ಜಿಲ್ಲಾ ಪಂಚಾಯಿತಿ ಕಾರ್ಯಾಲಯಕ್ಕೆ ಸಲ್ಲಿಸಬೇಕು’ ಎಂದು ತಿಳಿಸಿದ್ದಾರೆ.
‘ಒಂದು ವೇಳೆ ಸಕಾಲದಲ್ಲಿ ಉತ್ತರವನ್ನು ಪರಿಶೀಲಿಸಿ ಸರ್ಕಾರಕ್ಕೆ ಸಲ್ಲಿಸುವಲ್ಲಿ ವಿಳಂಬವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ. ಅನಿವಾರ್ಯ ಸಂದರ್ಭ ಕೇಂದ್ರ ಸ್ಥಾನ ಬಿಡುವಂತಿದ್ದರೆ ಜಿಲ್ಲಾಧಿಕಾರಿ ಅಥವಾ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೆ ವಿಷಯ ತಂದು ಅನುಮತಿ ಪಡೆದುಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.