ADVERTISEMENT

ವಿಜಯಪುರ ಬಾಲಕಿ ಅತ್ಯಾಚಾರ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2017, 5:55 IST
Last Updated 22 ಡಿಸೆಂಬರ್ 2017, 5:55 IST
ವಿಜಯಪುರದಲ್ಲಿ ವಿದ್ಯಾರ್ಥಿನಿ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವುದನ್ನು ಖಂಡಿಸಿ ಸುರಪುರದಲ್ಲಿ ಗುರುವಾರ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು
ವಿಜಯಪುರದಲ್ಲಿ ವಿದ್ಯಾರ್ಥಿನಿ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವುದನ್ನು ಖಂಡಿಸಿ ಸುರಪುರದಲ್ಲಿ ಗುರುವಾರ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು   

ಸುರಪುರ: ವಿಜಯಪುರದ ಶಾಲಾ ಬಾಲಕಿಯ ಮೇಲೆ ಕಿಡಿಗೇಡಿಗಳು ಅತ್ಯಾಚಾರ ನಡೆಸಿ ಹತ್ಯೆಗೈದಿರುವ ಘಟನೆ ಖಂಡಿಸಿ ನಗರದ ತಹಶೀಲ್ದಾರ್‌ ಕಚೇರಿ ಎದುರು ಗುರುವಾರ ಎಬಿವಿಪಿ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡಸಿದರು.

ವೇಣುಗೋಪಾಲ ಸ್ವಾಮಿ ದೇವಸ್ಥಾನದ ಆವರಣದಿಂದ ಗಾಂಧಿವೃತ್ತದ ಮೂಲಕ ತಹಶೀಲ್ದಾರ್‌ ಕಚೇರಿವರೆಗೆ ಮೆರವಣಿಗೆ ನಡೆಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿದರು.

ಮುಖಂಡರು ಮಾತನಾಡಿ, ‘ವಿಜಯಪುರ ನಗರದ ಶಾಲಾ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಹತ್ಯೆ ಮಾಡಿರುವುದು ನಾಚಿಕೆಗೇಡಿನ ಸಂಗತಿ. ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

‘ಇಂತಹ ಘಟನೆಗಳು ರಾಜ್ಯದಲ್ಲಿ ಮೇಲಿಂದ ಮೇಲೆ ಮರುಕಳಿಸುತ್ತಿವೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ’ ಎಂದು ಆರೋಪಿಸಿದರು.

‘ವಿಜಯಪುರದಲ್ಲಿ ಘಟನೆ ಖಂಡಿಸಿ ಪ್ರತಿಭಟನೆ ನಡೆಸಿದ್ದವರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಇದಕ್ಕೆ ಪೊಲೀಸ್ ಇಲಾಖೆಯೇ ಉತ್ತರಿಸಬೇಕು’ ಎಂದು ಆಗ್ರಹಿಸಿದರು. ರಾಜ್ಯಪಾಲ ಮತ್ತು ಗೃಹ ಸಚಿವರಿಗೆ ಬರೆದ ಮನವಿಯನ್ನು ಗ್ರೇಡ್-2 ತಹಶೀಲ್ದಾರ್ ಸೋಫಿಯಾ ಸುಲ್ತಾನ ಅವರಿಗೆ ಸಲ್ಲಿಸಿದರು.

ಲಕ್ಷ್ಮೀಕಾಂತ ದೇವರಗೋನಾಲ, ಶರಣು ನಾಯಕ, ಸಂದೀಪ ಜೋಷಿ, ಹರೀಶ ತ್ರಿವೇದಿ, ಹಯ್ಯಾಳಪ್ಪ ಹಾದಿಮನಿ, ನಾಗರಾಜ ಮಕಾಶಿ, ದೇವು ಕಬಾಡಗೇರಾ, ಶರಣುನಾಯಕ ಡೊಣ್ಣೀಗೇರಾ, ಶರಣು ತಮ್ಮಾಪುರ, ಗುರುನಾಥರೆಡ್ಡಿ ಶೀಲವಂತ, ಮಾನಪ್ಪ ಚನ್ನೂರ, ಗಂಗಾಧರನಾಯಕ, ಹೀನಾಬೇಗಂ, ರಾಜೇಶ್ವರಿ, ಸವಿತಾ, ಗದ್ದೆಮ್ಮ, ರಮ್ಯಾ, ಪದ್ಮಾ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.