ADVERTISEMENT

ಮೆರವಣಿಗೆ: ವೆಂಕಟಪ್ಪ ನಾಯಕ ನಾಮಪತ್ರ

ಸುರಪುರ: ಇಬ್ಬರು ಪಕ್ಷೇತರರ ಉಮೇದುವಾರಿಕೆ, ಅಪಾರ ಬೆಂಬಲಿಗರೊಂದಿಗೆ ಬಂದ ನಾಯಕರು

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2018, 13:05 IST
Last Updated 24 ಏಪ್ರಿಲ್ 2018, 13:05 IST
ಸುರಪುರದಲ್ಲಿ ಶಾಸಕ ರಾಜಾ ವೆಂಕಟಪ್ಪನಾಯಕ ಸೋಮವಾರ ನಾಮಪತ್ರ ಸಲ್ಲಿಸಲು ಮೆರವಣಿಗೆಯಲ್ಲಿ ಬಂದರು
ಸುರಪುರದಲ್ಲಿ ಶಾಸಕ ರಾಜಾ ವೆಂಕಟಪ್ಪನಾಯಕ ಸೋಮವಾರ ನಾಮಪತ್ರ ಸಲ್ಲಿಸಲು ಮೆರವಣಿಗೆಯಲ್ಲಿ ಬಂದರು   

ಸುರಪುರ: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಶಾಸಕ ರಾಜಾ ವೆಂಕಟಪ್ಪ ನಾಯಕ ಸೋಮವಾರ ಚುನಾವಣಾಧಿಕಾರಿಗೆ 4 ಪ್ರತಿಗಳಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಪಕ್ಷೇತರ ಅಭ್ಯರ್ಥಿಗಳಿಗೆ ರಾಜಾ ಪಿಡ್ಡನಾಯಕ ಪ್ಯಾಪ್ಲಿ ಮತ್ತು ಗೋಪಾಲ ಚಳಿಗೆಪ್ಪ ಅವರೂ ಸೋಮವಾರ ನಾಮಪತ್ರ ಸಲ್ಲಿಸಿದರು.

ಇಲ್ಲಿಯ ತಹಶೀಲ್ದಾರ್ ಕಚೇರಿಗೆ ಬೆಳಗ್ಗೆ 11.30 ಗಂಟೆಗೆ ಬಂದು ನಾಮಪತ್ರ ಸಲ್ಲಿಸಿದ ರಾಜಾ ವೆಂಕಟಪ್ಪನಾಯಕ ನಂತರ ಕಾಂಗ್ರೆಸ್ ಕಚೇರಿ ವಸಂತ ಮಹಲ್‌ನಿಂದ ಪಕ್ಷದ ಸಾವಿರಾರು ಕಾರ್ಯರ್ತರೊಂದಿಗೆ ತೆರದ ವಾಹನದಲ್ಲಿ ಮೆರವಣಿಗೆ ಮೂಲಕ ತಹಶೀಲ್ದಾರ್‌ ಕಚೇರಿಗೆ ಬಂದು ಪುನಃ ನಾಮಪತ್ರ ಸಲ್ಲಿಸಿದರು.

ಮೆರವಣಿಗೆ ಹಿನ್ನಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್‌ ಕಲ್ಪಿಸಲಾಗಿತ್ತು. ಅಲ್ಲಲ್ಲಿ ಸೇನಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. ನಗರಸಭೆ ಬಳಿ ಕೆಲ ಸಮಯ ಸಂಚಾರ ಬಂದ್ ಮಾಡಲಾಗಿತ್ತು. ನಗರದ ಗಾಂಧಿವೃತ್ತ ಮತ್ತು ಬಸ್ ನಿಲ್ದಾಣದಲ್ಲಿ ಕೆಲ ಸಮಯ ಸಂಚಾರಕ್ಕೆ ಅಡಚಣೆ ಉಂಟಾಯಿತು.

ADVERTISEMENT

‘ಐದು ವರ್ಷಗಳ ಅವಧಿಯಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸ ಮಾಡಿದ್ದೇನೆ. ಮತದಾರರು ಮತ ನೀಡಲಿದ್ದಾರೆ’ ಎಂದರು.

ನಾಮಪತ್ರ ಸಲ್ಲಿಕೆಗೆ ಮುಂಚೆ ನಗರದ ವೇಣುಗೋಪಾಲಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಮರಿಗೌಡ ಹುಲಕಲ್, ರಾಜಶೇಖರಗೌಡ ವಜ್ಜಲ್, ಮಾಜಿ ಸಚಿವ ರಾಜಾ ಮದನಗೋಪಾಲ ನಾಯಕ, ರವಿಚಂದ್ರ ಸಾಹು ಇದ್ದರು.

ಜಿಲ್ಲೆಯಲ್ಲಿ 20 ನಾಮಪತ್ರ ಸಲ್ಲಿಕೆ

ಯಾದಗಿರಿ: ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಸೋಮವಾರ ಒಟ್ಟು 20 ನಾಮಪತ್ರಗಳು ಸಲ್ಲಿಕೆಯಾಗಿವೆ.

ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ರಾಜಾ ವೆಂಕಟಪ್ಪ ನಾಯಕ ಕಾಂಗ್ರೆಸ್‌ನಿಂದ ನಾಲ್ಕು ನಾಮಪತ್ರ ಸಲ್ಲಿಸಿದರು.

ಪಕ್ಷೇತರ ಅಭ್ಯರ್ಥಿಗಳಾಗಿ ಗೋಪಾಲ ಹಾಗೂ ರಾಜಾ ಪಿಡ್ಡ ನಾಯ್ಕ ಅವರು ನಾಮಪತ್ರ ಸಲ್ಲಿಸಿದರು. ಶಹಾಪುರ ವಿಧಾನಸಭಾ ಕ್ಷೇತ್ರದಲ್ಲಿ ಶರಣಗೌಡ ಪೊಲೀಸ್ ಬಿರಾದಾರ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರೆ, ಗುರುಲಿಂಗಪ್ಪ ಗೌಡ ಅವರು ಬಿಜೆಪಿಯಿಂದ ಎರಡು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ಯಾದಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ರಿಪಬ್ಲಿಕನ್ ಪಕ್ಷದಿಂದ ಈರಪ್ಪ ಅವರು ನಾಮಪತ್ರ ಸಲ್ಲಿಸಿದರು. ಜೆಡಿಎಸ್‌ನಿಂದ ಅಬ್ದುಲ್ ನಬಿ ಎರಡು ನಾಮಪತ್ರಗಳನ್ನು ಸಲ್ಲಿಸಿದರೆ, ಇದೇ ಪಕ್ಷದಿಂದ ಮೊಹಮ್ಮದ್ ಆರೀಫ್ ಕಾಡ್ಲೂರ ಅವರೂ ನಾಮಪತ್ರ ಸಲ್ಲಿಸಿದರು. ವೈಜನಾಥ ಪಾಟೀಲ್ ಸ್ವರಾಜ್ ಇಂಡಿಯಾ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ.

ಎಂ.ಬಸವರಾಜ ಪಡುಕೋಟಿ ಅವರು ಆಲ್ ಇಂಡಿಯಾ ಮಹಿಳಾ ಎಂಪವರ್‌ಮೆಂಟ್ ಪಾರ್ಟಿಯಿಂದ ನಾಮಪತ್ರ ಸಲ್ಲಿಸಿದರು. ಗುರುಮಠಕಲ್ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ನಾಗನಗೌಡ ಮತ್ತು ಶರಣಗೌಡ ಅವರು ತಲಾ ಒಂದೊಂದು ನಾಮಪತ್ರ ಸಲ್ಲಿಸಿದ್ದಾರೆ. ಸತ್ಯನಾರಾಯಣ ಯಾದವ ಅವರು ಸಮಾಜವಾದಿ ಪಕ್ಷದಿಂದ, ಪಾಪಣ್ಣ ಅವರು ಹಿಂದೂಸ್ತಾನ ಜನತಾ ಪಕ್ಷದಿಂದ, ಭಾಸ್ಕರ ಅವರು ಭಾರತೀಯ ಪ್ರಜೆಗಳ ಕಲ್ಯಾಣ ಪಕ್ಷ (ಬಿಪಿಕೆಪಿ)ದಿಂದ ನಾಮಪತ್ರ ಸಲ್ಲಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಜೆ.ಮಂಜುನಾಥ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.