ಕಲಬುರ್ಗಿ: ‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಮಹದಾಯಿ ವಿವಾದ ಪರಿಹರಿಸುತ್ತೇವೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದರು.
‘ಕರ್ನಾಟಕದ ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದರೆ ಮಹದಾಯಿ ವಿವಾದಕ್ಕೆ ಪರಿಹಾರ ದೊರೆಯುತ್ತಿತ್ತು. ಈಗಲೂ ಕೆಲವರ ನಡವಳಿಕೆಯಲ್ಲಿ ಸಮಸ್ಯೆ ಇದೆ. ಹೀಗಾಗಿ ಅದು ಸಾಧ್ಯವಾಗಲಿಲ್ಲ’ ಎಂದರು.
‘ರಾಜ್ಯದ ಜನ ನಮ್ಮ ಮೇಲೆ ವಿಶ್ವಾಸವಿಟ್ಟು ಅಧಿಕಾರಕ್ಕೆ ತರಲಿ’ ಎಂದು ಅವರು ಮನವಿ ಮಾಡಿದರು.
ಸಚಿವ ಅನಂತಕುಮಾರ್ ಹೆಗಡೆ ಅವರ ಹೇಳಿಕೆಗೆ ನಮ್ಮ ಸಹಮತ ಇಲ್ಲ: ‘ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರ ಹೇಳಿಕೆಗೆ ನಮ್ಮ ಸಹಮತ ಇಲ್ಲ. ಅವರ ಹೇಳಿಕೆಯಿಂದ ಪಕ್ಷಕ್ಕೆ ಹಾನಿಯಾಗುತ್ತಿದೆ ಎಂಬ ಚಿಂತೆ ನಿಮಗೇಕೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಾಧ್ಯಮದವರನ್ನು ಪ್ರಶ್ನಿಸಿದರು.
‘ಹಾನಿ–ಲಾಭದ ಲೆಕ್ಕಾಚಾರವನ್ನು ಪಕ್ಷ ನೋಡಿಕೊಳ್ಳುತ್ತದೆ. ನೀವು ಚಿಂತೆ ಮಾಡಬೇಡಿ’ ಎಂದು ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಪ್ರಶ್ನಿಸಿದ ಪತ್ರಕರ್ತರಿಗೆ ಅವರು ತಿರುಗೇಟು ನೀಡಿದರು.
‘ತ್ರಿವಳಿ ತಲಾಖ್ ಕಾಯ್ದೆ ಜಾರಿಗೆ ಮುಸ್ಲಿಂ ಸಮುದಾಯದ ಬಹುಪಾಲು ಮಹಿಳೆಯರ ಸಮ್ಮತಿ ಇದ್ದು, ಅದನ್ನು ಜಾರಿಗೊಳಿಸುತ್ತೇವೆ. ಮಹಿಳೆಯರಿಗೆ ಸಮಾನ ಅಧಿಕಾರ ಮತ್ತು ಅವರ ಹಕ್ಕುಗಳ ರಕ್ಷಣೆಗೆ ನಾವು ಬದ್ಧ’ ಎಂದರು.
‘ಬಿಜೆಪಿಯಲ್ಲಿ ಕಾರ್ಯಕರ್ತರೂ ಮುಖ್ಯಮಂತ್ರಿ ಆಗಬಹುದು. ಅದಕ್ಕೆ ದಲಿತರೂ ಹೊರತಾಗಿಲ್ಲ’ ಎಂದು ದಲಿತ ಮುಖ್ಯಮಂತ್ರಿ ಕುರಿತ ಪ್ರಶ್ನೆಗೆ ಚುಟುಕಾಗಿ ಪ್ರತಿಕ್ರಿಯಿಸಿದರು.
‘ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯೇ ಅಭ್ಯರ್ಥಿಗಳನ್ನು ಘೋಷಿಸುತ್ತದೆ. ಈಶ್ವರಪ್ಪ ಅವರಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡುವುದು ಬಿಡುವುದು ನನ್ನ ಮೇಲೆ ಬಿಡಿ, ನಮ್ಮ ಪಕ್ಷದವರ ಹಿತ ಕಾಯುವುದು ನಮ್ಮ ಕೆಲಸ. ಅದಕ್ಕೆ ನೀವ್ಯಾಕೆ ಚಿಂತೆ ಮಾಡ್ತೀರಿ’ ಎಂದು ಪ್ರಶ್ನಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.