ADVERTISEMENT

‘ಯೋಗೀಶಗೌಡ ಕೊಲೆ ಪ್ರಕರಣ ಸಿಬಿಐಗೆ ವಹಿಸಿ’

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2017, 9:52 IST
Last Updated 28 ನವೆಂಬರ್ 2017, 9:52 IST

ಯಾದಗಿರಿ: ‘ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಸಚಿವ ವಿನಯ ಕುಲಕರ್ಣಿ ಕೈವಾಡವಿದ್ದು, ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ಸತ್ಯ ಬಹಿರಂಗಗೊಳಿಸಬೇಕು’ ಎಂದು ಜಿಲ್ಲಾ ಬಿಜೆಪಿ ಕಾರ್ಯಕರ್ತರು ಮಿನಿ ವಿಧಾನಸೌಧದ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.

‘ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ವಿನಯ ಕುಲಕರ್ಣಿ ಅವರಿಂದ ರಾಜೀನಾಮೆ ಪಡೆಯಬೇಕು. ಕೊಲೆ ಪ್ರಕರಣಗಳಲ್ಲಿ ಭಾಗಿಯಾದ ವಿನಯ ಕುಲಕರ್ಣಿ ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಮಾತನಾಡಿ, ‘ಯೋಗೀಶಗೌಡ ಹತ್ಯೆ ಪ್ರಕರಣದಲ್ಲಿ ಸಚಿವ ವಿನಯ ಕುಲಕರ್ಣಿ ಶಾಮೀಲಾಗಿದ್ದಾರೆ ಎಂಬುದಕ್ಕೆ ದಿನಕ್ಕೊಂದು ಸಾಕ್ಷ್ಯಗಳು ಸಿಗುತ್ತಿವೆ. ಅವರ ಕುಟುಂಬಕ್ಕೆ ನೆರವಾದ ವಕೀಲರಿಗೆ ಸಚಿವರು ನೇರವಾಗಿ ಬೆದರಿಕೆ ಹಾಕಿದ ವಿಷಯವೂ ಬಹಿರಂಗವಾಗಿದೆ’ ಎಂದು ಆರೋಪಿಸಿದರು.

ADVERTISEMENT

‘ಈ ಪ್ರಕರಣದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮೋಹನ ಶಾಂತನಗೌಡರ್ ಅವರೂ ಸಚಿವರೊಂದಿಗೆ ವೇದಿಕೆ ಹಂಚಿಕೊಳ್ಳಲು ನಿರಾಕರಿಸಿದ್ದಾರೆ. ಇಷ್ಟಾದರೂ ಮುಖ್ಯಮಂತ್ರಿ ಸಚಿವರನ್ನು ಸಮರ್ಥಿಸಿಕೊಳ್ಳುತ್ತಿರುವುದನ್ನು ಗಮನಿಸಿದಾಗ ಅವರು ಆರೋಪಿಗಳಿಗೆ ರಕ್ಷಣೆ ನೀಡುತ್ತಿರುವುದು ಸ್ಪಷ್ಟವಾಗಿದೆ’ ಎಂದು ಕಿಡಿ ಕಾರಿದರು.

ಶರಣಗೌಡ ಬಾಡಿಯಾಳ ಮಾತನಾಡಿ, ‘ಸಚಿವ ವಿನಯ ಕುಲಕರ್ಣಿ ಅವರ ರಾಜೀನಾಮೆ ಪಡೆಯದ ಸಿಎಂ ಸಿದ್ದರಾಮಯ್ಯ ಅವರ ಕಾರ್ಯವೈಖರಿ ಸರಿಯಿಲ್ಲ. ಮುಖ್ಯಮಂತ್ರಿ ಅವರಿಗೆ ಕಿಂಚಿತ್ತಾದರೂ ಜವಾಬ್ದಾರಿ ಇದ್ದರೆ ತಕ್ಷಣ ವಿನಯ ಕುಲಕರ್ಣಿ ಅವರನ್ನು ಸಂಪುಟದಿಂದ ಕೈಬಿಡಬೇಕು’ ಎಂದು ಆಗ್ರಹಿಸಿದರು.

ಕೇಂದ್ರ ಆಹಾರ ನಿಗಮದ ಸದಸ್ಯ ಖಂಡಪ್ಪ ದಾಸನ ಮಾತನಾಡಿ, ‘ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರ ನಿರ್ಮೂಲನೆಗೆ ಕಂಕಣ ತೊಟ್ಟಿದ್ದಾರೆ. ಆದರೆ, ರಾಜ್ಯ ಕಾಂಗ್ರೆಸ್ ಸಚಿವರು ಭ್ರಷ್ಟಾಚಾರದಲ್ಲಿ, ಕೊಲೆ ಸುಲಿಗೆಯಲ್ಲಿ ಕಾಲ ಹರಣ ಮಾಡುತ್ತಿದ್ದಾರೆ’ ಎಂದು ದೂರಿದರು.

ಬಿಜೆಪಿ ಮುಖಂಡರಾದ ವೀರ ಬಸವಂತರೆಡ್ಡಿ ಮುದ್ನಾಳ, ವೆಂಕಟರೆಡ್ಡಿ ಗೌಡ ಮುದ್ನಾಳ, ಡಾ.ಭೀಮಣ್ಣ ಮೇಟಿ, ಸಾಯಿಬಣ್ಣ ಬೋರಬಂಡಾ, ಸಿದ್ದಣಗೌಡ ಕಾಡಂನೋರ್, ದೇವಿಂದ್ರನಾಥ, ಮಕ್ಕಬುಲ್ ಪಟೇಲ್, ಹುಸೇನ್ ಬಾಷಾ ಕುರಕುಂದಾ, ಸ್ವಾಮಿದೇವ ದಾಸನಕೇರಿ, ಗೋಪಾಲ ದಾಸನಕೇರಿ, ಪರಶುರಾಮ ಕುರಕುಂದಿ, ವೀಣಾ ಮೋದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.