ADVERTISEMENT

ಶ್ರೀಶೈಲ ಶ್ರೀಗಳಿಗೆ ಘೇರಾವ್

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2018, 19:30 IST
Last Updated 20 ಏಪ್ರಿಲ್ 2018, 19:30 IST
ಶ್ರೀಶೈಲ ಶ್ರೀ
ಶ್ರೀಶೈಲ ಶ್ರೀ   

ವಿಜಯಪುರ: ಬಬಲೇಶ್ವರ ವಿಧಾನಸಭಾ ಕ್ಷೇತ್ರದ ಕನಮಡಿಯಲ್ಲಿ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಂದಿದ್ದ, ಶ್ರೀಶೈಲ ಪೀಠದ ಚನ್ನಸಿದ್ಧರಾಮ ಪಂಡಿತಾರಾಧ್ಯ ಶ್ರೀಗಳಿಗೆ ಕಾಂಗ್ರೆಸ್‌ ಕಾರ್ಯಕರ್ತರು ಶುಕ್ರವಾರ ರಾತ್ರಿ ಘೇರಾವ್‌ ಹಾಕಿದ್ದಾರೆ.

ಪ್ರವಚನ ನೀಡಲೆಂದು ತಮ್ಮ ವಾಹನದಲ್ಲಿ ಬಂದ ಸ್ವಾಮೀಜಿಯನ್ನು ಊರಿನ ಹೊರಗೇ ತಡೆದ ಕಾರ್ಯಕರ್ತರು, ‘ಶ್ರೀಗಳ ಬಗ್ಗೆ ನಮಗೆ ಅಪಾರ ಗೌರವವಿದೆ. ಆದರೆ, ಅವರು ಬಿಜೆಪಿ ಅಭ್ಯರ್ಥಿ ಪರವಾಗಿ ನಮ್ಮೂರಿನಲ್ಲಿ ಮತ ಕೇಳಲಿದ್ದಾರೆ. ಅದಕ್ಕೆ ನಾವು ಅವಕಾಶ ಮಾಡಿಕೊಡುವುದಿಲ್ಲ’ ಎಂದರು. ಸ್ವಾಮೀಜಿ ವಿರುದ್ಧ ಘೋಷಣೆ ಕೂಗಿದರು.

‘ಅನುಮತಿ ಪಡೆಯದೆ, ಪಾದಪೂಜೆಯ ನೆಪದಲ್ಲಿ ಬಿಜೆಪಿ ಪರ ಪ್ರಚಾರಕ್ಕೆ ಆಗಮಿಸಿದ ಶ್ರೀಶೈಲ ಶ್ರೀಗಳು ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ. ತಕ್ಷಣವೇ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದೂ ಪ್ರತಿಭಟನಾಕಾರರು ಆಗ್ರಹಿಸಿದರು.

ADVERTISEMENT

ಈ ವಿಷಯ ತಿಳಿದ ತಿಕೋಟಾ ಪೊಲೀಸರು ಸ್ಥಳಕ್ಕೆ ತೆರಳಿ, ಉದ್ರಿಕ್ತ ಕಾಂಗ್ರೆಸ್‌ ಕಾರ್ಯಕರ್ತರನ್ನು ಚದುರಿಸಿದರು. ಆನಂತರ ಸ್ವಾಮೀಜಿ, ನಿಗದಿಯಾದ ಕಾರ್ಯಕ್ರಮದಲ್ಲಿ ಭಾಗವಹಿಸಿದರು ಎಂದು ಗ್ರಾಮದ ಪ್ರತ್ಯಕ್ಷದರ್ಶಿಗಳು ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.